ಬಳ್ಳಾರಿ: ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಮಾದಕ ದ್ರವ್ಯ ಪ್ರಕರಣಗಳಲ್ಲಿ ಜಪ್ತಿ ಮಾಡಲಾಗಿದ್ದ 15.740 ಕೆ.ಜಿ. ಗಾಂಜಾವನ್ನು ನ್ಯಾಯಾಲಯಗಳ ಆದೇಶದಂತೆ ವೈಜ್ಞಾನಿಕ ವಿಧಾನದಲ್ಲಿ ನಾಶಪಡಿಸಲಾಯಿತು.
ನಾಶಪಡಿಸಿದ ಗಾಂಜಾದ ಒಟ್ಟು ಮೌಲ್ಯ ಸುಮಾರು ₹6.68 ಲಕ್ಷ ಎಂದು ಪೊಲೀಸ್ ಇಲಾಖೆ ತಿಳಿಸಿದೆ.
ಹರಗಿನಡೋಣಿ ಗ್ರಾಮದ ಸೂರ್ಯಕಾಂತ ಎನ್ವಿರಾನ್ಮೆಂಟ್ ಟೆಕ್ನಾಲಜೀಸ್ ಘಟಕದಲ್ಲಿ ಜಿಲ್ಲಾ ಮಟ್ಟದ ಮಾದಕ ವಸ್ತುಗಳ ವಿಲೇವಾರಿ ಸಮಿತಿಯ ಸಮ್ಮುಖದಲ್ಲಿ ವಿಲೇವಾರಿ ಪ್ರಕ್ರಿಯೆ ನಡೆಸಲಾಯಿತು. ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ ಗಾಂಜಾವನ್ನು ಸಂಬಂಧಪಟ್ಟ ನ್ಯಾಯಾಲಯಗಳ ನಿರ್ದೇಶನದಂತೆ ಹಾಗೂ ಜಾರಿಯಲ್ಲಿರುವ ನಿಯಮಾವಳಿಗಳನ್ನು ಪಾಲಿಸಿ ಪರಿಸರ ಸ್ನೇಹಿ, ವೈಜ್ಞಾನಿಕ ವಿಧಾನದಲ್ಲಿ ನಾಶಪಡಿಸಲಾಯಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ. ಪೆನ್ನೇಕರ್ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎನ್. ನವೀನ್ ಕುಮಾರ್, ಉಪ ಪೊಲೀಸ್ ವರಿಷ್ಠಾಧಿಕಾರಿಗಳಾದ ವಿ. ಗೋವಿಂದರಾಜುಲು ಮತ್ತು ಪಿ. ಮುರಳಿಧರ ಸೇರಿದಂತೆ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಮಾದಕ ವಸ್ತುಗಳ ವಿಲೇವಾರಿ ಸಮಿತಿಯ ಸದಸ್ಯರು ಭಾಗವಹಿಸಿದ್ದರು.
ಮಾದಕ ದ್ರವ್ಯಗಳ ಅಕ್ರಮ ಜಾಲವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಕೈಗೊಂಡಿರುವ ಕ್ರಮಗಳ ಭಾಗವಾಗಿ ಜಪ್ತಿ ಮಾಡಲಾದ ಮಾದಕ ವಸ್ತುಗಳನ್ನು ನ್ಯಾಯಾಲಯಗಳ ಅನುಮತಿ ಪಡೆದ ಬಳಿಕ ಕಾನೂನುಬದ್ಧವಾಗಿ ನಾಶಪಡಿಸಲಾಗುತ್ತಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.



