HomeGadag Newsವ್ಯವಸ್ಥಿತವಾಗಿ ಪರೀಕ್ಷೆ ನಡೆಸಿ : ವೈಶಾಲಿ ಎಂ.ಎಲ್.

ವ್ಯವಸ್ಥಿತವಾಗಿ ಪರೀಕ್ಷೆ ನಡೆಸಿ : ವೈಶಾಲಿ ಎಂ.ಎಲ್.

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ : ದ್ವಿತೀಯ ಪಿಯುಸಿ ಪರೀಕ್ಷೆ-2 ಅಂತಿಮ ವೇಳಾಪಟ್ಟಿ ಈಗಾಗಲೇ ಪ್ರಕಟವಾಗಿದ್ದು, ಇದೇ ಏಪ್ರಿಲ್ 29ರಿಂದ ಪರೀಕ್ಷೆ ಆರಂಭವಾಗಲಿದೆ. ಆ ನಿಟ್ಟಿನಲ್ಲಿ ಪರೀಕ್ಷೆ ಸಂಬಂಧ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ನಿರ್ದೇಶನದಂತೆ ದ್ವಿತೀಯು ಪಿ.ಯು.ಸಿ.-2 ಪರೀಕ್ಷೆಯನ್ನು ನಡೆಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಸಿ.ಸಿ ಟಿವಿ ಅಳವಡಿಸುವುದು, ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡುವುದು ಸೇರಿದಂತೆ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳುವಂತೆ ಪ.ಪೂ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ನಿರ್ದೇಶನ ನೀಡಿದರು.

ಪರೀಕ್ಷೆಯ ಗಂಭೀರತೆಯನ್ನು ತಿಳಿಯಬೇಕು. ಯಾವುದೇ ಗೊಂದಲಕ್ಕೆ ಅವಕಾಶ ಮಾಡದೇ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು, ಗಾಳಿ, ಬೆಳಕು ವ್ಯವಸ್ಥೆ ಇರಬೇಕು.

ಪರೀಕ್ಷಾ ಸಂದರ್ಭದಲ್ಲಿ ನಿರಂತರ ವಿದ್ಯುತ್ ಸಂಪರ್ಕ ಇರಬೇಕು. ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಗದಗ ಜಿಲ್ಲೆ ರಾಜ್ಯದಲ್ಲಿ ಕೊನೆಯ ಸ್ಥಾನ ಪಡೆದಿರುವುದು ಬೇಸರ ತಂದಿದೆ. ಆದ್ದರಿಂದ ಮುಂದಿನ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ ಉತ್ತಮ ಫಲಿತಾಂಶ ಪಡೆಯಲು ಪ್ರಯತ್ನಿಸಬೇಕು ಎಂದು ಅವರು ಸೂಚಿಸಿದರು.

ಜಿಲ್ಲೆಯ ಎಲ್ಲಾ ಪ.ಪೂ ಕಾಲೇಜುಗಳಲ್ಲಿ ಕಡ್ಡಾಯವಾಗಿ ಬಯೋಮೆಟ್ರಿಕ್ ಅಳವಡಿಸಬೇಕು.

ಪ್ರಾಂಶುಪಾಲರು, ಉಪನ್ಯಾಸಕರು, ಸಿಬ್ಬಂದಿಗಳು ಕಾಲೇಜಿಗೆ ಬರುವ ಮತ್ತು ಹೋಗುವ ಸಮಯ ದಾಖಲಾಗಬೇಕು. ಬಯೋಮೆಟ್ರಿಕ್‌ನಲ್ಲಿ ದೋಷ ಉಂಟಾದಲ್ಲಿ ಆಯಾ ಕಾಲೇಜಿನ ಪ್ರಾಂಶುಪಾಲರನ್ನೇ ಹೊಣೆಗಾರರನ್ನಾಗಿ ಮಾಡಬೇಕು ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಸುರೇಖಾ ಮಾತನಾಡಿ, ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳಬೇಕು. ವಿದ್ಯಾರ್ಥಿಗಳಿಗೆ ಯಾವುದೇ ರೀತಿ ತೊಂದರೆಯಾಗದಂತೆ ಗಮನ ಹರಿಸಬೇಕು ಎಂದು ತಿಳಿಸಿದರು.

ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಂ.ಎ. ರಡ್ಡೇರ, ವಿವಿಧ ಕಾಲೇಜುಗಳ ಪ್ರಾಂಶುಪಾಲರು ಇದ್ದರು.

ಪ.ಪೂ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಜಿ.ಎನ್. ಕುರ್ತಕೋಟಿ ಮಾತನಾಡಿ, ರೋಣ ಪಟ್ಟಣದ ವೀರರಾಣಿ ಚೆನ್ನಮ್ಮ ಪ.ಪೂ ಕಾಲೇಜು, ನರಗುಂದ ಪಟ್ಟಣದ, ಲಕ್ಷ್ಮೇಶ್ವರ ಪಟ್ಟಣದ, ಶಿರಹಟ್ಟಿ ಪಟ್ಟಣದ ಸರಕಾರಿ ಪ. ಪೂ ಕಾಲೇಜು, ಮುಂಡರಗಿಯ ಅನ್ನದಾನೇಶ್ವರ ಕಾಲೇಜು, ಗಜೇಂದ್ರಗಡ ಪಟ್ಟಣದ ಸರಕಾರಿ ಪ.ಪೂ ಕಾಲೇಜು, ಗದಗ ನಗರದ ಎಚ್.ಸಿ.ಇ.ಎಸ್. ಪ.ಪೂ ಕಾಲೇಜು ಮತ್ತು ಜೆ.ಟಿ. ಪದವಿ ಪೂರ್ವ ಕಾಲೇಜು ಈ 8 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಮಾಹಿತಿ ನೀಡಿದರು.

LEAVE A REPLY

Please enter your comment!
Please enter your name here

E-Paper

E-paper

Must Read

spot_img