
ವಿಜಯಸಾಕ್ಷಿ ಸುದ್ದಿ, ಬೆಂಗಳೂರು
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಸಾಕಷ್ಟು ಬೆಳವಣಿಗೆಗಳು ಕಂಡು ಬಂದಿದ್ದು, ಸಿಎಂ ಬದಲಾವಣೆ ಮಾಡದಂತೆ ಸಿಎಂ ಬಿ.ಎಸ್. ಯಡಿಯೂರಪ್ಪ ಪರ ನೂರಾರು ಮಠಾಧೀಶರು ಒತ್ತಾಯಿಸಿದ್ದರೆ. ಇನ್ನೊಂದು ಕಡೆ ಪಂಚಮಸಾಲಿ ಶ್ರೀಗಳು ಮಾತ್ರ ಸಿಎಂ ಬದಲಾವಣೆಗೆ ಒತ್ತಡ ಹೇರುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ರಾಜ್ಯಕ್ಕೆ ಭೇಟಿ ನೀಡಿರುವ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಕಳೆದ ಮೂರು ದಿನಗಳಿಂದ ಸರಣಿ ಸಭೆ ನಡೆಸಿ ಸಚಿವರು, ಶಾಸಕರು, ಪಕ್ಷದ ನಾಯಕರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಗುರುವಾರ ರಾತ್ರಿ ಕುಮಾರಕೃಪ ಅತಿಥಿಗೃಹದಲ್ಲಿ ಅರುಣ್ ಸಿಂಗ್ ಅವರನ್ನು ಭೇಟಿ ಮಾಡಿದ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡಿ ಎಂದು ಹೇಳಿದ್ದಾರೆನ್ನಲಾಗಿದೆ.
ಸದ್ಯ ಆಡಳಿತದಲ್ಲಿರುವವರಿಂದ ದುರುಪಯೋಗ ಆಗುತ್ತಿದೆ. ಹಾಗಾಗಿ ಹೊಸಬರಿಗೆ ಅವಕಾಶ ನೀಡಬೇಕು. ಈಗಾಗಲೇ ಯಡಿಯೂರಪ್ಪ ಅವರನ್ನು ನಾಲ್ಕು ಬಾರಿ ಮುಖ್ಯಮಂತ್ರಿಯನ್ನಾಗಿ ಈ ಸಮಾಜ ಮಾಡಿದೆ ಆದರೂ ಅವರು ಸಮಾಜದ ಋಣ ತೀರಿಸದೇ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಸ್ವಾಮೀಜಿ ಆರೋಪಿಸಿದ್ದಾರೆ ಎನ್ನಲಾಗುತ್ತಿದೆ.
ಸಮಾಜದ ಹೆಸರು ಬಳಸಿಕೊಂಡು ಅಧಿಕಾರಕ್ಕೆ ಬಂದವರು, ಒಡಕು ಮೂಡಿಸುವ ಕೆಲಸ ಮಾಡಿದ್ದು, ಅವರನ್ನು ಬದಲಾವಣೆ ಮಾಡಬೇಕು. ಪಂಚಮಸಾಲಿ ಸಮಾಜಕ್ಕೆ ಮುಖ್ಯಮಂತ್ರಿ ಹುದ್ದೆ ನೀಡಬೇಕು ಎಂದು ಶ್ರೀಗಳು ಅರುಣ್ ಸಿಂಗ್ ಅವರಿಗೆ ಒತ್ತಡ ಹೇರಿದ್ದಾರೆ ಎಂದು ಹೇಳಲಾಗಿದೆ.