ವಿಜಯಸಾಕ್ಷಿ ಸುದ್ದಿ, ಧಾರವಾಡ
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಸಂಬಂಧಿಸಿದ್ದು ಎನ್ನಲಾದ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿಯ ತಂದೆ ಧಾರವಾಡ ಹೈಕೋರ್ಟ್ ಪೀಠಕ್ಕೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು. ತಮ್ಮ ಮಗಳನ್ನು ಮಾತನಾಡುವುದಕ್ಕೆ ಅವಕಾಶ ನೀಡಬೇಕು ಎಂದು ಕೋರಿದ್ದರು. ಆದರೆ, ಯುವತಿ ಇದಕ್ಕೆ ನಿರಾಕರಿಸಿದ್ದಾರೆ ಎನ್ನಲಾಗಿದೆ.
ಸಂತ್ರಸ್ಥ ಯುವತಿಯ ಅರ್ಜಿ ಪರಿಗಣಿಸಿದ ಹೈಕೋರ್ಟ್ ಪೀಠ, ಯುವತಿ ಇರುವ ಸ್ಥಳಕ್ಕೆ ತೆರಳಿ, ಪರಿಶೀಲನೆ ನಡೆಸಲು ರಿಜಿಸ್ಟ್ರಾರ್ ಜನರಲ್ಗೆ ಸೂಚಿಸಿತ್ತು. ಹೀಗಾಗಿ ರಿಜಿಸ್ಟ್ರಾರ್ ಜನರಲ್ ಶಿವಶಂಕರೇಗೌಡ ಅವರು ಜಂಟಿ ರಿಜಿಸ್ಟ್ರಾರ್ ವರಲಕ್ಷ್ಮೀ ಅವರೊಂದಿಗೆ ಸಿಡಿ ಲೇಡಿ ನಿವಾಸಕ್ಕೆ ಭೇಟಿ ನೀಡಿದ್ದರು.
ಈ ಸಂದರ್ಭದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ತಂದೆಯೊಂದಿಗೆ ಸಮಾಲೋಚಿಸಲು ಯುವತಿಗೆ ಅವಕಾಶ ನೀಡಲಾಯಿತು. ಆದರೆ, ಸಿಡಿ ಲೇಡಿ ಇದಕ್ಕೆ ಒಪ್ಪಿಗೆ ಸೂಚಿಸಿಲ್ಲ. ಅಲ್ಲದೇ, ಈ ಸಂದರ್ಭದಲ್ಲಿ ಅಕ್ರಮ ಬಂಧನದ ಆರೋಪವನ್ನು ಕೂಡ ಯುವತಿ ನಿರಾಕರಿಸಿದ್ದಾರೆ.
ಪರಿಸ್ಥಿತಿ ಎಲ್ಲವೂ ಸರಿ ಹೋದ ನಂತರ ನಾನು ತಂದೆಯ ಜೊತೆ ಮಾತನಾಡುತ್ತೇನೆ. ಈಗ ಮಾತನಾಡುವುದಿಲ್ಲ ಎಂದು ಕೋರ್ಟ್ ಗೆ ಮನವರಿಕೆ ಮಾಡಿದರು. ಅಲ್ಲದೇ, ಅಕ್ರಮ ಬಂಧನದ ಆರೋಪ ನಿರಾಕರಿಸಿದ ಹಿನ್ನೆಲೆಯ್ಲಿ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಹೈಕೋರ್ಟ್ ಪೀಠವು ಇತ್ಯರ್ಥಪಡಿಸಿತು.