ವಿಜಯಸಾಕ್ಷಿ ಸುದ್ದಿ, ಗದಗ : ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಗದಗ ಜಿಲ್ಲೆಗೆ ಬಂದಾಗ ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚಂದ, ದಾನ-ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಮಾತ್ರ ಚಂದ ಎಂದಿದ್ದೆ. ಆ ಪ್ರಕಾರ ಜನರ ಆಶೀರ್ವಾದದಿಂದ ಇಂದು ಕಾಂಗ್ರೆಸ್ ಅಧಿಕಾರದಲ್ಲಿದೆ. ಅಧಿಕಾರಕ್ಕೆ ಬಂದ 1 ಗಂಟೆಯಲ್ಲಿ ನುಡಿದಂತೆ ನಡೆದಿದ್ದೇವೆ. ಲೋಕಸಭೆ ಚುನಾವಣೆಯಲ್ಲಿ ಆನಂದಸ್ವಾಮಿ ಗಡ್ಡದೇವರಮಠ ಅವರನ್ನು ಬೆಂಬಲಿಸಬೇಕು ಎಂದು ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ವಿನಂತಿಸಿದರು.
ಶನಿವಾರ ನಗರದ ಮುನ್ಸಿಪಲ್ ಕಾಲೇಜ್ ಮೈದಾನದಲ್ಲಿ ಹಾವೇರಿ-ಗದಗ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಪರ ಪ್ರಚಾರ ಹಾಗೂ ಪ್ರಜಾಧ್ವನಿ ಯಾತ್ರೆ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದರು.
ಕಾಂಗ್ರೆಸ್ ಉಳುವವನೇ ಭೂಮಿಯ ಒಡೆಯ ಕಾಯ್ದೆ ಜಾರಿ ಮಾಡಿತು. ರೈತರ ಸಾಲ ಮನ್ನಾ ಮಾಡಿತು.
ರೈತರಿಗೆ ಉಚಿತ ವಿದ್ಯುತ್ ನೀಡಿತು. ನೀರಾವರಿಗೆ ಅಣೆಕಟ್ಟೆಗಳನ್ನು ಕಟ್ಟಿತು. ಆದರೆ 10 ವರ್ಷದಲ್ಲಿ ರಾಜ್ಯದಲ್ಲಾಗಲೀ, ಕೇಂದ್ರದಲ್ಲಾಗಲೀ ಬಿಜೆಪಿ ಏನು ಸಾಧನೆ ಮಾಡಿದೆ ಎಂದು ಬೊಮ್ಮಾಯಿ ಅವರನ್ನು ಪ್ರಶ್ನಿಸಿ ಎಂದು ಡಿ.ಕೆ. ಶಿವಕುಮಾರ ಹೇಳಿದರು.
ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರಕಾರ ನುಡಿದಂತೆ ನಡೆದಿದೆ.
ಕೇಂದ್ರದಲ್ಲಿಯೂ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲ ಗ್ಯಾರಂಟಿಗಳನ್ನು ಈಡೇರಿಸಲಾಗುವುದು. ಬಿಜೆಪಿ ಉಳ್ಳವರ ಸಾಲ ಮನ್ನಾ ಮಾಡಿದರೆ, ಕಾಂಗ್ರೆಸ್ ರೈತರ ಸಾಲ ಮನ್ನಾ ಮಾಡಿ ಈ ದೇಶದ ರೈತರ ಹಿತವನ್ನು ಕಾಪಾಡುವ ಕೆಲಸ ಮಾಡಿದೆ ಎಂದರು.
