ವಿಜಯಸಾಕ್ಷಿ ಸುದ್ದಿ, ಗದಗ: ನಿಮಿಷಾಂಬ ಜ್ಯೋತಿಶ್ರೀ ನಾಟ್ಯ ಅಕಾಡೆಮಿ ಹತ್ತು ವರ್ಷ ಪೂರೈಸಿರುವುದು ಹೆಮ್ಮೆಯ ಸಂಗತಿ. ಇದರ ಹಿಂದೆ ನಿರಂತರ ಪರಿಶ್ರಮ ಮತ್ತು ಸಾಧನೆಯಿದೆ ಎಂದು ಲೇಖಕಿ ಹಾಗೂ ಮುಂಡರಗಿಯ ಚೈತನ್ಯ ಶಿಕ್ಷಣ ಸಂಸ್ಥೆ ನಿರ್ದೇಶಕಿ ವೀಣಾ ಪಾಟೀಲ ಹೇಳಿದರು.
ನಗರದ ಪಂ. ಭೀಮಸೇನ ಜೋಶಿ ರಂಗಮಂದಿರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಇತ್ತೀಚೆಗೆ ನಡೆದ ಅಕಾಡೆಮಿಯ ದಶಕದ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳಲ್ಲಿರುವ ಆಸಕ್ತಿ ಹಾಗೂ ಪ್ರತಿಭೆಯನ್ನು ಗುರುತಿಸಿ ಪಾಲಕರು ಪ್ರೋತ್ಸಾಹಿಸಬೇಕು. ಚಿಕ್ಕ ವಯಸ್ಸಿನಲ್ಲಿ ಕಲಿಸುವ ವಿಷಯಗಳನ್ನು ಮಕ್ಕಳು ಸುಲಭವಾಗಿ ಗ್ರಹಿಸುತ್ತಾರೆ. ಅವರ ಆಸಕ್ತಿಗೆ ಅನುಗುಣವಾಗಿ ಕ್ಷೇತ್ರ ಆಯ್ಕೆ ಮಾಡಿಕೊಳ್ಳಲು ಪಾಲಕರು ಸಹಕಾರ ನೀಡಬೇಕು ಎಂದರು.
ಸ್ಪರ್ಶ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಡಾ. ಪ್ರಭಾ ದೇಸಾಯಿ ಮಾತನಾಡಿ, ಒಂದು ವಿದ್ಯಾರ್ಥಿಯಿಂದ ಆರಂಭವಾದ ಅಕಾಡೆಮಿಯಲ್ಲಿ ಇಂದು 150ಕ್ಕೂ ಹೆಚ್ಚು ಮಕ್ಕಳು ನೃತ್ಯ ಕಲಿಯುತ್ತಿರುವುದು ಗಮನಾರ್ಹ. ಮಕ್ಕಳಿಗೆ ಶಿಕ್ಷಣದ ಜತೆಗೆ ಸಂಸ್ಕಾರ ನೀಡಬೇಕು ಎಂದರು.
ಮುಳಗುಂದದ ವೈದ್ಯ ಡಾ. ಎಸ್.ಸಿ. ಚವಡಿ ಮಾತನಾಡಿ, ಕಲೆ ಮತ್ತು ಸಂಸ್ಕೃತಿ ಉಳಿಸುವ ಜವಾಬ್ದಾರಿ ಮಕ್ಕಳ ಮೇಲಿದೆ. ಜಿಲ್ಲೆಯ ವಿವಿಧೆಡೆ ಶಾಖೆಗಳನ್ನು ತೆರೆದು ಮಕ್ಕಳಿಗೆ ನೃತ್ಯ ತರಬೇತಿ ನೀಡುತ್ತಿರುವುದು ಶ್ಲಾಘನೀಯ ಎಂದರು.
ವಿಬಿಐ ನ್ಯೂಸ್ ಸಂಪಾದಕ ವೆಂಕಟೇಶ ಇಮರಾಪುರ ಮಾತನಾಡಿ, ವಿದುಷಿ ರಾಘವಿ ಜ್ಯೋತಿಶ್ರೀ ಅವರು ಹತ್ತು ವರ್ಷಗಳ ಹಿಂದೆ ಒಬ್ಬ ವಿದ್ಯಾರ್ಥಿಯಿಂದ ಆರಂಭಿಸಿದ ಅಕಾಡೆಮಿ ಇಂದು ಗದಗ, ಮುಂಡರಗಿ, ಅಣ್ಣಿಗೇರಿ ಹಾಗೂ ಗಜೇಂದ್ರಗಡ ತಾಲೂಕುಗಳಲ್ಲಿ ಏಳು ಶಾಖೆಗಳನ್ನು ಹೊಂದಿದೆ ಎಂದು ಹೇಳಿದರು.
ಕಾರ್ಯಾಧ್ಯಕ್ಷ ಫಕೀರಪ್ಪ ಹೆಬಸೂರ ಸೇರಿದಂತೆ ಗಣ್ಯರು ಮಾತನಾಡಿದರು. ಅಕಾಡೆಮಿ ನಿರ್ದೇಶಕಿ ವಿದುಷಿ ರಾಘವಿ ಜ್ಯೋತಿಶ್ರೀ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕಿ ನಾಗರತ್ನಾ ಕುಂಬಾರ ನಿರೂಪಿಸಿದರು. ಬಳಿಕ ಮಕ್ಕಳಿಂದ ನೃತ್ಯ ಪ್ರದರ್ಶನ ನಡೆಯಿತು.
ಮಕ್ಕಳ ಪ್ರತಿಭೆ ಮತ್ತು ಆಸಕ್ತಿಯನ್ನು ಗುರುತಿಸಿ ಸರಿಯಾದ ಪ್ರೋತ್ಸಾಹ ನೀಡಿದರೆ ಅವರು ಕಲಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಬಹುದು. ಪಾಲಕರ ಬೆಂಬಲವೇ ಮಕ್ಕಳ ಆತ್ಮವಿಶ್ವಾಸಕ್ಕೆ ದೊಡ್ಡ ಶಕ್ತಿ.
— ವೀಣಾ ಪಾಟೀಲ



