ವಿಜಯಸಾಕ್ಷಿ ಸುದ್ದಿ, ಗದಗ : ನಗರದ ಎಪಿಎಂಸಿ ಆವರಣದಲ್ಲಿರುವ ಕೆ.ಎಚ್. ಪಾಟೀಲ ಸಭಾಭವನದಲ್ಲಿ ಜಗದ್ಗುರು ಪಂಚಾಚಾರ್ಯ ಸೇವಾ ಸಂಘ, ಜಗದ್ಗುರು ವಿಶ್ವಾರಾಧ್ಯ ಜನಕಲ್ಯಾಣ ಪ್ರತಿಷ್ಠಾನ ಹಾಗೂ ಜಗದ್ಗುರು ವಿಶ್ವಾರಾಧ್ಯ ಎಜ್ಯುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ಆಷಾಢ ಮಾಸದ ಅಂಗವಾಗಿ ಬುಧವಾರ ಕಾಶೀ ಪೀಠದ ಜಗದ್ಗುರು ಡಾ. ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯರಿಂದ ಇಷ್ಟಲಿಂಗ ಪೂಜಾ ಕಾರ್ಯಕ್ರಮ ಜರುಗಿತು.
ಬೆಳಿಗ್ಗೆ ಜಗದ್ಗುರು ಪಂಚಾಚಾರ್ಯ ವೇದ ಆಗಮ ಸಂಸ್ಕೃತ ಪಾಠಶಾಲೆಯ 12 ವಟುಗಳಿಗೆ ಅಯ್ಯಾಚಾರ ದೀಕ್ಷೆ ನೀಡಲಾಯಿತು. ನಂತರ ಪೂಜಾ ಹಾಗೂ ಭಕ್ತಿಸೇವೆ ಸಲ್ಲಿಸಿದವರಿಗೆ ಗುರುರಕ್ಷಾ ಆಶೀರ್ವಾದ ಕರುಣಿಸಲಾಯಿತು.
ನರೇಗಲ್ ಹಿರೇಮಠದ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಪೂಜಾ ವಿಧಿ-ವಿಧಾನಗಳನ್ನು ನೆರವೇರಿಸಿದರು. ಆರ್.ಎಸ್. ಹಿರೇಮಠ, ಎಸ್.ಎಚ್. ಶಿವನಗೌಡರ, ಸಿ.ಜಿ. ಹಿರೇಗೌಡರ, ಶಿವಯೋಗಿ ತೆಗ್ಗಿನಮಠ ಸೇರಿ ಅನೇಕರು ಪೂಜೆ ಹಾಗೂ ಭಕ್ತಿ ಸೇವೆ ವಹಿಸಿಕೊಂಡಿದ್ದರು.