ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಡಿ.ಕೆ. ಶಿವಕುಮಾರ ಹಾಗೂ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಡಾ. ಜಿ. ಪರಮೇಶ್ವರ ಅವರಿಗೆ ಶುಭಾಶಯ ಕೋರಿ ಗದಗ ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು.
ನಗರಸಭೆ ಮುಂಭಾಗದಲ್ಲಿರುವ ವಾಯ್.ಎಚ್. ಪರಾಪೂರ ಫೈನಾನ್ಸ್ ಕಚೇರಿ ಎದುರು ಸಿಬ್ಬಂದಿ ಹಾಗೂ ಅಭಿಮಾನಿಗಳಿಂದ ಸಂಭ್ರಮಾಚರಣೆ ಆಯೋಜಿಸಲಾಗಿತ್ತು. ಈ ವೇಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹಾಗೂ ದಲಿತ ಸಮುದಾಯದ ಹಿರಿಯ ನಾಯಕ ಡಾ. ಜಿ. ಪರಮೇಶ್ವರ ಪರ ಜಯಘೋಷಣೆಗಳು ಮೊಳಗಿದವು.
ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಯುವ ಮುಖಂಡ ವಿನಾಯಕ ಪರಾಪೂರ, “ರಾಜ್ಯದ ಚುಕ್ಕಾಣೆಯನ್ನು ಡಿ.ಕೆ. ಶಿವಕುಮಾರ ಅವರು ಹಿಡಿದಿರುವುದು ಕಾಂಗ್ರೆಸ್ ಕಾರ್ಯಕರ್ತರಿಗೆ ಹೊಸ ಉತ್ಸಾಹ ತಂದಿದೆ. ಪಕ್ಷ ಸಂಕಷ್ಟದಲ್ಲಿದ್ದ ಪ್ರತಿಯೊಂದು ಸಂದರ್ಭದಲ್ಲೂ ಅವರು ನಿಷ್ಠೆಯಿಂದ ಪಕ್ಷದ ಪರ ನಿಂತಿದ್ದರು. ಅವರ ಪರಿಶ್ರಮ ಹಾಗೂ ಪಕ್ಷನಿಷ್ಠೆಗೆ ಹೈಕಮಾಂಡ್ ಸೂಕ್ತ ಗೌರವ ನೀಡಿದೆ” ಎಂದು ಹೇಳಿದರು.
“ಈ ಹಿಂದೆ ಸಿದ್ದರಾಮಯ್ಯ ಅವರು ಜನಪರ ಯೋಜನೆಗಳ ಮೂಲಕ ಜನಮನ ಗೆದ್ದಿದ್ದರು. ಇದೀಗ ಆ ಆಡಳಿತ ಪರಂಪರೆಯನ್ನು ಮುಂದುವರಿಸುವ ದೊಡ್ಡ ಜವಾಬ್ದಾರಿ ಡಿ.ಕೆ. ಶಿವಕುಮಾರ ಮೇಲಿದೆ. ಒಬ್ಬ ರೈತನ ಮಗ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೇರಿರುವುದು ಹೆಮ್ಮೆಯ ಸಂಗತಿ. ಬಡವರ ಪರ ಇನ್ನಷ್ಟು ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತರಲಿದ್ದಾರೆ ಎಂಬ ವಿಶ್ವಾಸವಿದೆ” ಎಂದು ಅಭಿಪ್ರಾಯಪಟ್ಟರು.
ಪಂಚ ಗ್ಯಾರಂಟಿ ಯೋಜನೆಗಳು ದೇಶದ ಗಮನ ಸೆಳೆದಿದ್ದು, ರಾಜ್ಯದ ಲಕ್ಷಾಂತರ ಕುಟುಂಬಗಳಿಗೆ ನೆರವಾಗಿವೆ. ಮೊದಲು ಟೀಕಿಸಿದ್ದವರೇ ಈಗ ಬೇರೆ ರಾಜ್ಯಗಳಲ್ಲಿ ಇದೇ ಮಾದರಿಯ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದ್ದಾರೆ ಎಂದು ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು.
ಈ ಸಂದರ್ಭದಲ್ಲಿ ವಿಶಾಲ ಗೋಶಲ್ಯನವರ, ಮಂಜುನಾಥ ಕೊರವರ, ಅರವಿಂದ ಗಾಗಡೆ, ಅಜಯ ಗೌಡರ, ಶ್ರೀನಿವಾಸ್ ಮುದರೆಡ್ಡಿ, ಸಿದ್ದಪ್ಪ ಗೋಶಲ್ಯನವರ, ಬಸಣ್ಣ ಹಾತಲಗೇರಿ, ಕೃಷ್ಣ ಹಡಪದ, ಬಸವರಾಜ, ಪವನ, ಸಿದ್ದಣ್ಣ ಗೋಶಲ್ಯನವರ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಡಿ.ಕೆ. ಶಿವಕುಮಾರ ಅವರು ಸಾಮಾನ್ಯ ಕಾರ್ಯಕರ್ತರಾಗಿ, ಕೆಪಿಸಿಸಿ ಅಧ್ಯಕ್ಷರಾಗಿ, ಉಪಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. ಸುಮಾರು 45 ವರ್ಷಗಳ ರಾಜಕೀಯ ಅನುಭವ ಹೊಂದಿರುವ ಅವರು ರಾಜ್ಯವನ್ನು ಮತ್ತಷ್ಟು ಅಭಿವೃದ್ಧಿಯತ್ತ ಕೊಂಡೊಯ್ಯುವ ವಿಶ್ವಾಸವಿದೆ.
ಪೃಥ್ವಿ ಕೆ. ಪರಾಪೂರ, ಕಾಂಗ್ರೆಸ್ ಯುವ ಮುಖಂಡ



