ವಿಜಯಸಾಕ್ಷಿ ಸುದ್ದಿ, ಮೈಸೂರು
ಜಿಲ್ಲೆಯಲ್ಲಿ ಕೊರೊನಾ 3ನೇ ಅಲೆಯ ಆತಂಕ ಹೆಚ್ಚಾಗಿದ್ದು, ಈ ಅಲೆ ಮಕ್ಕಳ ಮೇಲೆಯೇ ಹೆಚ್ಚು ಪರಿಣಾಮ ಬೀರಲಿದ್ದು, ಈಗಿನಿಂದಲೇ ನಿಯಂತ್ರಿಸಲು ಪಾಲಿಕೆಯಿಂದ ಕ್ರಮ ಕೈಗೊಳ್ಳಲಾಗುತ್ತಿದೆ.
ಜಿಲ್ಲೆಯಲ್ಲಿ ಮಕ್ಕಳ ಮೇಲೆ ಕೊರೊನಾ ಅಲೆ ಪರಿಣಾಮ ಬೀರಬಾರದು ಎಂಬ ಕಾರಣಕ್ಕೆ ಪೀಡಿಯಾಟ್ರಿಕ್ ಕೋವಿಡ್ ಕೇರ್ ಸೆಂಟರ್ ನ್ನು ಆರಂಭ ಮಾಡಲಾಗಿದೆ. ಸದ್ಯ ಜಿಲ್ಲೆಯಲ್ಲಿ ನಾಲ್ಕೈದು ಮಕ್ಕಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದೆ. ಪರಿಸ್ಥಿತಿ ಕೈ ಮೀರಿ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರಬಾರದು ಎಂಬ ಕಾರಣಕ್ಕೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.
ಪಾಲಿಕೆಯ ವ್ಯಾಪ್ತಿಯಲ್ಲಿ 150 ಜನ ಮಕ್ಕಳ ತಜ್ಞರು ಇದ್ದಾರೆ. ಇದರೊಂದಿಗೆ ಮಕ್ಕಳಿಗೆ ಅಗತ್ಯವಿರುವ ಐಸಿಯು ಸೇರಿದಂತೆ ಇನ್ನಿತರ ಆರೋಗ್ಯ ಉಪಕರಣಗಳು ಎಷ್ಟಿವೆ ಎಂಬ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದೆ.
ದೊಡ್ಡವರಿಗೆ ನೀಡುವಂತೆ ಮಾತ್ರೆಗಳನ್ನು ಮಕ್ಕಳಿಗೆ ನೀಡಲು ಸಾಧ್ಯವಿಲ್ಲ. ಹೀಗಾಗಿ ಪೀಡಿಯಾಟ್ರಿಕ್ ಮೆಡಿಕಲ್ ಕಿಟ್ ತಯಾರು ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಮಕ್ಕಳಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಾಗಿರುವ ಕಾರಣ ಅವರಿಗೆ ಸೋಂಕು ತಗುಲಿದರೂ ಅಪಾಯದ ಮಟ್ಟ ತಲುಪಿಲ್ಲ. ಹೀಗಾಗಿಯೂ ಮುಂಜಾಗ್ರತೆ ತೆಗೆದುಕೊಳ್ಳದೆ ಇರುವಂತಿಲ್ಲ. ಈ ನಿಟ್ಟಿನಲ್ಲಿಯೇ ಈಗಿನಿಂದಲೇ ಮಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಹೇಳಿದ್ದಾರೆ.