ವಿಜಯಸಾಕ್ಷಿ ಸುದ್ದಿ, ಗದಗ : ನಮ್ಮ ದೈನಂದಿನ ಜೀವನದಲ್ಲಿ ದೈಹಿಕ ಹಾಗೂ ಮಾನಸಿಕ ಸದೃಢತೆ ಕಾಪಾಡಿಕೊಳ್ಳಲು ಯೋಗವು ಮುಖ್ಯ ಪಾತ್ರ ವಹಿಸುತ್ತದೆ ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಅಭಿಪ್ರಾಯಪಟ್ಟರು.
ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಯತ್, ಜಿಲ್ಲಾ ಆಯುಷ್ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ಮತ್ತು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ನಗರಸಭೆ ಗದಗ-ಬೆಟಗೇರಿ ಇವರುಗಳ ಸಂಯುಕ್ತ ಆಶ್ರಯದಲ್ಲಿ 10ನೇ `ಅಂತಾರಾಷ್ಟ್ರೀಯ ಯೋಗ ದಿನಾಚರಣೆ’ಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನಮಗೆ ದಿನನಿತ್ಯ ಆಹಾರ ಮತ್ತು ನೀರಿನ ಅವಶ್ಯಕತೆಯಂತೆಯೇ ಯೋಗವನ್ನು ಸಹ ರೂಢಿಸಿಕೊಳ್ಳಬೇಕು. ದೈನಂದಿನ ಚಟುವಟಿಕೆಗಳನ್ನು ಸರಿಯಾಗಿ ನಿರ್ವಹಿಸಲು ಯೋಗವು ಸಹಾಯಕಾರಿಯಾಗುತ್ತದೆ. ಪ್ರತಿಯೊಬ್ಬರೂ ಮನಸ್ಸು ಮತ್ತು ದೇಹದ ಸಮತೋಲನವನ್ನು ಕಾಯ್ದುಕೊಳ್ಳಲು ಪ್ರತಿನಿತ್ಯ ಸೂರ್ಯ ನಮಸ್ಕಾರ, ಪ್ರಾಣಾಯಾಮ ಮತ್ತು ಧ್ಯಾನ ಇವುಗಳನ್ನು ಅಳವಡಿಸಿಕೊಳ್ಳಬೇಕು ಎಂದರು.
ಜಿಲ್ಲಾ ಆಯುಷ್ ಇಲಾಖೆಯ ಅಧಿಕಾರಿ ಡಾ. ಮಲ್ಲಿಕಾರ್ಜುನ ಉಪ್ಪಿನ ಸರ್ವರನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ, ನಮ್ಮ ದೇಶವು ಪ್ರಪಂಚಕ್ಕೆ ಯೋಗವನ್ನು ದೊಡ್ಡ ಕೊಡುಗೆಯಾಗಿ ಕೊಟ್ಟಿದೆ.
ಆರೋಗ್ಯ ಸಂರಕ್ಷಣೆಗೆ ಯೋಗವು ಅತೀ ಮುಖ್ಯವಾಗಿದ್ದು, ಜಗತ್ತಿನ ಹಲವು ದೇಶಗಳು ಈಗ ಯೋಗ ದಿನಾಚರಣೆಯನ್ನು ಆಚರಿಸುತ್ತಿವೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ.ಎ. ರಡ್ಡೇರ, ಯುವಜನ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಶರಣು ಗೋಗೇರಿ, ಯೋಗ ಸಂಸ್ಥೆಗಳ ಮುಖ್ಯಸ್ಥರು, ನಿಮಾ (ನ್ಯಾಶನಲ್ ಇಂಟ್ರಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್), ಸರ್ಕಾರೇತರ ಸಂಘ-ಸಂಸ್ಥೆಯವರು, ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ಯೋಗಾಸಕ್ತರು ಪಾಲ್ಗೊಂಡಿದ್ದರು.
ಡಾ. ಸತೀಶ ಹೊಂಬಾಳಿ ಯೋಗಾಭ್ಯಾಸವನ್ನು ನಡೆಸಿಕೊಟ್ಟರು. ಡಾ. ಹಿರೇಗೌಡ್ರ ಕಾರ್ಯಕ್ರಮ ನಿರೂಪಿಸಿದರು. ಸಂಜೀವ ನಾರಪ್ಪನವರ ವಂದಿಸಿದರು. ಬ್ರಹ್ಮಕುಮಾರಿ ಅಕ್ಕನವರು ಧ್ಯಾನ ಹಾಗೂ ಶಾಂತಿ ಮಂತ್ರವನ್ನು ಪ್ರಸ್ತುತಪಡಿಸಿದರು. ಇದೇ ಸಂದರ್ಭದಲ್ಲಿ ಶ್ರೇಯಾ ಸಂಜೀವ ಪಾಂಡ್ರೆ ಹಾಗೂ ಸಂಗಡಿಗರು ಯೋಗ ಪ್ರತಿಭೆ ಪ್ರದರ್ಶಿಸಿದರು.
ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷೆ ಉಷಾ ದಾಸರ ಮಾತನಾಡಿ, ನಾವು ಈಗ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸುತ್ತಿರುವುದು ಸಂತಸದ ವಿಷಯವಾಗಿದೆ. ಪ್ರತಿದಿನವು ನಾವು ನಮ್ಮ ಆರೋಗ್ಯ ಸಂರಕ್ಷಣೆಗೆ ಸ್ವಲ್ಪ ಸಮಯವನ್ನು ಮೀಸಲಿರಿಸಿ ಯೋಗಾಭ್ಯಾಸದಲ್ಲಿ ತೊಡಗಬೇಕು. ಇದರಿಂದ ಮಾನಸಿಕ ಹಾಗೂ ದೈಹಿಕ ಸ್ವಾಸ್ಥ್ಯ ಕಾಪಾಡಿಕೊಳ್ಳಬಹುದಾಗಿದೆ. ಯೋಗಾಭ್ಯಾಸದಲ್ಲಿ ತೊಡಗಲು ಎಲ್ಲರೂ ಜಾಗೃತರಾಗಬೇಕೆಂದರು.