ವಿಜಯಸಾಕ್ಷಿ ಸುದ್ದಿ, ಗದಗ
ಪಿಟ್ ಇಂಡಿಯಾ ಅಭಿಯಾನದಡಿ ನಡೆದ ಕ್ರಿಕೆಟ್ ಪಂದ್ಯಾವಳಿ ವೇಳೆ ಸಿಕ್ಸರ್ ವಿಷಯಕ್ಕೆ ಪಂಚಾಯತ್ ರಾಜ್ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಮಧ್ಯೆ ವಾಗ್ವಾದ ನಡೆದು ಕೈ ಕೈ ಮಿಲಾಯಿಸಿದ ಘಟನೆ ರೋಣ ಪಟ್ಟಣದಲ್ಲಿ ನಡೆದಿದೆ.
ಗದಗ ಜಿಲ್ಲೆಯ ರೋಣ ಪಟ್ಟಣದ ದ್ರೋಣಾಚಾರ್ಯ ಕ್ರೀಡಾಂಗಣದಲ್ಲಿ ಪಿಟ್ ಇಂಡಿಯಾ ಅಭಿಯಾನ, ಸ್ವಚ್ಛ ಭಾರತ ಅಭಿಯಾನ, ಅಜಾದಿ ಕಾ ಅಮೃತ ಮಹೋತ್ಸವ ಹಾಗೂ ಸ್ವೀಪ್ ವತಿಯಿಂದ ಕ್ರೀಡಾಕೂಟ ನಡೆಯುತ್ತಿದೆ.

ಮಂಗಳವಾರ ಆರೋಗ್ಯ ಇಲಾಖೆ ಹಾಗೂ ತಾಲೂಕು ಪಂಚಾಯತಿ ತಂಡಗಳ ನಡುವೆ ಕ್ರಿಕೆಟ್ ಪಂದ್ಯ ನಡೆಯುತ್ತಿರುವಾಗ ಆರೋಗ್ಯ ಇಲಾಖೆ ತಂಡದ ಆಟಗಾರ ಸಿಕ್ಸ್ ಹೊಡೆದಾಗ, ತಾಲೂಕು ಪಂಚಾಯತಿ ತಂಡದ ಆಟಗಾರ ಕ್ಯಾಚ್ ಹಿಡಿದರು. ಆದರೆ, ಬ್ಯಾಟಿಂಗ್ ಮಾಡುವ ತಂಡದ ಆಟಗಾರರು ಬೌಂಡರಿ ಗೇರೆ ಟಚ್ ಮಾಡಿ ಕ್ಯಾಚ್ ಹಿಡಿದಿದೆ ಎಂದು ವಾದಿಸಿದಾಗ ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತು.

ಈ ವೇಳೆ ಮಧ್ಯೆ ಪ್ರವೇಶಿಸಿದ ತಾಪಂ ಇಒ ಸಂತೋಷ ಪಾಟೀಲ ಪಂದ್ಯಾವಳಿ ನಿಲ್ಲಿಸುವುದಾಗಿ ಎಚ್ಚರಿಕೆ ನೀಡಿದ್ದರಿಂದ ಎರಡೂ ತಂಡದ ಆಟಗಾರರು ವಾಗ್ವಾದ ನಿಲ್ಲಿಸಿ ವಾಪಸ್ ತೆರಳಿ ಆಟ ಪ್ರಾರಂಭಿಸಿದರು.
ವೈದ್ಯನಿಗೆ ಕಪಾಳಮೋಕ್ಷ
ತಾಲೂಕು ಪಂಚಾಯತಿ ಸಿಬ್ಬಂದಿಯೊಬ್ಬರು ಆರೋಗ್ಯ ಇಲಾಖೆಯ ವೈದ್ಯರೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇದರ ಪರಿಣಾಮವಾಗಿ ಆರೋಗ್ಯ ಇಲಾಖೆ ಸಿಬ್ಬಂದಿ ಆಕ್ರೋಶಗೊಂಡರು. ಇದೇ ಸಂದರ್ಭದಲ್ಲಿ ಸಹನೆ ಕಳೆದುಕೊಂಡ ಸಿಬ್ಬಂದಿ ಪರಸ್ಪರ ಅವಾಚ್ಯ ಶಬ್ದಗಳಿಂದ ಬೈಯ್ದಾಡಿಕೊಂಡಿದ್ದರಿಂದ ಕೆಲಕಾಲ ಗೊಂದಲದ ಸ್ಥಿತಿ ನಿರ್ಮಾಣವಾಗಿತ್ತು. ಪರಸ್ಪರರು ಮತ್ತೆ ನೋಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.
ಇದೀಗ ಈ ಪ್ರಕರಣ ಜಿಲ್ಲೆಯ ನೌಕರರಲ್ಲಿ ಚರ್ಚೆಯ ವಿಷಯವಾಗಿದ್ದು, ಮುಂದೆ ಏನಾಗುತ್ತೋ ಎಂಬುದೀಗ ಸಾರ್ವಜನಿಕರಲ್ಲಿ ಕುತೂಹಲ ಮೂಡಿಸಿದೆ.
ಜನರಿಗೆ ಬುದ್ದಿ ಹೇಳಬೇಕಾದ ಅಧಿಕಾರಿ ವರ್ಗ, ಕೈ ಕೈ ಮಿಲಾಯಿಸುವು ಹಂತಕ್ಕೆ ಹೋಗಿದ್ದು ವಿಪರ್ಯಾಸ.