- ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿಕೆ
ವಿಜಯಸಾಕ್ಷಿ ಸುದ್ದಿ, ಗದಗ
ಆ.23ರಿಂದ 9ರಿಂದ12 ತರಗತಿಗಳನ್ನು ಆರಂಭಿಸಿದ್ದು, ಒಳ್ಳೆಯ ರೆಸ್ಪಾನ್ಸ್ ಸಿಕ್ಕಿದೆ. ಸೋಮವಾರ 6,7,8 ನೇ ತರಗತಿ ಪ್ರಾರಂಭವಾಗಲಿದ್ದು, ಹತ್ತು ದಿನ ನೋಡಿಕೊಂಡು ಪೂರ್ಣ ಪ್ರಮಾಣದಲ್ಲಿ ಶಾಲೆ ಆರಂಭಿಸುವ ಬಗ್ಗೆ ನಿರ್ಧರಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪೋಷಕರು ಶಾಲೆಗಳಿಗೆ ಬಂದು ಒಂದನೇ ತರಗತಿಯಿಂದಲೇ ಶಾಲೆ ಪ್ರಾರಂಭಿಸಿ ಎಂದು ಹೇಳುತ್ತಿದ್ದಾರೆ. ಆನ್ ಲೈನ್ ಕ್ಲಾಸ್ ನಿಂದ ನಮಗೆ ಸರಿಯಾದ ಶಿಕ್ಷಣ ಸಿಗುತ್ತಿಲ್ಲ. ಪೂರ್ಣ ಪ್ರಮಾಣದ ಶಾಲೆ ಆರಂಭಿಸಿ ಎಂದು ವಿದ್ಯಾರ್ಥಿಗಳೂ ಹೇಳುತ್ತಿದ್ದಾರೆ.
ಕೋವಿಡ್ ಮೂರನೇ ಅಲೆ ಬಗ್ಗೆ ಚರ್ಚೆ ಆಗುತ್ತಿದೆ. ಹೀಗಾಗಿ ಮಕ್ಕಳ ಆರೋಗ್ಯದ ಮೇಲೆ ಕಾಳಜಿ ವಹಿಸಲಾಗುತ್ತಿದೆ. ಮಕ್ಕಳ ಇಚ್ಚೆ ನೋಡಿಕೊಂಡೇ ಮುಂದಿನ ದಿನಗಳಲ್ಲಿ 1 ರಿಂದ 5 ರವರಗೆ ಶಾಲೆ ಆರಂಭ ಮಾಡುತ್ತೇವೆ ಎಂದು ಹೇಳಿದರು.
ಕೆಲವು ಖಾಸಗಿ ಶಾಲೆಗಳು ಹೆಚ್ಚಿನ ಶುಲ್ಕ ವಸೂಲಿ ಮಾಡುತ್ತಿವೆ. ಅರ್ಬನ್ ಏರಿಯಾಗಳಲ್ಲಿ ಖಾಸಗಿ ಶಾಲೆಗಳಿಂದ ಈ ರೀತಿ ಸಮಸ್ಯೆ ಆಗುತ್ತಿದೆ. ಆಂಧ್ರದಲ್ಲಿ ಈಗಾಗಲೇ ಕಾನೂನು ತಂದಿದ್ದಾರೆ. ಅದೇ ಮಾದರಿಯಲ್ಲಿ ಕಾನೂನು ರೂಪಿಸುವ ಬಗ್ಗೆ
ಸಿಎಂ ಜೊತೆ ಚರ್ಚೆ ಮಾಡಿ ನಿರ್ಧಾರ ಮಾಡುವುದಾಗಿ ಸಚಿವ ನಾಗೇಶ್ ತಿಳಿಸಿದರು.
ಶಾಲೆಗಳಲ್ಲಿ ಶೌಚಾಲಯಗಳು, ಕುಡಿಯುವ ನೀರಿನ ಸಮಸ್ಯೆ ಉದ್ಭವಿಸದಂತೆ ಎಚ್ಚರಿಕೆ ವಹಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.