ವಿಜಯಸಾಕ್ಷಿ ಸುದ್ದಿ, ಗದಗ : ಯೋಗವು ನಮ್ಮ ದೇಶದ ಋಷಿ-ಮುನಿಗಳಿಂದ ಬಂದ ವಿದ್ಯೆಯಾಗಿದೆ. ಈ ವಿದ್ಯೆ ಜಾಗತಿಕ ಮಟ್ಟದಲ್ಲಿ ಪ್ರಸಿದ್ಧವಾಗಿದೆ ಮತ್ತು ವಿದೇಶಗಳಲ್ಲಿಯೂ ಸಹ ಹೆಚ್ಚು ಆಸಕ್ತಿಯಿಂದ ಯೋಗಾಭ್ಯಾಸ ಮಾಡುತ್ತಿರುವುದು ನಮ್ಮ ಯೋಗದ ಬಗ್ಗೆ ಹೆಮ್ಮೆ ಎನಿಸುತ್ತದೆ. ಈ ಯೋಗವನ್ನು ನಮ್ಮ ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ವಿಧಾನ ಪರಿಷತ್ ಸದಸ್ಯ ಎಸ್.ವ್ಹಿ. ಸಂಕನೂರ ಅಭಿಪ್ರಾಯಪಟ್ಟರು.
ಭಾರತ ಸರ್ಕಾರ, ಕರ್ನಾಟಕ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಗದಗ ಜಿಲ್ಲಾ ಆಯುಷ್ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ-2024 ಅಂಗವಾಗಿ ನಗರದ ಮುನ್ಸಿಪಲ್ ಆವರಣದಲ್ಲಿ ಗುರುವಾರ ಬೆಳಿಗ್ಗೆ ಸಾಮೂಹಿಕ ಯೋಗ ನಡಿಗೆ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.
ಅಪರ ಜಿಲ್ಲಾಧಿಕಾರಿಗಳು ಮಾತನಾಡಿ, ಯೋಗ ನಡಿಗೆ ಮೂಲಕ ವಿದ್ಯಾರ್ಥಿಗಳು, ಎಲ್ಲ ವೈದ್ಯಕೀಯ ವಿದ್ಯಾರ್ಥಿಗಳು, ವಿವಿಧ ಯೋಗ ತರಬೇತಿ ಸಂಸ್ಥೆಗಳು ಒಂದೆಡೆ ಸೇರಿ ಪಾಲ್ಗೊಂಡಿರುವುದು ಮತ್ತು ಆಯುಷ್ ಇಲಾಖೆ ಈ ಕಾರ್ಯಕ್ರಮ ಆಯೋಜಿಸಿರುವುದು ಶ್ಲಾಘನೀಯ ಎಂದರು.
ಡಾ. ಕಮಲಾಕ್ಷಿ ಅಂಗಡಿ ಮಾತನಾಡಿ, ಇಂದಿನ ಆಧುನಿಕ ಜೀವನದಲ್ಲಿ ಯೋಗ ಅತ್ಯಂತ ಉಪಯುಕ್ತವಾಗಿದ್ದು, ಶಾಲಾ ವಿದ್ಯಾರ್ಥಿಗಳು, ಯುವಕರು, ವಯೋವೃದ್ಧರು ತಮ್ಮ ತಮ್ಮ ವಯಸ್ಸಿಗೆ ತಕ್ಕಂತೆ ಪ್ರತಿನಿತ್ಯ ಯೋಗಾಭ್ಯಾಸವನ್ನು ಮಾಡುವುದರಿಂದ ನಮ್ಮ ಆರೋಗ್ಯವು ಉತ್ತಮವಾಗಿರುತ್ತದೆ ಎಂದರು.
ಈ ಕಾರ್ಯಕ್ರಮದಲ್ಲಿ ಗದಗ ಜಿಲ್ಲಾ ಆಯುಷ್ ಆಧಿಕಾರಿ ಮಲ್ಲಿಕಾರ್ಜುನ ಉಪ್ಪಿನ, ಡಾ. ಸಂಜೀವ ನಾರಪ್ಪನವರ, ಡಿಡಿಪಿಐ ಎಂ.ಎ. ರಡ್ಡೇರ, ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್. ಬುರಡಿ, ವ್ಹಿ.ವ್ಹಿ. ನಡುವಿನಮನಿ, ದೈಹಿಕ ಶಿಕ್ಷಣಾಧಿಕಾರಿ ಜಗದೀಶ ಜಿ.ಎಂ, ಶ್ಯಾಮ ಲಾಂಡೆ, ಬ್ರಹ್ಮ ಕುಮಾರಿ ವಿಶ್ವವಿದ್ಯಾಲಯ, ನರ್ಸಿಂಗ್ ವಿದ್ಯಾರ್ಥಿನಿಯರು, ಡಿಜಿಮ್ ಆಯುವೇರ್ದಿಕ್ ವೈದ್ಯಕೀಯ ವಿದ್ಯಾರ್ಥಿಗಳು, ಸ್ಕೌಟ್ಸ್ & ಗೈಡ್ಸ್ ಹಾಗೂ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.



