ಬೆಂಗಳೂರು: ಕಿರುತೆರೆಯ ನಟ-ನಟಿಯರು ಸೇರಿದಂತೆ 139 ಮಂದಿಗೆ ಸೈಟ್ ನೀಡುವ ಭರವಸೆಯ ಮೂಲಕ ಲಕ್ಷಾಂತರ ರೂಪಾಯಿ ವಂಚನೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ನ 139 ಸದಸ್ಯರಿಗೆ ಸೈಟ್ ಕೊಡಿಸುವುದಾಗಿ ಹೇಳಿ ಹಣ ಪಡೆದು, ವಂಚನೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಕುರಿತು ಅಸೋಸಿಯೇಷನ್ ಸದಸ್ಯೆ ಭಾವನಾ ಬೆಳಗೆರೆ ಅವರು ದೂರು ನೀಡಿದ್ದು, ಆಧಾರದ ಮೇಲೆ ಐದು ಮಂದಿಯ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಬಿಲ್ಡರ್ ಭಗೀರಥ, ಸಂಜೀವ್ ತಗಡೂರು, ಗುರುಪ್ರಸಾದ್, ರವೀಂದ್ರ, ಉಮಾಕಾಂತ್ ಎಂಬುವವರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಕೆಟಿವಿಎನಲ್ಲಿ ಸೈಟ್ ಕಮಿಟಿ ಸದಸ್ಯನಾಗಿದ್ದ ಸಂಜೀವ್ ತಗಡೂರು, ಸದಸ್ಯರಿಗೆ ಸೈಟ್ ಕೊಡಿಸುವುದಾಗಿ ಬಿಲ್ಡರ್ ಜೊತೆಗೆ ವ್ಯವಹಾರ ಕುದುರಿಸಿದ್ದ.
ತಾವರೆಕೆರೆ ಬಳಿ ಸೈಟ್ ಕೊಡಿಸುವುದಾಗಿ ಹೇಳಿ ಅಸೋಸಿಯೇಷನ್ ಸದಸ್ಯರಿಂದ ಲಕ್ಷ ಲಕ್ಷ ಹಣ ಪಡೆದಿದ್ದ. ಆರ್.ಆರ್ ನಗರ ಉಪನೋಂದಣಾಧಿಕಾರಿ ಕಚೇರಿಯಲ್ಲಿ ಶುದ್ಧ ಕ್ರಯ ಸಹ ಮಾಡಿಸಲಾಗಿತ್ತು. ಆ ಬಳಿಕ ಖಾತೆ ಮಾಡಿಸಲು ಮೀನಮೇಷ ಎಣಿಸುತ್ತಿದ್ದ.
ಈ ವೇಳೆ ಕೆಲ ಸದಸ್ಯರು ಖುದ್ಧಾಗಿ ಖಾತೆ ಮಾಡಿಸಲು ತೆರಳಿದಾಗ ತಾವು ವಂಚನೆಗೆ ಒಳಗಾಗಿರುವುದು ಬೆಳಕಿಗೆ ಬಂದಿದೆ. ಒಟ್ಟು 1.6 ಕೋಟಿ ಹಣ ವಂಚನೆ ಮಾಡಲಾಗಿದೆ ಎಂದು ಅಸೋಸಿಯೇಷನ್ ಸದಸ್ಯರು ದೂರಿನಲ್ಲಿ ತಿಳಿಸಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದೆ.


