ವಿಜಯಸಾಕ್ಷಿ ಸುದ್ದಿ, ಗದಗ : ಮಿಷನ್ ಶಕ್ತಿ ಯೋಜನೆಯು ಮಹಿಳೆರ ಸುರಕ್ಷತೆ, ಭದ್ರತೆ ಹಾಗೂ ಸಬಲೀಕರಣಕ್ಕಾಗಿ ವಿಶೇಷವಾದ ರೂಪುರೇಷೆಗಳನ್ನು ಹೊಂದಿದೆ ಎಂದು ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಧಾರವಾಡದ ಯೋಜನಾಧಿಕಾರಿ ಭಾರತಿ ಶೆಟ್ಟರ್ ಹೇಳಿದರು.
ನಗರದ ಜಿಲ್ಲಾಡಳಿತ ಭವನದಲ್ಲಿ ಇತ್ತೀಚೆಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಿಳಾ ಮತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಮಿಷನ್ ಶಕ್ತಿ ಯೋಜನೆಯ ರೂಪುರೇಷೆಗಳ ಕುರಿತು ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ, ಮೇಲ್ವಿಚಾರಕಿಯರಿಗೆ, ಹಿರಿಯ ಮೇಲ್ವಿಚಾರಕಿಯರಿಗೆ ಏರ್ಪಡಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಿಷನ್ ಶಕ್ತಿ ಭಾರತ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಯೋಜನೆಯಡಿ ಲಭ್ಯವಿರುವ ಸೌಲಭ್ಯಗಳ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ರಾಧಾ ಜಿ.ಮಣ್ಣೂರು ಮಾತನಾಡಿ, ಮಿಷನ್ ಶಕ್ತಿ ಯೋಜನೆಯ ಕಾರ್ಯವೈಖರಿ ದೇಶಕ್ಕೆ ಮಾದರಿಯಾಗಬೇಕು. ಮಹಿಳೆಯರಿಗೆ ರಾಜ್ಯ ಸರ್ಕಾರ, ಕೇಂದ್ರ ಸರ್ಕಾರಗಳು ನೀಡಿದ ಎಲ್ಲ ಯೋಜನೆಗಳ ಸೌಲಭ್ಯವನ್ನು ಪಡೆದುಕೊಂಡು ಅವರು ದೇಶದ ಆರ್ಥಿಕ ಪ್ರಗತಿಯಲ್ಲಿ ಪ್ರಮುಖ ಪಾತ್ರ ವಹಿಸುವಂತೆ ಸಮಾಜದ ಎಲ್ಲ ಸ್ಥರದ ಮಹಿಳೆಯರನ್ನು ಜಾಗೃತಗೊಳಿಸುವುದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಎಲ್ಲ ಅಧಿಕಾರಿಗಳ ಗುರುತರ ಜವಾಬ್ದಾರಿ ಎಂದು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪಿ.ವಾಯ್. ಶೆಟ್ಟಪ್ಪನವರ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ಮಹಿಳೆ ಮತ್ತು ಮಕ್ಕಳ ಅಪೌಷ್ಠಿಕತೆಯನ್ನು ಹೋಗಲಾಡಿಸಲು ಪೋಷಣ ಅಭಿಯಾನ, ಮಹಿಳೆಯರ ಮೇಲಿನ ದೌರ್ಜನ್ಯವನ್ನು ತಡೆಗಟ್ಟಲು ಯೋಜನೆ, ಹಲವಾರು ಸೇವೆಗಳು ಒಂದೇ ಕಡೆ ಸಿಗುಂತಾಗಲು ಸಖಿ ಒನ್ ಸ್ಟಾಪ್ ಸೆಂಟರ್, ಗರ್ಭಿಣಿ/ಬಾಣಂತಿಯರಿಗೆ ಆರ್ಥಿಕ ಸಹಾಯವಾಗಲು ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆ, ಭಾಗ್ಯಲಕ್ಷ್ಮಿ/ಸುಕನ್ಯ ಸಮೃದ್ಧಿ ಯೋಜನೆ, ಮಹಿಳೆ ಮತ್ತು ಮಕ್ಕಳ ಕ್ಷೇತ್ರದಲ್ಲಿ ಗಣನೀಯವಾದ ಸೇವೆಯ ಜೊತೆಗೆ ಮಿಷನ್ ಶಕ್ತಿ ಯೋಜನೆಯು ಸಮಾಜದ ಪ್ರತಿಯೊಬ್ಬ ಹೆಣ್ಣು ಮಗು/ಮಹಿಳೆಯರಿಗೆ ಸುರಕ್ಷತೆ, ಭದ್ರತೆ ಹಾಗೂ ಸಬಲೀಕರಣಕ್ಕಾಗಿ ಅಗತ್ಯ ಕ್ರಮಗಳನ್ನು ಹೆಚ್ಚಿನ ಉತ್ಸುಕತೆಯಿಂದ ಜಿಲ್ಲಾ ಮಟ್ಟದ ಹಾಗೂ ತಾಲೂಕಾ ಮಟ್ಟದ ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಮಾಡಬೇಕೆಂದು ಹೇಳಿದರು.
ಕಾರ್ಯಕ್ರಮದಲ್ಲಿ ಐಸಿಡಿಎಸ್ ಅಧೀಕ್ಷಕ ರಾಜು ಕಂಠಿಗೊಣ್ಣವರ, ಕಚೇರಿ ವಿಭಾಗ ಅಧೀಕ್ಷಕರಾದ ಪ್ರಭಾವತಿ ಮುದಿಗೌಡರ್, ಸ್ತ್ರೀ ಶಕ್ತಿ ವಿಭಾಗ ಅಧೀಕ್ಷಕರಾದ ಕಸ್ತೂರಿ ಬಳ್ಳೊಳ್ಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಬ್ಬಂದಿ ವರ್ಗದವರು ಹಾಜರಿದ್ದರು.
ಕಾರ್ಯಕ್ರಮವನ್ನು ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯ ಜಿಲ್ಲಾ ಸಂಯೋಜಕ ಶ್ರೀಧರ ಪೂಜಾರ ನಿರೂಪಿಸಿದರು. ಮಧು ಉಪ್ಪಾರ ವಂದಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಕಮಲಾ ಬೈಲೂರ ಮಾತನಾಡಿ, ಇಂದು ಮಹಿಳೆಯರು ಸ್ವತಂತ್ರವಾಗಿ ಪ್ರತಿಯೊಂದು ಕ್ಷೇತ್ರದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಲು ತಯಾರಿದ್ದಾರೆ. ಸಮಾಜದ ಪ್ರತಿಯೊಂದು ಸ್ಥರದ ಮಹಿಳೆಯರಿಗೆ ಸಮಯಕ್ಕೆ ಸರಿಯಾಗಿ, ಸರಿಯಾದ ಮಾಹಿತಿ-ಸಹಕಾರ ಹಾಗೂ ಮಾರ್ಗದರ್ಶನದ ಸಮಾಲೋಚನೆ, ಅಗತ್ಯ ನೆರವು ನೀಡುವುದು ಈ ಯೋಜನೆಯ ಗುರಿಯಾಗಿದೆ ಎಂದು ಹೆಳಿದರು.


