ವಿಜಯಸಾಕ್ಷಿ ಸುದ್ದಿ, ಗದಗ : ಗದಗ ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಸೂಕ್ತ ವಾತಾವರಣವಿದ್ದು, ತೋಟಗಾರಿಕೆ ಜಿಲ್ಲೆಯಾಗಿಸಲು ಅಧಿಕಾರಿಗಳು ಶ್ರಮಿಸಬೇಕೆಂದು ಗದಗ-ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ( ದಿಶಾ) ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ವಿವಿಧೆಡೆ ಮೆಣಸಿನಕಾಯಿ, ಈರುಳ್ಳಿ, ಮಾವು, ಬಾಳೆ, ದ್ರಾಕ್ಷಿ, ದಾಳಿಂಬೆ ಬೆಳೆಯಲಾಗುತ್ತಿದ್ದು, ಮುಂಡರಗಿ ಹಾಗೂ ಶಿರಹಟ್ಟಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ತೋಟಗಾರಿಕೆ ಬೆಳೆಗಳನ್ನು ಬೆಳೆಯಲಾಗುತ್ತಿದೆ.
ಆಯಾ ಪ್ರದೇಶದ ಸಂಭಾವ್ಯತೆಯನ್ನು ಪರಿಶೀಲಿಸಿ 60 ದಿನಗಳೊಳಗೆ ಡಿಪಿಆರ್ ಸಿದ್ಧಪಡಿಸಿ ಸಲ್ಲಿಸಬೇಕು.
ನಂತರ ಮ್ಯಾಪಿಂಗ್ ಮಾಡಿ ರೈತರು ಹಾಗೂ ಬ್ಯಾಂಕ್ ಅಧಿಕಾರಿಗಳೊಂದಿಗೆ ಈ ಕುರಿತು ತರಬೇತಿ ನೀಡಿದರೆ ತೋಟಗಾರಿಕೆಯಲ್ಲಿ ಅತ್ಯುನ್ನತ ಫಲಿತಾಂಶವನ್ನು ಕಾಣಬಹುದು, ಜಿಲ್ಲೆಯನ್ನು ತೋಟಗಾರಿಕೆ ಜಿಲ್ಲೆಯನ್ನಾಗಿಸಬಹುದು. ಈ ನಿಟ್ಟಿನಲ್ಲಿ ಜಿಲ್ಲೆಯ ಮಹತ್ವಪೂರ್ಣ ಅಭಿವೃದ್ಧಿಗೆ ಪ್ರಾಶಸ್ತ್ಯ ಕೊಟ್ಟಂತಾಗುತ್ತದೆ. ಈ ನಿಟ್ಟಿನಲ್ಲಿ ಅಧಿಕಾರಿವರ್ಗ ಕಾರ್ಯ ಪ್ರವೃತ್ತರಾಗಬೇಕು ಎಂದು ತಿಳಿಸಿದರು.
ಈಗಾಗಲೇ ಮಳೆಗಾಲ ಆರಂಭವಾಗಿದ್ದು, ಜಿಲ್ಲೆಯಲ್ಲಿ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳಬೇಕು. ಈ ಕುರಿತು ತಹಸೀಲ್ದಾರರು ಹಾಗೂ ತಾ.ಪಂ ಕಾರ್ಯನಿರ್ವಹಣಾಧಿಕಾರಿಗಳು, ನೀರಾವರಿ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ಜರುಗಿಸಿ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಕೃಷಿ ಇಲಾಖೆ ಹಾಗೂ ಸಹಕಾರ ಇಲಾಖೆಗಳು ಸಮನ್ವಯ ಸಾಧಿಸುವಂತೆ ಜಿಲ್ಲಾಧಿಕಾರಿಗಳು ನಿಗಾ ವಹಿಸಬೇಕು. ಸಹಕಾರ ಸಂಘಗಳ ಮೂಲಕ ರೈತರಿಗೆ ಬಿತ್ತನೆ ಬೀಜ ಗೊಬ್ಬರ ಸರಬರಾಜು ಆಗಬೇಕು. ನಗರದ ಕುಡಿಯುವ ನೀರಿನ ಪೂರೈಕೆಯಲ್ಲಿ ಆಗುತ್ತಿರುವ ವ್ಯತ್ಯಯವನ್ನು ಸರಿಪಡಿಸಲು ಜಿಲ್ಲಾಧಿಕಾರಿಗಳು ವಾರಕ್ಕೊಂದು ಸಾರಿಯಾದರೂ ಸಂಬಂಧಿಸಿದ ಇಲಾಖೆಗಳ ಮುಖ್ಯಸ್ಥರೊಂದಿಗೆ ಸಭೆ ಜರುಗಿಸಿ ಸಮರ್ಪಕ ಕುಡಿಯುವ ನೀರಿನ ಪೂರೈಕೆಯಾಗುತ್ತಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು ಎಂದರು.
