ವಿಜಯಸಾಕ್ಷಿ ಸುದ್ದಿ, ಬೆಂಗಳೂರು
ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ(103) ಇಂದು ಇಹಲೋಕ ತ್ಯಜಿಸಿದ್ದಾರೆ. ಅವರು ಹೃದಯ ಸಂಬಂಧಿ ಹಾಗೂ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಆದರೆ, ಇಂದು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ದೊರೆಸ್ವಾಮಿ ಅವರಲ್ಲಿ ಮೇ. 6ರಂದು ಕೊರೊನಾ ದೃಢಪಟ್ಟಿತ್ತು. ಆದರೆ, ಅವರು ಅದರಿಂದ ಚೇತರಿಸಿಕೊಂಡಿದ್ದರು.
ಹೀಗಾಗಿ ಮೇ. 13ರಂದು ಅವರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು. ಆ ನಂತರ ಮತ್ತೆ ನಾಲ್ಕು ದಿನಗಳ ಬಳಿಕ ಆಸ್ಪತ್ರೆಗೆ ದಾಖಲಾಗಿದ್ದರು. ಹೃದಯ ಕಾಯಿಲೆ, ಅಧಿಕ ರಕ್ತದೊತ್ತಡ, ಬ್ರಾಂಕೈಟಿಸ್ (ಶ್ವಾಸನಾಳಗಳ ಒಳಪೊರೆಯ ಉರಿಯೂತ) ಸೇರಿದಂತೆ ವಿವಿಧ ಸಮಸ್ಯೆಗಳನ್ನು ಎದುರಿಸುತ್ತಿದ್ದರು.
ಕೊರೊನಾದಿಂದ ಗುಣಮುಖರಾಗಿದ್ದ ನಾಲ್ಕು ದಿನಗಳ ನಂತರ ಅವರಲ್ಲಿ ಉಸಿರಾಟದ ತೊಂದರೆ ಪ್ರಾರಂಭವಾಯಿತು. ಹೀಗಾಗಿ ಅವರನ್ನು ಇಲ್ಲಿಯ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಕೊರೊನಾ ಸಂದರ್ಭದಲ್ಲಿ ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ಅವರು ನನಗೆ ವಯಸ್ಸಾಗಿದೆ. ನನಗೆ ಬೆಡ್ ಬೇಡ. ಅದು ಯುವಕರಿಗೆ ಉಪಯೋಗವಾಗಲಿ ಎಂಬ ಮಾತುಗಳನ್ನು ದೊರೆಸ್ವಾಮಿ ಹೇಳುತ್ತಿದ್ದರು. ಈ ಸಂದರ್ಭದಲ್ಲಿ ಜಯದೇವ ಆಸ್ಪತ್ರೆಯ ವೈದ್ಯ ಡಾ. ಮಂಜುನಾಥ್ ಅವರು, ಬೆಡ್ ಕೊರತೆ ಇಲ್ಲ ಎಂದು ಮನವೊಲಿಸಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ.