ವಿಜಯಸಾಕ್ಷಿ ಸುದ್ದಿ, ಬೆಂಗಳೂರು : ರಾಜ್ಯದಲ್ಲಿ ಡೆಂಘೀ ಜ್ವರದ ಹಾವಳಿ ದಿನೇ ದಿನೇ ಹೆಚ್ಚುತ್ತಿದೆ. ಝಿಕಾ ವೈರಾಣು ಸೋಂಕು, ಚಿಕುನ್ ಗುನ್ಯಾ ರಾಜ್ಯದಲ್ಲಿ ಸದ್ದು ಮಾಡುತ್ತಿವೆ. ಸರಕಾರ ಈ ಬಗ್ಗೆ ತುರ್ತು ಕ್ರಮ ಕೈಗೊಳ್ಳಬೇಕೆಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಕರ್ನಾಟಕ ರಾಜ್ಯಾಧ್ಯಕ್ಷ ಅಡ್ವಕೇಟ್ ತಾಹೇರ್ ಹುಸೇನ್ ಸರಕಾರವನ್ನು ಆಗ್ರಹಿಸಿದ್ದಾರೆ.
Advertisement
ಮಾಧ್ಯಮಗಳ ವರದಿಯ ಪ್ರಕಾರ ಈಗಾಗಲೇ ಡೆಂಘೀ ಪೀಡಿತರ ಸಂಖ್ಯೆ 7164 ದಾಖಲಾಗಿವೆ. ಈ ಸಾಂಕ್ರಾಮಿಕ ರೋಗ ತಡೆಗಟ್ಟಲು ಸರಕಾರ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಮುಂದಾಗಬೇಕು.
ಝಿಕಾ ಸೋಂಕು, ಚಿಕುನ್ ಗುನ್ಯಾ ಮುಂತಾದ ರೋಗಗಳು ವ್ಯಾಪಕವಾಗುವುದಕ್ಕೆ ಮೊದಲೇ ಆರೋಗ್ಯ ಇಲಾಖೆ ಸಮರೋಪಾದಿಯಲ್ಲಿ ಕಾರ್ಯ ನಿರ್ವಹಿಸಬೇಕಾಗಿದೆ. ಜನಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ಚಿಕಿತ್ಸೆ ದೊರೆಯಲು ಕ್ರಮ ಕೈಗೊಳ್ಳಬೇಕಿದೆ ಎಂದು ಅವರು ಆಗ್ರಹಿಸಿದ್ದಾರೆ.