ನವದೆಹಲಿ: ‘ನಮಗೆ ನಿಮ್ಮ ಮೇಲೆ ನಂಬಿಕೆಯಿದೆ, ದೇಶಕ್ಕೆ ನಿಮ್ಮ ಅಗತ್ಯವೂ ಇದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಜೆನ್-ಝಿ ಪೀಳಿಗೆಗೆ ಸಂದೇಶ ನೀಡಿದ್ದಾರೆ. ದೆಹಲಿಯ ಭಾರತೀಯ ತಂತ್ರಜ್ಞಾನ ಸಂಸ್ಥೆಯ 57ನೇ ಘಟಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಬದಲಾಗುತ್ತಿರುವ ತಂತ್ರಜ್ಞಾನ, ಜಾಗತಿಕ ಬೆಳವಣಿಗೆಗಳು ಹಾಗೂ ಭವಿಷ್ಯದ ಸವಾಲುಗಳನ್ನು ಎದುರಿಸಲು ಯುವಕರು ನಿರಂತರವಾಗಿ ಕಲಿಯುತ್ತಿರಬೇಕು ಎಂದು ಕರೆ ನೀಡಿದರು.
ಕಾಕ್ರೋಚ್ ಜನತಾ ಪಾರ್ಟಿ (CJP) ಪ್ರತಿಭಟನೆ ಬಳಿಕ ಜೆನ್-ಝಿಗಳನ್ನು ಉದ್ದೇಶಿಸಿ ಪ್ರಧಾನಿ ಮೋದಿ ನೀಡಿದ ಮೊದಲ ಭಾಷಣ ಇದಾಗಿದೆ. ಜಗತ್ತು ವೇಗವಾಗಿ ಬದಲಾಗುತ್ತಿದ್ದು, ತಂತ್ರಜ್ಞಾನ ಮತ್ತು ಜಾಗತಿಕ ಚಲನಶೀಲತೆಗಳು ಕೈಗಾರಿಕೆ ಹಾಗೂ ವೃತ್ತಿಗಳ ಸ್ವರೂಪವನ್ನು ಅಭೂತಪೂರ್ವ ವೇಗದಲ್ಲಿ ಬದಲಾಯಿಸುತ್ತಿವೆ. ಹೀಗಾಗಿ ವಿದ್ಯಾರ್ಥಿಗಳು ತಮ್ಮ ಕುತೂಹಲ ಹಾಗೂ ಕಲಿಯುವ ಆಸಕ್ತಿಯನ್ನು ಜೀವಂತವಾಗಿರಿಸಿಕೊಳ್ಳಬೇಕು ಎಂದು ಮೋದಿ ಹೇಳಿದರು.
ಮುಂದಿನ 20ರಿಂದ 30 ವರ್ಷಗಳಲ್ಲಿ ಜಗತ್ತು ಯಾವ ಸ್ವರೂಪ ಪಡೆಯಲಿದೆ ಎಂಬುದನ್ನು ಯಾರಿಗೂ ನಿಖರವಾಗಿ ಊಹಿಸಲು ಸಾಧ್ಯವಿಲ್ಲ. ಹೀಗಾಗಿ ಜೀವನದುದ್ದಕ್ಕೂ ಕಲಿಯುವ ಮನೋಭಾವ ಬೆಳೆಸಿಕೊಳ್ಳಬೇಕು. ಹೊಸದನ್ನು ಕಲಿಯುವ ಪ್ರವೃತ್ತಿಯನ್ನು ಮುಂದುವರಿಸುವವರು ಮಾತ್ರ ಬದಲಾಗುತ್ತಿರುವ ಜಗತ್ತಿನಲ್ಲಿ ಯಶಸ್ವಿಯಾಗಲು ಸಾಧ್ಯ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಪ್ರತಿಯೊಂದು ಪೀಳಿಗೆಯೂ ತನ್ನದೇ ಆದ ಸವಾಲುಗಳನ್ನು ಎದುರಿಸುತ್ತದೆ. ಮುಂದಿನ ಮೂರರಿಂದ ನಾಲ್ಕು ದಶಕಗಳಲ್ಲಿ ಜೆನ್-ಝಿ ಪೀಳಿಗೆ ತೆಗೆದುಕೊಳ್ಳುವ ನಿರ್ಧಾರಗಳು ಮತ್ತು ನೀಡುವ ಕೊಡುಗೆಗಳು ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ರೂಪಿಸುವ ಪ್ರಯಾಣದಲ್ಲಿ ನಿರ್ಣಾಯಕ ಪಾತ್ರ ವಹಿಸಲಿವೆ ಎಂದು ಮೋದಿ ಹೇಳಿದರು.
