ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ರಾಜ್ಯದ ವಿವಿಧ ಇಲಾಖೆಗಳಲ್ಲಿ ಲಕ್ಷಾಂತರ ಹುದ್ದೆಗಳು ಖಾಲಿ ಇದ್ದರೂ ಸರ್ಕಾರ ಸೀಮಿತ ಸಂಖ್ಯೆಯ ಹುದ್ದೆಗಳನ್ನು ಭರ್ತಿ ಮಾಡುತ್ತಿರುವುದು ಚುನಾವಣಾ ಪೂರ್ವದಲ್ಲಿ ನೀಡಿದ್ದ ಭರವಸೆಗೆ ವಿರುದ್ಧವಾಗಿದೆ ಎಂದು ಪಶ್ಚಿಮ ಪದವೀಧರ ಕ್ಷೇತ್ರದ ನಿಯೋಜಿತ ಅಭ್ಯರ್ಥಿ ಪ್ರೊ. ಎಸ್.ವಿ. ಸಂಕನೂರ ಪ್ರಶ್ನಿಸಿದರು.
ಪಟ್ಟಣದಲ್ಲಿ ಗುರುವಾರ ವಿವಿಧ ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ ಶಿಕ್ಷಕರು ಹಾಗೂ ಪದವೀಧರರನ್ನು ಭೇಟಿ ಮಾಡಿ ಬೆಂಬಲ ಕೋರಿದ ಅವರು, ರಾಜ್ಯದ 43 ಇಲಾಖೆಗಳಲ್ಲಿ ಸುಮಾರು 2.88 ಲಕ್ಷ ಹುದ್ದೆಗಳು ಸೇರಿದಂತೆ ನಿಗಮ-ಮಂಡಳಿಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ಒಟ್ಟು ಸುಮಾರು ನಾಲ್ಕು ಲಕ್ಷ ಹುದ್ದೆಗಳು ಖಾಲಿ ಇವೆ ಎಂದು ಹೇಳಿದರು.
ಸರ್ಕಾರ ಕೇವಲ ಕೆಲವು ಸಾವಿರ ಹುದ್ದೆಗಳ ಭರ್ತಿಗೆ ಮುಂದಾಗಿರುವುದರಿಂದ ನಿರುದ್ಯೋಗಿ ಪದವೀಧರರಲ್ಲಿ ನಿರಾಸೆ ಮೂಡಿದೆ. ಕನಿಷ್ಠ ಎರಡು ಲಕ್ಷ ಹುದ್ದೆಗಳನ್ನಾದರೂ ಭರ್ತಿ ಮಾಡುವ ಮೂಲಕ ನಿರುದ್ಯೋಗ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಸರ್ಕಾರವನ್ನು ನಿರಂತರವಾಗಿ ಒತ್ತಾಯಿಸಲಾಗುವುದು ಎಂದರು.
ಕಳೆದ ಎರಡು ಅವಧಿಯಲ್ಲಿ ಪದವೀಧರ ಕ್ಷೇತ್ರದ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸಲು ಜನರು ಅವಕಾಶ ನೀಡಿದ್ದು, ಈ ಬಾರಿಯೂ ಬೆಂಬಲ ನೀಡುವ ವಿಶ್ವಾಸವಿದೆ. ಚುನಾವಣೆ ಸಂದರ್ಭದಲ್ಲಿ ಮಾತ್ರವಲ್ಲದೆ ಸದಾ ಪದವೀಧರರ ಸಮಸ್ಯೆಗಳ ಪರವಾಗಿ ವಿಧಾನಪರಿಷತ್ತಿನಲ್ಲಿ ಧ್ವನಿಯಾಗುವುದಾಗಿ ಭರವಸೆ ನೀಡಿದರು.
ಶಾಸಕ ಡಾ. ಚಂದ್ರು ಲಮಾಣಿ ಮಾತನಾಡಿ, ಶಿಕ್ಷಕರು, ಪದವೀಧರರು ಹಾಗೂ ಶೈಕ್ಷಣಿಕ ಕ್ಷೇತ್ರದ ಸಮಸ್ಯೆಗಳ ಕುರಿತು ಪ್ರೊ. ಸಂಕನೂರ ಅವರು ಹಲವು ವರ್ಷಗಳಿಂದ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದು, ಅವರಿಗೆ ಪದವೀಧರರು ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಯುವ ಮುಖಂಡ ಗಂಗಾಧರ ಮೆಣಸಿನಕಾಯಿ, ಪ್ರಕಾಶ ಮಾದನೂರ, ಚಂದ್ರಶೇಖರ ಲಮಾಣಿ, ಸಂತೋಷ ರಾಥೋಡ, ಕಿರಣ ಹಿರೇಮಠ ಸೇರಿದಂತೆ ವಿವಿಧ ಶಾಲಾ-ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರು ಹಾಗೂ ಪದವೀಧರರು ಉಪಸ್ಥಿತರಿದ್ದರು.
ನಿರುದ್ಯೋಗಿ ಪದವೀಧರರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸುವುದು ನನ್ನ ಆದ್ಯತೆಯಾಗಿದೆ. ಚುನಾವಣೆಯ ಸಮಯದಲ್ಲಿ ಮಾತ್ರವಲ್ಲದೆ ಸದಾ ಅವರ ಪರವಾಗಿ ನನ್ನ ಧ್ವನಿ ವಿಧಾನಪರಿಷತ್ತಿನಲ್ಲಿ ಪ್ರತಿಧ್ವನಿಸಲಿದೆ.
— ಪ್ರೊ. ಎಸ್.ವಿ. ಸಂಕನೂರ



