ವಿಜಯಸಾಕ್ಷಿ ಸುದ್ದಿ, ಗದಗ : ಗದುಗಿನ ಎಸ್ಸಿಎಸ್ ಶಿಕ್ಷಣ ಸಂಸ್ಥೆಯ ಸನ್ಮಾರ್ಗ ಪದವಿಪೂರ್ವ ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದ 2019–20ರ ಸಾಲಿನ ವಿದ್ಯಾರ್ಥಿಯಾದ ಪ್ರಣವ ಅಡಗಟ್ಟಿ ವಿಜ್ಞಾನ ವಿಭಾಗದಲ್ಲಿ ದ್ವಿತೀಯ ಪಿಯುಸಿಯನ್ನು ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣನಾಗಿದ್ದು, ತರುವಾಯ ಇನ್ಫಾರ್ಮೇಷನ್ ಸೈನ್ಸ್ ಪದವಿ ಪಡೆದು, ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆಯಾಗಿ ಈಗ ಜರ್ಮನಿಯ ಪ್ರಖ್ಯಾತ ಕಂಪನಿಯಲ್ಲಿ ಸಾಫ್ಟವೇರ್ ಇಂಜಿನಿಯರ್ ಆಗಿ ನೇಮಕವಾಗಿರುವ ಪ್ರಯುಕ್ತ ಕಾಲೇಜಿನ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ. ಪ್ರೇಮಾನಂದ ರೋಣದ ಸಾಧಕ ವಿದ್ಯಾರ್ಥಿಯನ್ನು ಅಭಿನಂದಿಸಿ, ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಸನ್ಮಾರ್ಗ ಪ.ಪೂ ಮಹಾವಿದ್ಯಾಲಯದ ಚೇರ್ಮನ್ ಪ್ರೊ. ರಾಜೇಶ ಕುಲಕರ್ಣಿ, ನಿರ್ದೇಶಕರಾದ ಪ್ರೊ. ರೋಹಿತ್ ಒಡೆಯರ್, ಪ್ರೊ. ರಾಹುಲ್ ಒಡೆಯರ್, ಪ್ರೊ. ಪುನೀತ್ ದೇಶಪಾಂಡೆ, ಪ್ರೊ. ಸೈಯದ್ ಮತೀನ್ ಮುಲ್ಲಾ, ಆಡಳಿತಾಧಿಕಾರಿ ಎಮ್.ಸಿ. ಹಿರೇಮಠ, ಉಪನ್ಯಾಸಕ ವೃಂದ ಹಾಗೂ ಮಹಾವಿದ್ಯಾಲಯದ ಸಿಬ್ಬಂದಿಗಳು ಉಪಸ್ಥಿತರಿದ್ದು ಅಭಿನಂದಿಸಿದರು.