ಗದಗ: ಲಕ್ಕುಂಡಿಯ ಐತಿಹಾಸಿಕ ದೇವಸ್ಥಾನಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಸಂಬಂಧಿಸಿ ಗದಗ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರು ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಾಜ್ಯ ಮತ್ತು ಕೇಂದ್ರ ಪುರಾತತ್ವ ಇಲಾಖೆಗೆ ಒಳಪಡುವ ಪ್ರಮುಖ ದೇವಸ್ಥಾನಗಳನ್ನು ಡಿಸಿ ಪರಿಶೀಲಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಲಕ್ಕುಂಡಿಯ ಐತಿಹಾಸಿಕ ಕುಂಭಾರೇಶ್ವರ ದೇವಸ್ಥಾನಕ್ಕೆ ಹೊಂದಿಕೊಂಡಿರುವ ಮನೆಗಳ ಶೀಘ್ರ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿ ತಿಳಿಸಿದ್ದಾರೆ. ಈ ಕಾರ್ಯವನ್ನು ಕೇಂದ್ರ ಪುರಾತತ್ವ ಇಲಾಖೆ (ASI) ಮೂಲಕ ನಡೆಸಲಾಗುವುದು. ಈಗಾಗಲೇ ಸ್ಥಳಾಂತರಕ್ಕೆ ಸಂಬಂಧಿಸಿದಂತೆ ಪರಿಹಾರವನ್ನು ನೀಡಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.
“ಕೇಂದ್ರ ಪುರಾತತ್ವ ಇಲಾಖೆಯ ಅಧಿಕಾರಿಗಳ ಜೊತೆ ಮಾತನಾಡಿ ಮನೆಗಳನ್ನು ಖಾಲಿ ಮಾಡಿಸಲಾಗುತ್ತದೆ. ಇದು ಸಂಪೂರ್ಣವಾಗಿ ಕೇಂದ್ರ ಪುರಾತತ್ವ ಇಲಾಖೆಯ ಜವಾಬ್ದಾರಿ” ಎಂದು ಡಿಸಿ ಸಿ.ಎನ್. ಶ್ರೀಧರ್ ಹೇಳಿದರು.
ಇನ್ನೂ, 2025-26ನೇ ಸಾಲಿನಲ್ಲಿ ಲಕ್ಕುಂಡಿಯ ಆರು ಐತಿಹಾಸಿಕ ದೇವಸ್ಥಾನಗಳ ಅಭಿವೃದ್ಧಿಗೆ ₹10 ಕೋಟಿ ಅನುದಾನ ಮೀಸಲಿಡಲಾಗಿದೆ ಎಂದು ಮಾಹಿತಿ ನೀಡಿದರು. ರಾಜ್ಯ ಹಾಗೂ ಕೇಂದ್ರ ಪುರಾತತ್ವ ಅಧಿಕಾರಿಗಳ ವರದಿ ಬಂದ ನಂತರ ಆದ್ಯತೆ ಮೇರೆಗೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತದೆ ಎಂದು ಅವರು ಹೇಳಿದರು.
ಒಕ್ಕಲೆಬ್ಬಿಸುವ ಪರಿಸ್ಥಿತಿ ನಿರ್ಮಾಣವಾದಲ್ಲಿ ಸೂಕ್ತ ಪರಿಹಾರ ನೀಡಲಾಗುತ್ತದೆ. ಸ್ಥಳಾಂತರದ ಕುರಿತಂತೆ ಅಂತಿಮ ತೀರ್ಮಾನವನ್ನು ಕಾಲವೇ ನಿರ್ಧರಿಸಲಿದೆ ಎಂದು ಡಿಸಿ ತಿಳಿಸಿದರು.



