ವಿದ್ಯಾರ್ಥಿಗಳಿಗೆ, ನೌಕರರಿಗೆ ತೊಂದರೆಯಾಗದಂತೆ ಸಾರಿಗೆ ವ್ಯವಸ್ಥೆ ಕಲ್ಪಿಸಿ; ಡಿಸಿ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ

Advertisement

ಸಾರಿಗೆ ಸಂಸ್ಥೆಯ ವಾಹನ ಚಾಲಕರು ಹಾಗೂ ಸಿಬ್ಬಂದಿಗಳು ಕರೆ ನೀಡಿರುವ ಅನಿರ್ದಿಷ್ಟಾವಧಿ ಮುಷ್ಕರದಿಂದಾಗಿ ಶಾಲಾ ಕಾಲೇಜುಗಳಿಗೆ ಆಗಮಿಸುವ ವಿದ್ಯಾರ್ಥಿಗಳಿಗೆ ಹಾಗೂ ಕಚೇರಿ ಕೆಲಸಗಳಿಗೆ ಬರುವಂತಹ ನೌಕರರಿಗೆ ಸೂಕ್ತ ಸಮಯದಲ್ಲಿ ಖಾಸಗಿ ವಾಹನ ಬಳಸಿ ಸಾರಿಗೆ ವ್ಯವಸ್ಥೆ ಕಲ್ಪಿಸುವಂತೆ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಸಾರಿಗೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಸಾರಿಗೆ ಇಲಾಖೆ ಸೇರಿದಂತೆ ಇನ್ನಿತರ ಇಲಾಖೆಗಳ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿಗಳು ಮಾತನಾಡಿದರು. ಸಾರಿಗೆ ನೌಕರರು ಕರೆ ನೀಡಿರುವ ಅನಿರ್ದಿಷ್ಟಾವಧಿ ಮುಷ್ಕರ ಮುಗಿಯುವವರೆಗೆ ತಾತ್ಕಾಲಿಕವಾಗಿ ಖಾಸಗಿ ಟ್ಯಾಕ್ಸಿ, ಕ್ಯಾಬ್ ವಾಹನಗಳನ್ನು ಬಳಸಿಕೊಂಡು ಸಾರ್ವಜನಿಕರಿಗೆ ಪ್ರಯಾಣಿಸಲು ಅನುವು ಮಾಡಿಕೊಡಬೇಕು.

ಸಂದರ್ಭೋಚಿತವಾಗಿ ಸಾರ್ವಜನಿಕರಿಗೆ ಹಾಗೂ ವಯೋವೃದ್ಧರಿಗೆ ಪ್ರಯಾಣಿಸಲು ಅಡಚಣೆಯಾಗದಂತೆ ನಿರ್ದಿಷ್ಟಪಡಿಸಿದ ಮಾರ್ಗಗಳಲ್ಲಿ ಖಾಸಗಿ ವಾಹನಗಳು ಸಂಚರಿಸುವಂತೆ ನೋಡಿಕೊಳ್ಳಲು ತಿಳಿಸಿದರು.

ಗರ್ಭಿಣಿಯರು ಹಾಗೂ ವೃದ್ಧರು ಮತ್ತು ಅನಾರೋಗ್ಯ ಪೀಡಿತರು ಆಸ್ಪತ್ರೆಗೆ ಚಿಕಿತ್ಸೆಗಾಗಿ ಬಂದಲ್ಲಿ ಅವರನ್ನು ಗುರುತಿಸಿ ಸೂಕ್ತ ಸಾರಿಗೆ ಸೌಲಭ್ಯವನ್ನು ಒದಗಿಸಬೇಕು. ಹಾಗೂ ಮೂಲಭೂತ ಸೌಕರ್ಯಗಳು ದೊರೆಯುವಂತೆ ಅಧಿಕಾರಿಗಳು ಹಾಗೂ ಪೊಲೀಸ ಇಲಾಖೆ ನಿಗಾ ವಹಿಸುವಂತೆ ತಿಳಿಸಿದರು.

