ವಿಜಯಸಾಕ್ಷಿ ಸುದ್ದಿ, ಕೋಲ್ಕತ್ತ : ಪಶ್ಚಿಮ ಬಂಗಾಳದಲ್ಲಿ ಮೂರನೇ ಬಾರಿಗೆ ಸಿಎಂ ಆಗಿ ಮಮತಾ ಬ್ಯಾನರ್ಜಿ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಇತ್ತೀಚೆಗೆ ನಡೆದಿದ್ದ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಭರ್ಜರಿಯಾಗಿ ಜಯ ಗಳಿಸಿದ್ದಾರೆ. ಮಮತಾ ಬ್ಯಾನರ್ಜಿ ಅವರ ಟಿಎಂಸಿ ಪಕ್ಷವು 210 ಕ್ಷೇತ್ರಗಳಲ್ಲಿ ಜಯಗಳಿಸುವ ಮೂಲಕ ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲು ಮುಂದಾಗಿದೆ.
ಹೀಗಾಗಿ ದೀದಿ ಬಂಗಾಳದಲ್ಲಿ ಹ್ಯಾಟ್ರಿಕ್ ಬಾರಿಸಿದ್ದಾರೆ. ಮಂಗಳವಾರ (ಮೇ. 5) ದಂದು ಮಮತಾ ಬ್ಯಾನರ್ಜಿ ಅವರು ರಾಜ್ಯಪಾಲ ಜಗದೀಪ್ ಧನ್ಕರ್ ಅವರನ್ನು ಭೇಟಿ ಮಾಡಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅಲ್ಲದೇ, ಇಂದು ರಾಜ ಭವನದಲ್ಲಿ ಬುಧವಾರ ಬೆಳಿಗ್ಗೆ 10.45ಕ್ಕೆ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ.
ಆದರೆ, ಚುನಾವಣೆಯಲ್ಲಿ ಮಮತಾ ಅವರು ಸೋಲು ಕಂಡಿದ್ದಾರೆ. ಪಕ್ಷ ಬಹುಮತ ಪಡೆದ ಕಾರಣ ಅವರು 3ನೇ ಬಾರಿಗೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮುಖ್ಯಮಂತ್ರಿಯಾದ ಆರು ತಿಂಗಳ ಒಳಗಾಗಿ ಅವರು ವಿಧಾನಸಭೆ ಅಥವಾ ಪರಿಷತ್ ಸದಸ್ಯರಾಗಿ ಆಯ್ಕೆಯಾಗಬೇಕು.
ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ 294 ಸ್ಥಾನಗಳಿವೆ. ಇವುಗಳಲ್ಲಿ ಸದ್ಯ 292 ಕ್ಷೇತ್ರಗಳಿಗೆ ಚುನಾವಣಎ ನಡೆದಿದೆ. ಕೋವಿಡ್ ಕಾರಣದಿಂದಾಗಿ ಅಭ್ಯರ್ಥಿಗಳು ಮೃತಪಟ್ಟ ಕಾರಣ ಎರಡು ಕ್ಷೇತ್ರದ ಚುನಾವಣೆ ಮುಂದೂಡಲಾಗಿದೆ. ನಂದಿಗ್ರಾಮ ಕ್ಷೇತ್ರದಲ್ಲಿ ಚುನಾವಣಾ ಕಣಕ್ಕಿಳಿದಿದ್ದ ಮಮತಾ ಬ್ಯಾನರ್ಜಿ ಬಿಜೆಪಿಯ ಸುವೇಂದು ಅಧಿಕಾರಿ ವಿರುದ್ದ ಸೋಲು ಕಂಡಿದ್ದಾರೆ. ಈ ಕ್ಷೇತ್ರಗಳಲ್ಲಿ ಮಮತಾ ಬ್ಯಾನರ್ಜಿ ಸ್ಪರ್ಧೆ ಮಾಡುವ ಸಾಧ್ಯತೆ ದಟ್ಟವಾಗಿದೆ.
ಟಿಎಂಸಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು, ಮಮತಾ ಬ್ಯಾನರ್ಜಿ ಅವರನ್ನು ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆ ಮಾಡಿದ್ದಾರೆ.