ವಿಜಯಸಾಕ್ಷಿ ಸುದ್ದಿ, ಹರಪನಹಳ್ಳಿ : ಭಾರತವನ್ನು ಬ್ರಿಟೀಷರ ದಾಸ್ಯದಿಂದ ಮುಕ್ತಗೊಳಿಸಲು ತಮ್ಮ ಬೆವರು, ನೆತ್ತರು ಹರಿಸಿದ ಮಹಾನ್ ನಾಯಕರನ್ನು ಸ್ಮರಿಸುವ ದಿನ ಇದಾಗಿದೆ ಎಂದು ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ ಹೇಳಿದರು.
ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಗುರುವಾರ ತಾಲೂಕು ಆಡಳಿತದ ವತಿಯಿಂದ ನಡೆದ 78ನೇ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿ ಅವರು ಮಾತನಾಡಿದರು.
ಧ್ವಜಾರೋಹಣದ ಬಳಿಕ ತೆರೆದ ವಾಹನದಲ್ಲಿ ಪಟ್ಟಣದ ವಿವಿಧ ತಂಡಗಳು ಆಕರ್ಷಕ ಕವಾಯತು ನಡೆಸಿದರು. ಪೊಲೀಸ್ ಇಲಾಖೆ, ಅಗ್ನಿಶಾಮಕ ದಳ, ಎನ್ಎಸ್ಎಸ್, ಎನ್ಸಿಸಿ, ಸ್ಕೌಟ್ ಮತ್ತು ಗೈಡ್, ವಿವಿಧ ಮಕ್ಕಳ ತಂಡಗಳು ಪಥಸಂಚಲನ ನಡೆಸಿ ಪ್ರೇಕ್ಷಕರ ಗಮನ ಸೆಳೆದರು. ಬಳಿಕ ತಾಲೂಕು ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ ಮಾತನಾಡಿ. ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನದ ಫಲವಾಗಿ ಸ್ವಾತಂತ್ರ್ಯ ಗಳಿಸಿದ್ದು, ಇದು ಪ್ರತಿಯೊಬ್ಬ ಭಾರತೀಯರ ಪಾಲಿಗೆ ಮಹತ್ವದ ದಿನವಾಗಿದೆ ಎಂದರು.
ಪಟ್ಟಣದ ಪುರಸಭೆ, ತಾಲೂಕು ಬ್ಲಾಕ್ ಕಾಂಗ್ರೆಸ್ ಕಚೇರಿ, ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಶಾಸಕಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿದರು. ತಾಲೂಕಿನಾದ್ಯಂತ ಶಾಲಾ-ಕಾಲೇಜು ಸೇರಿದಂತೆ ವಿವಿಧ ಕಚೇರಿಗಳಲ್ಲಿ ಧ್ವಜಾರೋಹಣ ನಡೆಸಲಾಯಿತು. ಸ್ವಾತಂತ್ರ್ಯ ಹೋರಾಟಗಾರರು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರನ್ನು ಗೌರವಿಸಲಾಯಿತು.