ವಿಜಯಸಾಕ್ಷಿ ಸುದ್ದಿ, ಮುಳಗುಂದ: ಪತ್ರಿಕಾರಂಗ ಮತ್ತು ವೈದ್ಯ ವೃತ್ತಿ ಸಮಾಜದ ಎರಡು ಕಣ್ಣುಗಳಿದ್ದಂತೆ. ಪತ್ರಕರ್ತರು ಸಮಾಜದ ಅಂಕುಡೊಂಕು ತಿದ್ದುವ ಕೆಲಸ ಮಾಡಿದರೆ, ವೈದ್ಯರು ಜೀವ ಉಳಿಸುವ ಮೂಲಕ ಸಮಾಜದ ಆರೋಗ್ಯ ಕಾಪಾಡುತ್ತಾರೆ ಎಂದು ಜನಶ್ರೀ ಟೈಮ್ಸ್ ವಾಹಿನಿಯ ಸಂಪಾದಕ ಆನಂದಯ್ಯ ವಿರಕ್ತಮಠ ಹೇಳಿದರು.
ಪಟ್ಟಣದ ಎಸ್ಜೆಜೆಎಂ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯ ಹಾಗೂ ಮುಳಗುಂದ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಬಾಲಲೀಲಾ ಮಹಾಂತ ಶಿವಯೋಗಿ ಕಲಾಭವನದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಹಾಗೂ ವೈದ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ನೀಲಗುಂದ ಗುದ್ನೇಶ್ವರಮಠದ ಪ್ರಭುಲಿಂಗ ದೇವರು ಮಾತನಾಡಿ, ಪ್ರಾಚೀನ ಕಾಲದಿಂದಲೂ ಸಂದೇಶ ರವಾನಿಸುವ ಮಾಧ್ಯಮವಾಗಿ ಪತ್ರಿಕಾರಂಗದ ಪರಿಕಲ್ಪನೆ ಇತ್ತು. ಇಂದಿನ ದಿನಗಳಲ್ಲಿ ಪತ್ರಿಕೆಗಳು ಸಮಾಜಕ್ಕೆ ಜ್ಞಾನ ನೀಡುವ ಪ್ರಮುಖ ಮಾಧ್ಯಮವಾಗಿದ್ದು, ಮಕ್ಕಳು ಪ್ರತಿದಿನ ಪತ್ರಿಕೆ ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮ ಉದ್ಘಾಟಿಸಿದ ಡಾ. ಎಸ್.ಸಿ. ಚವಡಿ ಮಾತನಾಡಿ, ಪತ್ರಕರ್ತರು ವಸ್ತುನಿಷ್ಠ ಮತ್ತು ನಿಖರ ಮಾಹಿತಿಯನ್ನು ಸಮಾಜಕ್ಕೆ ತಲುಪಿಸುವ ಜವಾಬ್ದಾರಿ ಹೊಂದಿದ್ದಾರೆ. ವೈದ್ಯರನ್ನು ಸಮಾಜ ದೇವರ ಸಮಾನವಾಗಿ ಕಾಣುವುದರಿಂದ ವೈದ್ಯರು ತಮ್ಮ ವೃತ್ತಿಯ ಘನತೆಯನ್ನು ಕಾಪಾಡಿಕೊಂಡು ಸೇವೆ ಸಲ್ಲಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂ.ಡಿ. ಬಟ್ಟೂರ ವಹಿಸಿದ್ದರು. ಶರಣು ದೊಡ್ಡೂರ, ಸಿಪಿಐ ಬಿ.ಜಿ. ಸುಬ್ಬಾಪೂರಮಠ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷ ರಾಜು ಹೆಬ್ಬಳ್ಳಿ, ಮುಳಗುಂದ ಘಟಕದ ಅಧ್ಯಕ್ಷ ಮಹೇಶ ಛಬ್ಬಿ, ಪ್ರಾಚಾರ್ಯ ಎ.ಎಂ. ಅಂಗಡಿ, ಮುತ್ತು ಕುರಬಗೌಳಿ, ವಿ.ಡಿ. ಕಣವಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
“ಪತ್ರಿಕಾರಂಗ ಸಮಾಜದ ಅಂಕುಡೊಂಕು ತಿದ್ದುವ ಶಕ್ತಿಯಾಗಿದ್ದರೆ, ವೈದ್ಯ ವೃತ್ತಿ ಜೀವ ಉಳಿಸುವ ಸೇವೆಯಾಗಿದೆ. ಇವೆರಡೂ ಸಮಾಜದ ಎರಡು ಕಣ್ಣುಗಳಂತೆ ಕಾರ್ಯನಿರ್ವಹಿಸುತ್ತವೆ.”
ಆನಂದಯ್ಯ ವಿರಕ್ತಮಠ, ಸಂಪಾದಕರು, ಜನಶ್ರೀ ಟೈಮ್ಸ್



