ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ
ಹೆಣ್ಣು ಅಬಲೆಯಲ್ಲ ಅವಳು ಸಬಲೆ ಆಗಿದ್ದು, ಗಂಡು ಮಗುವಿನಂತೆ ಹೆಣ್ಣು ಮಗುವಿಗೂ ಹೆಚ್ಚು ಪ್ರಾಶಸ್ತ್ಯ ನೀಡಬೇಕು. ಹೆಣ್ಣು ಗಂಡೆಂಬ ತಾರತಮ್ಯ ಮಾಡದೇ ಇಬ್ಬರನ್ನೂ ಸಮನಾಗಿ ಕಾಣಬೇಕು ಎಂದು ಜಿಲ್ಲಾ ಪಂಚಾಯತ ಸಿಇಒ ಡಾ.ಆನಂದ ಕೆ. ಹೇಳಿದರು.
ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಗದಗ ಇವರ ಸಹಯೋಗದಲ್ಲಿ ನಡೆದ ಮಗಳನ್ನು ಉಳಿಸಿ ಮಗಳನ್ನು ಓದಿಸಿ (ಬೇಟಿ ಬಚಾವೋ ಬೇಟಿ ಪಡಾವೋ) ಯೋಜನೆಯಡಿ ಹಮ್ಮಿಕೊಳ್ಳಲಾಗಿದ್ದ ಅಂತರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಸ್ತುತ ದಿನಗಳಲ್ಲಿ ಹೆಣ್ಣು ಮಕ್ಕಳು ಪ್ರತಿಯೊಂದು ಕ್ಷೇತ್ರಗಳಲ್ಲಿಯೂ ಮುಂಚೂಣಿಯಲ್ಲಿರುವುದು ಶ್ಲಾಘನೀಯವಾಗಿದ್ದು, ಪ್ರತಿ ಹೆಣ್ಣು ಮಗುವಿಗೂ ಉತ್ತಮ ಶಿಕ್ಷಣ ನೀಡುವ ಮೂಲಕ ಸಮಾನ ಅವಕಾಶ ಕಲ್ಪಿಸಿ ಉತ್ತೇಜನ ನೀಡಬೇಕು. ಮನೆಯೇ ಮೊದಲ ಪಾಠ ಶಾಲೆಯಾಗಿದ್ದು, ಉತ್ತಮ ಸಂಸ್ಕಾರಯುತ ಮಕ್ಕಳನ್ನಾಗಿ ಬೆಳೆಸಬೇಕು ಎಂದರು.
ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಮಾತನಾಡಿ, ಹಿಂದೆ ಇದ್ದ ಪುರುಷ ಪ್ರಧಾನ ಸಮಾಜದಿಂದ ಮುಕ್ತಿ ಹೊಂದಿ, ಪ್ರಸ್ತುತ ಕಾಲಘಟ್ಟದಲ್ಲಿ ಹೆಣ್ಣು ಮಕ್ಕಳಿಗೆ ಹೆಚ್ಚು ಪ್ರಾಧಾನ್ಯತೆ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ಸರ್ಕಾರ ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಕುಟುಂಬದ ನಿರ್ವಹಣೆಯಲ್ಲಿ ಮಹಿಳೆಯರ ಪಾತ್ರ ಬಹುಮಖ್ಯವಾಗಿದ್ದು, ಹೆಣ್ಣು ಮಗುವೆಂಬ ಕೀಳರಿಮೆಯಿಂದ ಹೊರಬರಬೇಕು. ಹೆಣ್ಣು ಮಗು ಉಳಿಸಿ ಪ್ರೋತ್ಸಾಹಿಸಲು ಸಾರ್ವಜನಿಕರು ಕೈ ಜೋಡೊಸಬೇಕು ಎಂದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಜಿ.ಸಲಗರೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಉಸ್ಮಾನ್ ಎ. ಮಾತನಾಡಿ, ಜಗತ್ತಿನಾದ್ಯಂತ ಗಂಡು ಮತ್ತು ಹೆಣ್ಣಿನ ನಡುವಿನ ಜನನ ಪ್ರಮಾಣದ ಅಂತರ ಕಾಪಾಡುವುದೇ ಅಂತರಾಷ್ಟ್ರೀಯ ಹೆಣ್ಣು ಮಗುವಿನ ದಿನದ ಉದ್ದೇಶವಾಗಿದೆ. ಈ ಬಾರಿಯ ಘೋಷವಾಕ್ಯ ‘ಹೆಣ್ಣು ಮಕ್ಕಳು ನನ್ನ ಧ್ವನಿ, ನನ್ನ ಸಮಾನ’ ಆಗಿದೆ. ಹೆಣ್ಣು ಮಕ್ಕಳನ್ನು ಪೋಷಿಸುವ ಮೂಲಕ ಹೆಣ್ಣು ಜೀವ ಉಳಿಸುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ. ಎಂದರು.
ಹೆಣ್ಣು ಮಗುವಿನ ಪೋಷಣೆ, ಶಿಕ್ಷಣ, ವೈದ್ಯಕೀಯ ಆರೈಕೆ, ಬಾಲ್ಯ ವಿವಾಹಗಳ ಬಗ್ಗೆ ಹೆಚ್ಚು ಜಾಗೃತಿ ಮೂಡಿಸಬೇಕು. ಅಲ್ಲದೇ, ಹೆಣ್ಣು ಬ್ರೂಣ ಹತ್ಯೆ ತಡೆಗಟ್ಟಬೇಕು. ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎಂಬ ನಾಣ್ಣುಡಿಯಂತೆ ಪ್ರತಿ ಹೆಣ್ಣು ಮಗುವಿಗೂ ಶಿಕ್ಷಣ ನೀಡಬೇಕು ಎಂದು ವಿದ್ಯಾರ್ಥಿನಿಯರಾದ ದೀಪಾ ಹಿರೇಮಠ ಹಾಗೂ ಪೂರ್ಣಿಮಾ ಸವದತ್ತಿಮಠ ಅಭಿಪ್ರಾಯ ಹಂಚಿಕೊಂಡರು.
ಸಾಧನೆಗೈದ ತಾಯಂದಿರು ಸೇರಿದಂತೆ ಹೆಣ್ಣು ಮಕ್ಕಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ.ಬಿ.ಎಂ.ಗೊಜನೂರ, ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಯ ನಿರೂಪಣಾಧಿಕಾರಿ ಹೆಚ್.ಹೆಚ್.ಕುಕನೂರ, ವಯಸ್ಕರ ಶಿಕ್ಷಣಾಧಿಕಾರಿ ಮಂಗಳಾ ತಾಪಸ್ಕರ್, ಅಂಗನವಾಡಿಯ ಮೇಲ್ವಿಚಾರಕರು, ಕಾರ್ಯಕರ್ತೆಯರು ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.