ಜಿಲ್ಲೆಯಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕಾಗಿ ಜಾರಿಗೊಳಿಸಲಾದ ನಿಯಮಗಳನ್ನು ಎಲ್ಲರೂ ಪಾಲಿಸಬೇಕು. ಅದೇ ರೀತಿ ಖಾಸಗಿ ವಾಹನಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರು ಪರಸ್ಪರ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ತಿಳಿಸಿದರು. ಖಾಸಗಿ ವಾಹನಗಳ ಕಾರ್ಯಾಚರಣೆ ನಡೆಸುವುದನ್ನೇ ಬಂಡವಾಳ ಮಾಡಿಕೊಂಡು ವಿನಾಕಾರಣ ಸಾರ್ವಜನಿಕರಿಂದ ಹೆಚ್ಚಿನ ದರ ವಸೂಲು ಮಾಡುವುದರ ಬಗ್ಗೆ ಅಧಿಕಾರಿಗಳು ನಿಗಾ ವಹಿಸಬೇಕು. ಹಾಗೂ ಜನಸಾಮಾನ್ಯರಿಗೆ ಕನಿಷ್ಟ ದರದಲ್ಲಿ ಸಾರಿಗೆ ಸೌಲಭ್ಯವನ್ನು ಖಾಸಗಿ ವಾಹನಗಳು ಒದಗಿಸಬೇಕೆಂದು ತಿಳಿಸಿದರು.

ಪ್ರಾದೇಶಿಕ ಸಾರಿಗೆ ಅಧಿಕಾರಿ ಮಂಜುನಾಥ್ ಶಿರಾಳಿ ಮಾತನಾಡಿ, ಜಿಲ್ಲೆಯಲ್ಲಿ 100 ರಿಂದ 50 ಆಟೋ ರಿಕ್ಷಾ, 200-250 ಮಾಕ್ಸಿ ಕ್ಯಾಬ್ ಹಾಗೂ 100 ಮೋಟಾರ್ ಕ್ಯಾಬ್‌ಗಳು ವಾಹನಗಳನ್ನು ಬಳಸಿಕೊಂಡು ಕಾರ್ಯಾಚರಣೆ ನಡೆಸಲಾಗುತ್ತಿದೆ. ಆದ್ಯತೆಯನುಸಾರ ಸಾರ್ವಜನಿಕರಿಗೆ ಸೇವೆ ಒದಗಿಸಲು ಖಾಸಗಿ ವಾಹನಗಳ ಮಾಲೀಕರಿಗೆ ಸೂಚಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ವಾ.ಕ.ರ.ಸಾ.ಸಂಸ್ಥೆ ಗದಗ ಘಟಕದ ವಿಭಾಗೀಯ ನಿಯಂತ್ರಣಾಧಿಕಾರಿ ಎಫ್.ಎಸ್. ಹಿರೇಮಠ ಮಾತನಾಡಿ, ನೌಕರರು ನಡೆಸುತ್ತಿರುವ ಮುಷ್ಕರವನ್ನು ಕೈಬಿಟ್ಟು ಎಂದಿನಂತೆ ಕರ್ತವ್ಯಕ್ಕೆ ಹಾಜರಾಗುವಂತೆ ನೌಕರರಲ್ಲಿ ಮನವಿ ಮಾಡಲಾಗಿದೆ. ಮುಷ್ಕರದಲ್ಲಿ ಭಾಗವಹಿಸದೇ ಕರ್ತವ್ಯಕ್ಕೆ ಹಾಜರಾಗುವ ಸಿಬ್ಬಂದಿಗಳಿಗೆ ಸೂಕ್ತ ಪೋಲೀಸ್ ಬಂದೋಬಸ್ತಿಯನ್ನು ಒದಗಿಸಲಾಗುವುದೆಂದು ತಿಳಿಸಿದೆ.

ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಖಾಸಗಿ ವಾಹನಗಳು ಬಂದು ಸಾರ್ವಜನಿಕರಿಗೆ ಸೇವೆ ಒದಗಿಸಲು ಅವಕಾಶ ನೀಡಲಾಗಿದೆ. ನಿಗದಿತ ಸಮಯಕ್ಕನುಸಾರ ಖಾಸಗಿ ವಾಹನಗಳು ಕಾರ್ಯಾಚರಣೆ ನಡೆಸುವ ಮೂಲಕ ಸಾರ್ವಜನಿಕರಿಗೆ ಸೇವೆ ಒದಗಿಸಲು ತಿಳಿಸಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಸತೀಶಕುಮಾರ್, ಸಾರಿಗೆ ಇಲಾಖೆಯ ಅಧಿಕಾರಿಗಳು ಹಾಗೂ ವಾ. ಕ. ರಾ. ಸ. ಸಾ. ಸಂಸ್ಥೆ ಅಧಿಕಾರಿಗಳು ಇದ್ದರು.


Spread the love

LEAVE A REPLY

Please enter your comment!
Please enter your name here