ವಿಜಯಸಾಕ್ಷಿ ಸುದ್ದಿ, ಗದಗ : ಇತ್ತಿಚಿನ ದಿನಗಳಲ್ಲಿ ಸೈಬರ್ ವಂಚನೆ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಜಿಲ್ಲೆಯಲ್ಲಿಯೂ ಸೈಬರ್ ಪ್ರಕರಣಗಳು ವರದಿಯಾಗುತ್ತಿದ್ದು, ಸಾರ್ವಜನಿಕರು ಇಂತಹ ಪ್ರಕರಣದಿಂದ ಎಚ್ಚರಿಕೆಯಿಂದಿರಬೇಕು. ವಿವಿಧ ಬ್ಯಾಂಕ್ಗಳ ಹೆಸರು ಹೇಳುವ ವಂಚಕರು ಕೆವೈಸಿ ಅಪ್ಡೇಟ್ ನೆಪದಲ್ಲಿ ಮಾಹಿತಿ ಕಲೆ ಹಾಕಿ ಹಣ ದೋಚುತ್ತಿದ್ದಾರೆ. ಇಂತಹ ಪ್ರಕರಣ ಕಂಡುಬಂದಲ್ಲಿ 1930 ಸಂಖ್ಯೆಗೆ ಕರೆ ಮಾಡಿ ದೂರು ದಾಖಲಿಸಿ ಎಂದು ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡರು.
ನಗರದ ತಮ್ಮ ಕಛೇರಿಯಲ್ಲಿ ಬುಧವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂತಹ ಪ್ರಕರಣ ಬೆಳಕಿಗೆ ಬಂದಾಗ ತಕ್ಷಣ ಜಿಲ್ಲೆಯ ಯಾವುದೇ ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸಬಹುದು. ಇದರ ಬಗ್ಗೆ ಈಗಾಗಲೇ ಜಿಲ್ಲಾ ಪೊಲೀಸ್ ವತಿಯಿಂದ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜೊತೆಗೆ ಮನೆ-ಮನೆಗೆ ತೆರಳಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಪ್ರಯತ್ನ ಮಾಡುತ್ತಿದ್ದೇವೆ ಎಂದು ತಿಳಿಸಿದರು.
ಸಿಇಎನ್ ಪೊಲೀಸ್ ಠಾಣೆಯಲ್ಲಿ 32, ಬೆಟಗೇರಿ, ರೋಣ, ಗಜೇಂದ್ರಗಡ, ನರೆಗಲ್, ಗದಗ ಗ್ರಾಮೀಣ ಠಾಣೆ ಸೇರಿದಂತೆ 12ಕ್ಕೂ ಹೆಚ್ಚು ಸೈಬರ್ ಕ್ರೈಂ ಪ್ರಕರಣಗಳು ದಾಖಲಾಗಿವೆ. ವಂಚಕರು ಹಲವು ವಿಧಗಳಲ್ಲಿ ಜನರನ್ನು ವಂಚಿಸಲು ಪ್ರಯತ್ನಿಸುತ್ತಾರೆ. ಸಾರ್ವಜನಿಕರು ಈ ಬಗ್ಗೆ ಅತ್ಯಂತ ಜಾಗರೂಕರಾಗಿರಬೇಕು ಎಂದು ಎಸ್ಪಿ ಬಿ.ಎಸ್. ನೇಮಗೌಡ ತಿಳಿಸಿದರು.
ಎಪಿಕೆ ಫೈಲ್ ಮೂಲಕ ಹಣ ದೋಚುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಎಪಿಕೆ ಫೈಲ್ ತೆರೆದ ತಕ್ಷಣ ನಮ್ಮ ಮೊಬೈಲ್ ವಂಚಕರ ನಿಯಂತ್ರಣಕ್ಕೆ ಬರುತ್ತದೆ. ಇಡಿ, ತನಿಖಾ ಸಂಸ್ಥೆಗಳ ಹೆಸರು ಹೇಳಿ ಪ್ರಕರಣ ದಾಖಲಿಸುತ್ತೇವೆ ಎಂದು ಬೆದರಿಕೆ ಒಡ್ಡುವ ಡಿಜಿಟಲ್ ಅರೆಸ್ಟ್ ಎಂಬ ಹೊಸ ವಿಧದ ಮೋಸ ನಡೆಯುತ್ತಿದೆ. ಈ ರೀತಿಯ ವಂಚನೆಗಳು ಕಂಡುಬಂದರೆ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಬೇಕು. – ಬಿ.ಎಸ್. ನೇಮಗೌಡ.
ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ.