ವಿಜಯಸಾಕ್ಷಿ ಸುದ್ದಿ, ಕೊಪ್ಪಳ:
ಕಾರಟಗಿ ಮಹಿಳಾ ಅದಿಕಾರಿಯೊಬ್ಬರಿಗೆ ಕನಕಗಿರಿ ಶಾಸಕ ಬಸವರಾಜ ದಢೇಸೂಗುರು ಬೆಂಬಲಿಗರು ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡಿದ್ದು, ಕಿರುಕುಳಕ್ಕೊಳಗಾದ ಮಹಿಳಾ ಅಧಿಕಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಲು ಸೋಮವಾರ ರಾತ್ರಿ ಎಸ್ಪಿ ಕಚೇರಿಗೆ ಆಗಮಿಸಿದ್ದರೆಂಬ ಸುದ್ದಿ ಸಂಚಲನ ಮೂಡಿಸಿದೆ.
ಈ ಬೆಳವಣಿಗೆ ನಿಜವೋ? ಸುಳ್ಳೋ? ಎಂಬುದಿನ್ನು ಖಚಿತವಾಗಿಲ್ಲ. ಈ ಕುರಿತು ಮಾಹಿತಿ ಪಡೆಯಲು ಎಸ್ಪಿ ಹಾಗೂ ಮಹಿಳಾ ಅಧಿಕಾರಿಗೆ ಕರೆ ಮಾಡಿದರೂ ಸ್ವೀಕರಿಸಲಿಲ್ಲ.
ಮೂಲಗಳ ಪ್ರಕಾರ ಇತ್ತಿಚೆಗೆ ಮಹಿಳಾ ಅಧಿಕಾರಿಯ ವರ್ಗಾವಣೆಗೆ ಸಂಬಂಧಿಸಿದಂತೆ ಶಾಸಕರ ಜೊತೆ ವಾಗ್ವಾದ ನಡೆದಿದ್ದು ಆಕ್ರೋಶಗೊಂಡ ಬೆಂಬಲಿಗರು ಅಧಿಕಾರಿಯ ಕೈ ಹಿಡಿದು ಎಳೆದಾಡಿದ್ದಾರೆ ಎನ್ನಲಾಗಿದೆ. ಶಾಸಕರಿಗೂ ಮತ್ತು ಮಹಿಳಾ ಅಧಿಕಾರಿಗೂ ಇಷ್ಟರಮಟ್ಟಿಗೆ ಸಲುಗೆ ಬೆಳೆದಿದ್ದಾರೂ ಹೇಗೆ ಎಂಬ ಪ್ರಶ್ನೆ ಈಗ ಕ್ಷೇತ್ರದಾದ್ಯಂತ ಕೇಳಿ ಬರುತ್ತಿದೆ.
ಈ ಕುರಿತು ವಿಜಯಸಾಕ್ಷಿಯೊಂದಿಗೆ ಮಾತನಾಡಿದ ಶಾಸಕ ಬಸವರಾಜ ದಢೇಸೂಗುರು ಅವರು, ಪಟ್ಟಣ ಪಂಚಾಯಿತಿ ಚುನಾವಣೆ ಗದ್ದಲದಲ್ಲಿ ಇದ್ದೇವೆ. ಈ ಬಗ್ಗೆ ನನಗೇನೂ ಗೊತ್ತಿಲ್ಲ. ಸದ್ಯಕ್ಕೆ ಚುನಾವಣಾ ಕೆಲಸಗಳಲ್ಲಿ ತೊಡಗಿಕೊಂಡಿದ್ದೇನೆ ಎಂದು ಪ್ರತಿಕ್ರಿಯೆ ನೀಡಿದರು.