ಬೆಂಗಳೂರು: ಸರ್ಕಾರಕ್ಕೆ ಮಾನ, ಮರ್ಯಾದೆ ಇದ್ದರೆ ಎಲ್ಲರೂ ರಾಜೀನಾಮೆ ನೀಡಬೇಕು. ಸಿಎಂ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ಕೊಡಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು,
ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಬಿಜೆಪಿ 40% ಕಮಿಶನ್ ಪಡೆಯುತ್ತಿದೆ ಎಂದು ಸುಳ್ಳು ಆರೋಪ ಮಾಡಿದ್ದರು. ಈಗ ಗುತ್ತಿಗೆದಾರರ ಸಂಘದವರು, ಕಾಂಗ್ರೆಸ್ ಸರ್ಕಾರ ದುಪ್ಪಟ್ಟು ಕಮಿಷನ್ ಪಡೆಯುತ್ತಿದೆ ಎಂದು ಹೇಳಿ ಸಿಎಂಗೆ ಪತ್ರ ಬರೆದಿದ್ದಾರೆ.
ಅಂದರೆ ಇದು 80 ಪರ್ಸೆಂಟ್ ಸರ್ಕಾರ ಎಂದು ತಿಳಿದುಬಂದಿದೆ. ಸರ್ಕಾರಕ್ಕೆ ಮಾನ, ಮರ್ಯಾದೆ ಇದ್ದರೆ ಎಲ್ಲರೂ ರಾಜೀನಾಮೆ ನೀಡಬೇಕು. ಸಿಎಂ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ಕೊಡಬೇಕು ಎಂದು ಕಿಡಿಕಾರಿದರು. ಸಚಿವರು ಲಂಚ ಪಡೆದಿಲ್ಲ ಎಂದಾದರೆ ಸ್ಪಷ್ಟನೆ ನೀಡಲಿ.
ಇಲ್ಲವೆಂದರೆ ಎಲ್ಲರೂ ಲಂಚ ಪಡೆದಿದ್ದಾರೆ ಎಂದು ತಿಳಿಯಬೇಕಾಗುತ್ತದೆ. ನ್ಯಾ.ನಾಗಮೋಹನ ದಾಸ್ ಸಮಿತಿಯನ್ನು ಸರ್ಕಾರ ರದ್ದು ಮಾಡಿದೆ. ಭ್ರಷ್ಟಾಚಾರ ಬಯಲಾಗುವುದೆಂಬ ಕಾರಣಕ್ಕೆ ಈ ಕ್ರಮ ವಹಿಸಲಾಗಿದೆ. ಬಿಜೆಪಿ ಅವಧಿಯಲ್ಲಿ ಪೇ ಸಿಎಂ ಎಂಬ ಪೋಸ್ಟರ್ ಅಂಟಿಸಿದ್ದರು. ಇದಕ್ಕೆ ರಾಹುಲ್ ಗಾಂಧಿ ಉತ್ತರ ನೀಡಬೇಕು ಎಂದು ಒತ್ತಾಯಿಸಿದರು