ವಿಜಯಸಾಕ್ಷಿ ಸುದ್ದಿ, ಗದಗ: ಒಮ್ಮೆ ಬರಿದಾಗಿ ಒಣಗುತ್ತಿದ್ದ ತಿಮ್ಮಾಪುರ ಗ್ರಾಮದ ಕೆರೆಗೆ ಇದೀಗ ಜೀವಕಳೆ ಬಂದಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ನ ‘ನಮ್ಮೂರು ನಮ್ಮ ಕೆರೆ’ ಯೋಜನೆಯಡಿ 9 ಎಕರೆ ವಿಸ್ತೀರ್ಣದ ಕೆರೆಯನ್ನು ಪುನಶ್ಚೇತನಗೊಳಿಸಿ ಗ್ರಾಮಸ್ಥರ ಬಳಕೆಗೆ ಹಸ್ತಾಂತರಿಸಲಾಯಿತು.
ಕೆರೆ ದೇವರಿಗೆ ಬಾಗಿನ ಅರ್ಪಿಸಿ ವಿಶೇಷ ಪೂಜೆ ನೆರವೇರಿಸಿದ ಬಳಿಕ ನಾಮಫಲಕ ಅನಾವರಣಗೊಳಿಸಲಾಯಿತು. ನಂತರ ಅಭಿವೃದ್ಧಿಪಡಿಸಿದ ಕೆರೆಯನ್ನು ಗ್ರಾಮಸ್ಥರಿಗೆ ಅಧಿಕೃತವಾಗಿ ಹಸ್ತಾಂತರಿಸಲಾಯಿತು.
ಕಾರ್ಯಕ್ರಮದಲ್ಲಿ ಹರ್ಲಾಪುರ ಕೊಟ್ಟೂರೇಶ್ವರ ಮಠದ ಶ್ರೀ ಅಭಿನವ ಕೊಟ್ಟೂರೇಶ್ವರ ಸ್ವಾಮಿಗಳು ಆಶೀರ್ವಚನ ನೀಡಿ, ಕೆರೆ ಉಳಿದರೆ ಊರು ಉಳಿಯುತ್ತದೆ. ‘ನಮ್ಮೂರು ನಮ್ಮ ಕೆರೆ’ ಯೋಜನೆಯಡಿ ಅಭಿವೃದ್ಧಿಪಡಿಸಿರುವ ಕೆರೆ ರೈತರು ಹಾಗೂ ಸಾರ್ವಜನಿಕರಿಗೆ ವರದಾನವಾಗಿದೆ ಎಂದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಪ್ಪಳ ಪ್ರಾದೇಶಿಕ ನಿರ್ದೇಶಕ ಜೆ. ಚಂದ್ರಶೇಖರ ಮಾತನಾಡಿ, ಜಲಸಂರಕ್ಷಣೆ, ಸ್ವ-ಸಹಾಯ ಸಂಘಗಳ ಮೂಲಕ ಮಹಿಳಾ ಸಬಲೀಕರಣ ಹಾಗೂ ರೈತರ ಅಭಿವೃದ್ಧಿಗೆ ಯೋಜನೆ ಒತ್ತು ನೀಡುತ್ತಿದೆ. ಗ್ರಾಮಸ್ಥರ ಸಹಕಾರದಿಂದ ಇಂತಹ ಕಾರ್ಯಗಳು ಯಶಸ್ವಿಯಾಗುತ್ತವೆ ಎಂದರು.
ರೈತ ಸಂಘದ ಗದಗ ಜಿಲ್ಲಾ ಅಧ್ಯಕ್ಷ ಯಲ್ಲಪ್ಪ ಎಚ್. ಬಾಬರಿ ಮಾತನಾಡಿ, ಕೆರೆ ಅಭಿವೃದ್ಧಿಯಿಂದ ತಿಮ್ಮಾಪುರ ಗ್ರಾಮದ ಸಾವಿರಾರು ಜನರಿಗೆ ಕುಡಿಯುವ ನೀರಿನ ಅನುಕೂಲವಾಗಲಿದೆ. ಯೋಜನೆ ರೂಪಿಸಿ ಅನುಷ್ಠಾನಗೊಳಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ರಾಜ್ಯಾದ್ಯಂತ ಇದುವರೆಗೆ 995 ಕೆರೆಗಳನ್ನು ಪುನಶ್ಚೇತನಗೊಳಿಸಿದ್ದು, ತಿಮ್ಮಾಪುರ ಕೆರೆ ಈ ಅಭಿಯಾನದ ಮತ್ತೊಂದು ಹೆಜ್ಜೆಯಾಗಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಮನಗೌಡ ದೇಸಾಯಿ ವಹಿಸಿದ್ದರು. ಗದಗ ಜಿಲ್ಲಾ ನಿರ್ದೇಶಕ ಕೇಶವ ದೇವಾಂಗ, ಗ್ರಾಮ ಪಂಚಾಯಿತಿ ಪಿಡಿಒ ಶಿವಲೀಲಾ ಗೂಳಪ್ಪನವರ, ಗವಿಸಿದ್ದಯ್ಯ ಹಳ್ಳಿಕೇರಿಮಠ ಸೇರಿದಂತೆ ಕೆರೆ ಅಭಿವೃದ್ಧಿ ಸಮಿತಿ ಪದಾಧಿಕಾರಿಗಳು, ಗ್ರಾಮ ಪಂಚಾಯಿತಿ ಸದಸ್ಯರು, ಸ್ವ-ಸಹಾಯ ಸಂಘಗಳ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
“ಕೆರೆ ಉಳಿದರೆ ಊರು ಉಳಿಯುತ್ತದೆ. ‘ನಮ್ಮೂರು ನಮ್ಮ ಕೆರೆ’ ಯೋಜನೆಯಡಿ ಪುನಶ್ಚೇತನಗೊಂಡ ಕೆರೆ ರೈತರು ಹಾಗೂ ಸಾರ್ವಜನಿಕರಿಗೆ ವರದಾನವಾಗಿದೆ.”
— ಶ್ರೀ ಅಭಿನವ ಕೊಟ್ಟೂರೇಶ್ವರ ಸ್ವಾಮಿಗಳು