ಸಮಾರಂಭದಲ್ಲಿ ಚಿತ್ರನಟ ಸಾಧು ಕೋಕಿಲಾ, ವಿ.ಪ ಸದಸ್ಯ ಸಲೀಂ ಅಹ್ಮದ್, ಶಾಸಕ ಶ್ರೀನಿವಾಸ ಮಾನೆ, ರೋಣ ಶಾಸಕ ಹಾಗೂ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಿ.ಎಸ್. ಪಾಟೀಲ, ಶಾಸಕ ವಿನಯ ಕುಲಕರ್ಣಿ, ಪಾಂಡಿಚೇರಿ ಮಾಜಿ ಸಿಎಂ ನಾರಾಯಣಸ್ವಾಮಿ, ಎಐಸಿಸಿ ವೀಕ್ಷಕ ಮಯೂರ ಕುಮಾರ ಬಿ., ನಿಕೇತರಾಜ್ ಮೌರ್ಯ, ಹಾವೇರಿ-ಗದಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ, ಮಾಜಿ ಶಾಸಕರಾದ ಡಿ.ಆರ್. ಪಾಟೀಲ, ಬಿ.ಆರ್. ಯಾವಗಲ್, ರಾಮಣ್ಣ ಲಮಾಣಿ, ರಾಮಕೃಷ್ಣ ದೊಡ್ಡಮನಿ, ಜಿ.ಎಸ್. ಗಡ್ಡದೇವರಮಠ, ಮುಖಂಡರಾದ ಸಿದ್ದು ಪಾಟೀಲ, ವಾಸಣ್ಣ ಕುರುಡಗಿ, ಟಿ. ಈಶ್ವರ, ಐ.ಜಿ. ಸನದಿ, ಎ.ಎಂ. ಹಿಂಡಸಗೇರಿ, ಎಲ್.ಡಿ. ಚಂದಾವರಿ, ನೀಲಮ್ಮ ಬೋಳನವರ, ಅಕ್ಬರಸಾಬ ಬಬರ್ಚಿ, ರಾಜುಗೌಡ ಕೆಂಚನಗೌಡ್ರ, ಬಸವರಾಜ ಕಡೆಮನಿ, ವಿ.ಆರ್. ಗುಡಿಸಾಗರ, ವಿ.ಬಿ. ಸೋಮನಕಟ್ಟಿಮಠ, ಅಶೋಕ ಮಂದಾಲಿ, ಬಸವರಾಜ ಸುಂಕಾಪುರ ಇತರರು ಉಪಸ್ಥಿತರಿದ್ದರು.
ಪ್ರಿಯಾಂಕಾ ಗಾಂಧಿ ಅನುಪಸ್ಥಿತಿ
ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ದಾವಣಗೆರೆಯಿಂದ ಗದುಗಿಗೆ ಆಗಮಿಸಿದರೂ, ಆದರೆ ರಾಯಬರೇಲಿಗೆ ತುರ್ತಾಗಿ ತೆರಳಬೇಕಿದ್ದರಿಂದ ಹುಬ್ಬಳ್ಳಿ ಮೂಲಕ ನವದೆಹಲಿಗೆ ನಿರ್ಗಮಿಸಿದರು. ಮಧ್ಯಾಹ್ನ 3 ಗಂಟೆಯಿಂದಲೇ ಪ್ರಿಯಾಂಕಾ ಗಾಂಧಿ ಅವರ ಮಾತುಗಳನ್ನು ಕೇಳಲು ಆಗಮಿಸಿದ್ದ ಸಾವಿರಾರು ಕಾರ್ಯಕರ್ತರು, ಅಭಿಮಾನಿಗಳು ನಿರಾಸೆಗೊಂಡರು. ಆದರೆ ಡಿ.ಕೆ. ಶಿವಕುಮಾರ ಭಾಷಣದ ವೇಳೆ ದೂರವಾಣಿಯಲ್ಲಿ ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಪ್ರಿಯಾಂಕಾ ಗಾಂಧಿ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ಕೊಟ್ಟು ಬದಲಾವಣೆಯನ್ನು ತಂದಿದ್ದೀರಿ. ಆ ಬದಲಾವಣೆಯನ್ನು ಕೇಂದ್ರದಲ್ಲಿಯೂ ತರಬೇಕು ಎಂದು ವಿನಂತಿಸಿದರು.
ಕಾನೂನು ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವ ಎಚ್.ಕೆ. ಪಾಟೀಲ ಮಾತನಾಡಿ, ಗ್ಯಾರಂಟಿ ಕಾರ್ಯಕ್ರಮಗಳ ಮೂಲಕ ಕಾಂಗ್ರೆಸ್ ಕ್ರಾಂತಿಕಾರಕ ಬದಲಾವಣೆ ತಂದಿದೆ. ರಾಜ್ಯದ ೧.೧೦ ಕೋಟಿ ಕುಟುಂಬಗಳನ್ನು ಬಡತನ ರೇಖೆಯಿಂದ ಮೇಲೆತ್ತಿ ಮಧ್ಯಮ ವರ್ಗದವರನ್ನಾಗಿ ಮಾಡಿದ ಕೀರ್ತಿ ಕಾಂಗ್ರೆಸ್ ಸರಕಾರಕ್ಕೆ ಸಲ್ಲುತ್ತದೆ. ಈ ಹಿನ್ನೆಲೆಯಲ್ಲಿ ದೇಶದ ಭವಿಷ್ಯ ನಿರ್ಧರಿಸುವ ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಎಂದರು.