ಬೆಳಗಾವಿ: ನಾಗರಪಂಚಮಿ ಹಬ್ಬದ ಸಂಭ್ರಮದ ನಡುವೆಯೇ ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ಹಾವು ಕಚ್ಚಿ 43 ವರ್ಷದ ಮಹಿಳೆ ಮೃತಪಟ್ಟಿರುವ ದುರ್ಘಟನೆ ನಡೆದಿದೆ.
ಮೃತರನ್ನು ಸತ್ಯವ್ವ ಶಿಂಗೆ (43) ಎಂದು ಗುರುತಿಸಲಾಗಿದೆ.
ಸತ್ಯವ್ವ ಅವರು ತಮ್ಮ ಜಮೀನಿನಲ್ಲಿ ಕಸ ತೆಗೆಯುವ ಕೆಲಸ ಮಾಡುತ್ತಿದ್ದ ವೇಳೆ ಪೊದೆಯಲ್ಲಿ ಅಡಗಿದ್ದ ವಿಷಕಾರಿ ಕೊಳಕುಮಂಡಲ ಹಾವು ಏಕಾಏಕಿ ಕಚ್ಚಿದೆ. ಹಾವಿನ ವಿಷ ದೇಹಕ್ಕೆ ವ್ಯಾಪಿಸುತ್ತಿದ್ದಂತೆ ಅವರು ತೀವ್ರ ಅಸ್ವಸ್ಥಗೊಂಡಿದ್ದು, ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಅವರು ಕೊನೆಯುಸಿರೆಳೆದರು.
ನಾಗರಪಂಚಮಿ ಹಬ್ಬದ ದಿನವೇ ಈ ದುರಂತ ಸಂಭವಿಸಿರುವುದು ಕುಟುಂಬಸ್ಥರು ಹಾಗೂ ಗ್ರಾಮಸ್ಥರ ದುಃಖವನ್ನು ಇನ್ನಷ್ಟು ಹೆಚ್ಚಿಸಿದೆ. ಘಟನೆಗೆ ಸಂಬಂಧಿಸಿದಂತೆ ರಾಯಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ.