ನರಗುಂದ ಶಾಸಕ ಸಿ.ಸಿ. ಪಾಟೀಲ ಮಾತನಾಡಿ, ಜೆಜೆಎಂ ಯೋಜನೆಯಡಿ ಸಮರ್ಪಕ ನೀರು ಸರಬರಾಜಿನ ಕುರಿತು ಪರಿಶೀಲನೆ ನಡೆಸಬೇಕು. ಪೈಪ್ ಒಡೆದು ನೀರು ಪೋಲಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ ಮಾತನಾಡಿ, ಜಿಲ್ಲೆಯಲ್ಲಿ ಬಿತ್ತನೆ ಪ್ರದೇಶದ ಶೇ. 65ರಷ್ಟು ಬಿತ್ತನೆಯಾಗಿದೆ. ಜಿಲ್ಲೆಯಲ್ಲ್ಲಿ ರಸಗೊಬ್ಬರ ಹಾಗೂ ಬಿತ್ತನೆ ಬೀಜದ ಅಭಾವವಿಲ್ಲ ಎಂದು ಸಭೆಗೆ ತಿಳಿಸಿದರು.
ಕಳಪೆ ಗುಣಮಟ್ಟದ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಮಾರಾಟಗಾರರಿದ್ದರೆ ಅಂತಹವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು. ರೈತರಿಗಿರುವ ಯೋಜನೆಗಳನ್ನು ವಿಳಂಬ ಮಾಡದೇ ಅವರಿಗೆ ದೊರಕಿಸಿದರೆ ನ್ಯಾಯ ಒದಗಿಸಿದಂತಾಗುತ್ತದೆ ಎಂದು ಸಂಸದರು ಹೇಳಿದರು.
ಸಭೆಯಲ್ಲಿ ವಿ.ಪ ಸದಸ್ಯ ಎಸ್.ವಿ. ಸಂಕನೂರ, ಶಾಸಕ ಚಂದ್ರು ಲಮಾಣಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ಉಪ ಅರಣ್ಯ ಸಂರಕ್ಷಣಾಧಿಕಾರಿ ಲೇಖರಾಜ, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ. ಉಪವಿಭಾಗಾಧಿಕಾರಿ ವೆಂಕಟೇಶ ನಾಯ್ಕ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಾರುತಿ ಬ್ಯಾಕೋಡ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್. ನೀಲಗುಂದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪಿ.ವೈ. ಶೆಟ್ಟೆಪ್ಪನವರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
ಜಲಜೀವನ ಮಿಷನ್ ಯೋಜನೆಯ 336 ಕಾಮಗಾರಿಗಳಲ್ಲಿ 200 ಕಾಮಗಾರಿಗಳು ಪೂರ್ಣಗೊಂಡಿವೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್ ಸಭೆಗೆ ತಿಳಿಸಿದಾಗ, ಬಡವರಿಗೆ ಶಾಶ್ವತವಾಗಿ ನೀರು ಒದಗಿಸುವ ಯೋಜನೆ ಇದಾಗಿದ್ದು, ಈ ಯೋಜನೆಯ ಅನುಷ್ಠಾನದ ಪರಿಶೀಲನೆ ಕೈಗೊಳ್ಳಿ. ಅಲ್ಪಾವಧಿ ಟೆಂಡರ್ ಕರೆದು ಬಾಕಿ ಉಳಿದ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಸಂಸದರು ತಿಳಿಸಿದರು.
ಬಡಜನರ, ದೀನ-ದಲಿತರ, ಮಹಿಳೆಯರ ಶ್ರೇಯೋಭಿವೃದ್ಧಿಗಾಗಿ ವಿವಿಧ ಯೋಜನೆಗಳನ್ನು ರಾಜ್ಯ ಮತ್ತು ಕೇಂದ್ರ ಸರಕಾರದ ಸಹಭಾಗಿತ್ವದಲ್ಲಿ ಜಾರಿಗೊಳಿಸಲಾಗುತ್ತದೆ. ಯೋಜನೆಯ ಸ್ಪಷ್ಟತೆಯನ್ನು ತಿಳಿದುಕೊಂಡು ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸಿ ಯೋಜನೆಯ ಸೌಲಭ್ಯ ಅರ್ಹರಿಗೆ ತಲುಪಿಸುವ ಕಾರ್ಯವನ್ನು ಅಧಿಕಾರಿಗಳು ಮಾಡಬೇಕು. ಯೋಜನೆಯ ಅನುಷ್ಠಾನಕ್ಕೆ ವಿನಾಕಾರಣ ವಿಳಂಬ ಹಾಗೂ ಉದಾಸೀನ ತೋರಬಾರದು. ಹಾಗೆ ಮಾಡಿದರೆ ನಮ್ಮಷ್ಟಕ್ಕೆ ನಾವೇ ಆತ್ಮವಂಚನೆ ಮಾಡಿಕೊಂಡಂತಾಗುತ್ತದೆ.
– ಬಸವರಾಜ ಬೊಮ್ಮಾಯಿ.
ಹಾವೇರಿ-ಗದಗ ಕ್ಷೇತ್ರದ ಸಂಸದರು.