ಬೆಂಗಳೂರು: ರಾಜ್ಯದಲ್ಲಿ ನಕಲಿ ಔಷಧಗಳ ತಯಾರಿಕೆ, ದಾಸ್ತಾನು, ಮಾರಾಟ ಮತ್ತು ಪೂರೈಕೆ ಜಾಲಕ್ಕೆ ಕಡಿವಾಣ ಹಾಕಲು ಕರ್ನಾಟಕ ಆರೋಗ್ಯ ಇಲಾಖೆ ಮಹತ್ವದ ಕ್ರಮ ಕೈಗೊಂಡಿದೆ. ನಕಲಿ ಔಷಧ ದಂಧೆಯ ಬಗ್ಗೆ ಖಚಿತ ಮಾಹಿತಿ ನೀಡುವ ಸಾರ್ವಜನಿಕರಿಗೆ ₹10 ಸಾವಿರದಿಂದ ₹50 ಸಾವಿರದವರೆಗೆ ನಗದು ಬಹುಮಾನ ನೀಡಲು ಇಲಾಖೆ ಮುಂದಾಗಿದೆ.
ನಕಲಿ ಔಷಧಗಳ ಜಾಲದ ಕುರಿತು ಸಾರ್ವಜನಿಕರಿಂದಲೇ ಮಾಹಿತಿ ಸಂಗ್ರಹಿಸಿ ಕಾರ್ಯಾಚರಣೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಅನುಮಾನಾಸ್ಪದ ಔಷಧಗಳು, ಮೆಡಿಕಲ್ ಸ್ಟೋರ್ಗಳು ಅಥವಾ ನಕಲಿ ಔಷಧಗಳ ತಯಾರಿಕೆ ಹಾಗೂ ಮಾರಾಟದ ಕುರಿತು ಮಾಹಿತಿ ಇದ್ದರೆ ಔಷಧ ನಿಯಂತ್ರಣ ಮಂಡಳಿಯ ಸಹಾಯವಾಣಿಗೆ ಮಾಹಿತಿ ನೀಡುವಂತೆ ಆರೋಗ್ಯ ಇಲಾಖೆ ಮನವಿ ಮಾಡಿದೆ.
ಸಾರ್ವಜನಿಕರಿಂದ ಲಭ್ಯವಾಗುವ ಮಾಹಿತಿಯನ್ನು ಆಧರಿಸಿ ಔಷಧ ನಿಯಂತ್ರಣ ಅಧಿಕಾರಿಗಳು ಪರಿಶೀಲನೆ ಮತ್ತು ತನಿಖೆ ನಡೆಸಲಿದ್ದಾರೆ. ಮಾಹಿತಿ ಖಚಿತವೆಂದು ದೃಢಪಟ್ಟರೆ ಸಂಬಂಧಪಟ್ಟವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ.
ಇತ್ತೀಚೆಗೆ ಬೆಂಗಳೂರಿನಲ್ಲಿ ಪತ್ತೆಯಾದ ನಕಲಿ ಔಷಧ ತಯಾರಿಕಾ ಜಾಲದ ತನಿಖೆ ಹಲವು ರಾಜ್ಯಗಳಿಗೆ ವಿಸ್ತರಿಸಿರುವ ಸಾಧ್ಯತೆ ಬೆಳಕಿಗೆ ಬಂದಿತ್ತು. ಬೆಂಗಳೂರಿನಿಂದ ಮುಂಬೈವರೆಗೆ ಸಂಪರ್ಕ ಹೊಂದಿರುವ ಅಂತರರಾಜ್ಯ ಜಾಲದ ಕುರಿತು ದೇಶದ ವಿವಿಧ ರಾಜ್ಯಗಳ ಔಷಧ ನಿಯಂತ್ರಣ ಅಧಿಕಾರಿಗಳು ಹಾಗೂ ಸ್ಟೇಟ್ ಲೈಸೆನ್ಸಿಂಗ್ ಅಥಾರಿಟಿಗಳಿಗೆ ಎಚ್ಚರಿಕೆ ನೀಡಲಾಗಿತ್ತು.
ರೋಗಿಗಳ ಆರೋಗ್ಯ ಮತ್ತು ಜೀವಕ್ಕೆ ಅಪಾಯ ಉಂಟುಮಾಡಬಹುದಾದ ನಕಲಿ ಔಷಧಗಳ ದಂಧೆ ವಿರುದ್ಧದ ಕಾರ್ಯಾಚರಣೆಗೆ ಸಾರ್ವಜನಿಕರ ಸಹಕಾರ ಅತ್ಯಂತ ಮುಖ್ಯ ಎಂದು ಇಲಾಖೆ ತಿಳಿಸಿದೆ. ಅನುಮಾನಾಸ್ಪದ ಔಷಧ ಅಥವಾ ದಂಧೆ ಕಂಡುಬಂದರೆ ಯಾವುದೇ ಕಾರಣಕ್ಕೂ ಮೌನವಾಗಿರದೆ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ.
ಮಾಹಿತಿ ನೀಡುವವರ ಗುರುತು ಹಾಗೂ ವೈಯಕ್ತಿಕ ವಿವರಗಳನ್ನು ಗೌಪ್ಯವಾಗಿಡುವ ವ್ಯವಸ್ಥೆಯನ್ನೂ ಕಲ್ಪಿಸಲು ಇಲಾಖೆ ಮುಂದಾಗಿದೆ. ನಕಲಿ ಔಷಧ ಜಾಲದ ವಿರುದ್ಧದ ಹೋರಾಟದಲ್ಲಿ ಜನರನ್ನೇ ಮಾಹಿತಿ ಜಾಲದ ಭಾಗವಾಗಿಸುವ ಮೂಲಕ ದಂಧೆಗೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದೆ.



