ಪಣಜಿ: 2013ರಲ್ಲಿ ದೇಶವನ್ನೇ ಬೆಚ್ಚಿಬೀಳಿಸಿದ್ದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೆಹಲ್ಕಾ ನಿಯತಕಾಲಿಕೆಯ ಮಾಜಿ ಸಂಪಾದಕ-ಇನ್-ಚೀಫ್ ತರುಣ್ ತೇಜ್ಪಾಲ್ ಅವರನ್ನು ಬಾಂಬೆ ಹೈಕೋರ್ಟ್ನ ಗೋವಾ ಪೀಠ ದೋಷಿ ಎಂದು ಘೋಷಿಸಿದೆ. ಗೋವಾ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ, ಸೇಷನ್ಸ್ ಕೋರ್ಟ್ ನೀಡಿದ್ದ ಖುಲಾಸೆ ತೀರ್ಪನ್ನು ರದ್ದುಗೊಳಿಸಿ ಮಹತ್ವದ ಆದೇಶ ಹೊರಡಿಸಿದೆ.
ನ್ಯಾಯಮೂರ್ತಿಗಳಾದ ಡಾ. ನೀಲಾ ಗೋಖಲೆ ಹಾಗೂ ಅಮಿತ್ ಜಮಸಂಡೇಕರ್ ಅವರನ್ನೊಳಗೊಂಡ ವಿಭಾಗೀಯ ಪೀಠವು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376(2)(f), 376(2)(k) (ಅತ್ಯಾಚಾರ) ಹಾಗೂ ಸೆಕ್ಷನ್ 354A ಮತ್ತು 354B (ಲೈಂಗಿಕ ಕಿರುಕುಳ) ಅಡಿಯಲ್ಲಿ 62 ವರ್ಷದ ತರುಣ್ ತೇಜ್ಪಾಲ್ ಅವರನ್ನು ದೋಷಿ ಎಂದು ತೀರ್ಮಾನಿಸಿದೆ. ಶಿಕ್ಷೆಯ ಪ್ರಮಾಣವನ್ನು ಮಧ್ಯಾಹ್ನ 2.30ಕ್ಕೆ ಪ್ರಕಟಿಸುವುದಾಗಿ ನ್ಯಾಯಾಲಯ ತಿಳಿಸಿದೆ.
ಈ ಪ್ರಕರಣವು 2013ರ ನವೆಂಬರ್ನಲ್ಲಿ ಗೋವಾದ ಪಂಚತಾರಾ ಹೋಟೆಲ್ನಲ್ಲಿ ನಡೆದ ‘ಥಿಂಕ್ಫೆಸ್ಟ್’ ಕಾರ್ಯಕ್ರಮದ ವೇಳೆ ನಡೆದಿತ್ತು. ಲಿಫ್ಟ್ನಲ್ಲಿ ತರುಣ್ ತೇಜ್ಪಾಲ್ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಅವರ ಕಿರಿಯ ಮಹಿಳಾ ಸಹೋದ್ಯೋಗಿ ಆರೋಪಿಸಿದ್ದರು. ಈ ಪ್ರಕರಣದಲ್ಲಿ 2021ರಲ್ಲಿ ಮಾಪುಸಾ ಸೇಷನ್ಸ್ ನ್ಯಾಯಾಲಯ ತೇಜ್ಪಾಲ್ ಅವರನ್ನು ಖುಲಾಸೆಗೊಳಿಸಿತ್ತು. ಇದನ್ನು ಪ್ರಶ್ನಿಸಿ ಗೋವಾ ಸರ್ಕಾರ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿತ್ತು.
ತೀರ್ಪು ಪ್ರಕಟಿಸುವ ವೇಳೆ ನ್ಯಾಯಾಲಯದಲ್ಲೇ ಹಾಜರಿದ್ದ ತೇಜ್ಪಾಲ್, ಶಿಕ್ಷೆ ನಿಗದಿಗೂ ಮುನ್ನ ತಮ್ಮ ವಯಸ್ಸು ಮತ್ತು ಕುಟುಂಬದ ಪರಿಸ್ಥಿತಿಯನ್ನು ಪರಿಗಣಿಸಿ ಶಿಕ್ಷೆಯಲ್ಲಿ ಸಡಿಲಿಕೆ ನೀಡುವಂತೆ ಮನವಿ ಮಾಡಿದರು. “ನನಗೆ ಈಗ 62 ವರ್ಷ. ಈ ಪ್ರಕರಣದಲ್ಲಿ ನಾನೇ ಸಂತ್ರಸ್ತ ಎಂದು ಭಾವಿಸುತ್ತೇನೆ. ನನಗೆ ಪತ್ನಿ ಇದ್ದಾಳೆ. ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸುವ ಅವಕಾಶ ನೀಡಬೇಕು” ಎಂದು ಕೋರಿದರು.
ತೇಜ್ಪಾಲ್ ಪರ ಹಿರಿಯ ವಕೀಲ ಆಬಾದ್ ಪೋಂಡಾ, ಘಟನೆ ನಡೆದು 13 ವರ್ಷಗಳಾಗಿವೆ ಹಾಗೂ ಅವರ ವಿರುದ್ಧ ಬೇರೆ ಯಾವುದೇ ಅಪರಾಧ ಪ್ರಕರಣಗಳಿಲ್ಲ. ಹೀಗಾಗಿ ಶಿಕ್ಷೆಯಲ್ಲಿ ಸಡಿಲಿಕೆ ನೀಡಬೇಕು ಮತ್ತು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ತೀರ್ಪಿಗೆ ಎಂಟು ವಾರಗಳ ತಡೆ ನೀಡಬೇಕು ಎಂದು ವಿನಂತಿಸಿದರು.
ಆದರೆ ಸರ್ಕಾರದ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, “ತಂದೆಯ ಸ್ಥಾನದಲ್ಲಿದ್ದ ವ್ಯಕ್ತಿ ಮಗಳು ಸಮಾನವಾದ ಯುವತಿಯ ಮೇಲೆ ಇಂತಹ ಕೃತ್ಯ ಎಸಗಿದ್ದಾರೆ. ಸಂತ್ರಸ್ತೆ ನಿರಾಕರಿಸಿದರೂ ಕಿರುಕುಳ ಮುಂದುವರಿಸಿದ್ದಾರೆ. ಸಮಾಜಕ್ಕೆ ಸ್ಪಷ್ಟ ಸಂದೇಶ ರವಾನಿಸಲು ಕಠಿಣ ಶಿಕ್ಷೆ ಅಗತ್ಯ” ಎಂದು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಟ್ಟರು.