ತಮ್ಮ ವೃತ್ತಿಪರ ಹಾಗೂ ವೈಯಕ್ತಿಕ ಜೀವನದಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ರಾಷ್ಟ್ರೀಯ ಹಿತಾಸಕ್ತಿಯನ್ನು ಪರಿಗಣಿಸಬೇಕು. ತಮ್ಮ ಕೆಲಸ ದೇಶದ ಅಗತ್ಯಗಳನ್ನು ಪೂರೈಸಲು ಹೇಗೆ ಕೊಡುಗೆ ನೀಡಬಹುದು ಎಂಬುದನ್ನು ಪ್ರತಿಯೊಬ್ಬರೂ ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಪ್ರಧಾನಿ ಕರೆ ನೀಡಿದರು.
ಜಾಗತಿಕ ಕಾರ್ಯತಂತ್ರದ ಸಮೀಕರಣಗಳು ವೇಗವಾಗಿ ಬದಲಾಗುತ್ತಿವೆ. ಜಾಗತಿಕ ಶಕ್ತಿಯ ಸಮತೋಲನ ಕ್ಷಣಕ್ಷಣಕ್ಕೂ ಬದಲಾಗುತ್ತಿರುವ ಸಂದರ್ಭದಲ್ಲಿ, ಸ್ಪರ್ಧಾತ್ಮಕ ಜಗತ್ತಿಗೆ ಪ್ರವೇಶಿಸುತ್ತಿರುವ ಪದವೀಧರರು ತಂತ್ರಜ್ಞಾನ, ಕೈಗಾರಿಕೆ ಮತ್ತು ವೃತ್ತಿ ಕ್ಷೇತ್ರಗಳಲ್ಲಿ ಮಹತ್ವದ ಪರಿವರ್ತನೆಗಳನ್ನು ಎದುರಿಸಲಿದ್ದಾರೆ ಎಂದರು.
ಕೆಲಸದ ಸ್ವರೂಪ ಮುಂದಿನ ದಿನಗಳಲ್ಲಿ ಗಮನಾರ್ಹವಾಗಿ ಬದಲಾಗಬಹುದು. ಆದರೆ ನಿರಂತರ ಕಲಿಕೆಯೇ ಭವಿಷ್ಯದಲ್ಲೂ ಪ್ರಸ್ತುತವಾಗಿರಲು ಮತ್ತು ಯಶಸ್ಸು ಸಾಧಿಸಲು ಪ್ರಮುಖ ಅಸ್ತ್ರವಾಗಿರಲಿದೆ ಎಂದು ಮೋದಿ ಹೇಳಿದರು.
ಭಾರತದ ಯುವ ಪ್ರತಿಭೆಗಳಿಗೆ ಸಂಶೋಧನೆ ಮತ್ತು ನಾವೀನ್ಯತೆ ದೊಡ್ಡ ಅವಕಾಶಗಳನ್ನು ಒದಗಿಸುತ್ತಿವೆ. ದೇಶದ ವೈಜ್ಞಾನಿಕ ಮತ್ತು ತಾಂತ್ರಿಕ ಪ್ರಗತಿಗೆ ಯುವ ಪದವೀಧರರು ಕೊಡುಗೆ ನೀಡಬೇಕು ಎಂದು ಕರೆ ನೀಡಿದ ಪ್ರಧಾನಿ, ಪ್ರತಿಭಾವಂತ ವಿದ್ಯಾರ್ಥಿಗಳು ಸಂಶೋಧನೆಯನ್ನು ಮುಂದುವರಿಸಲು ಅವಕಾಶ ಕಲ್ಪಿಸುವ ಪ್ರಧಾನ ಮಂತ್ರಿಗಳ ಸಂಶೋಧನಾ ಫೆಲೋಶಿಪ್ ಸೇರಿದಂತೆ ಯುವ ಸಂಶೋಧಕರನ್ನು ಉತ್ತೇಜಿಸುವ ವಿವಿಧ ಸರ್ಕಾರಿ ಯೋಜನೆಗಳ ಬಗ್ಗೆಯೂ ಪ್ರಸ್ತಾಪಿಸಿದರು.



