ವಿಜಯಸಾಕ್ಷಿ ಸುದ್ದಿ, ಗದಗ : ಸಾರ್ವತ್ರಿಕ ಚುನಾವಣೆಗಳು ಹಾಗೂ ಸರ್ಕಾರ ರಚನೆ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅಣಕು ಸಂಸತ್ ರಚನೆಯನ್ನು ಶಾಲೆಯಲ್ಲಿ ಪರಿಚಯಿಸಲಾಗಿದೆ. ಪ್ರಾಥಮಿಕ ಮತ್ತು ಪ್ರೌಢಶಾಲೆ ಹಂತದಲ್ಲೇ ವಿದ್ಯಾರ್ಥಿಗಳು ತಮ್ಮ ಪ್ರತಿನಿಧಿಗಳನ್ನು ಚುನಾವಣೆ ಮೂಲಕ ಆಯ್ಕೆ ಮಾಡಿ ಪ್ರಜಾಪ್ರಭುತ್ವ ಹಾಗೂ ಮತದಾನ ಪದ್ಧತಿಯ ಮಹತ್ವವನ್ನು ಅರಿಯಬೇಕು ಎಂದು ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್. ಬುರಡಿ ನುಡಿದರು.
ಅವರು ಇತ್ತೀಚೆಗೆ ನಗರದ ಜಗದ್ಗುರು ತೋಂಟದಾರ್ಯ ಕನ್ನಡ ಹಾಗೂ ಆಂಗ್ಲಮಾಧ್ಯಮ ಪ್ರಾಥಮಿಕ-ಪ್ರೌಢಶಾಲೆಯಲ್ಲಿ ಜರುಗಿದ ಶಾಲಾ ಸಂಸತ್ ಹಾಗೂ ಶೈಕ್ಷಣಿಕ ಚಟುವಟಿಕೆಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು.
ಮಕ್ಕಳಲ್ಲಿ ನೈತಿಕ ಮೌಲ್ಯಗಳನ್ನು ಬೆಳೆಸಲಾಗುತ್ತಿದ್ದು, ಲಿಂ.ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ ಆಶಯಗಳಿಗೆ ಅನುಗುಣವಾಗಿ ಈ ಶಾಲೆ ಕಾರ್ಯನಿರ್ವಹಿಸುತ್ತಿದೆ. ಪ್ರಜಾಪ್ರಭುತ್ವದ ಆಶಯಗಳು 12ನೇ ಶತಮಾನದ ಬಸವೇಶ್ವರರ ವಚನಗಳಲ್ಲಿ ವ್ಯಕ್ತವಾಗಿವೆ. ಬಸವಾದಿ ಶರಣರ ವಚನಗಳಲ್ಲಿ ಸಂವಿಧಾನದ ಅಂಶಗಳು ಅಡಕವಾಗಿದ್ದು, ಮಕ್ಕಳು ಸಂವಿಧಾನದ ಮಹತ್ವವನ್ನು ತಿಳಿದುಕೊಳ್ಳಬೇಕು ಎಂದು ಮಾರ್ಗದರ್ಶನ ಮಾಡಿದರು.
ಇನ್ನೋರ್ವ ಅತಿಥಿ ಜೆ.ಡಿ. ದಾಸರ ಮಾತನಾಡಿ, ಓದು-ಬರಹದಲ್ಲಿ ನೂರಕ್ಕೆ ನೂರರಷ್ಟು ಅಂಕಗಳನ್ನು ಗಳಿಸಿ ಒಳ್ಳೆಯ ವ್ಯಕ್ತಿತ್ವವನ್ನು ರೂಪಿಸಿಕೊಳ್ಳದಿದ್ದರೆ ಅಂಥ ಓದು ವ್ಯರ್ಥವಾಗುತ್ತದೆ. ಏನಾದರೂ ಆಗು ಮೊದಲು ಮಾನವನಾಗು ಎಂಬ ರಾಷ್ಟçಕವಿ ಕುವೆಂಪುರವರ ಮಾತಿನಂತೆ ಮಕ್ಕಳಲ್ಲಿ ಮಾನವೀಯತೆ ಮೈದಳೆಯಬೇಕಿದ್ದು, ತೋಂಟದಾರ್ಯ ಶಾಲೆ ಗುಣಮಟ್ಟದ ಶಿಕ್ಷಣದ ಜೊತೆಗೆ ಮಕ್ಕಳಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸುತ್ತಿದೆ ಎಂದರು.
ತೋಂಟದಾರ್ಯ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಕೊಟ್ರೇಶ ಮೆಣಸಿನಕಾಯಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆ ಮೇಲೆ ತೋಂಟದಾರ್ಯ ಶಿಕ್ಷಣ ಸಂಸ್ಥೆ ಆಡಳಿತ ಮಂಡಳಿ ಸದಸ್ಯರಾದ ಅಮರೇಶ ಅಂಗಡಿ, ಶೇಖಣ್ಣ ಕಳಸಾಪೂರ, ಲಿಂಗರಾಜಗೌಡ ಪಾಟೀಲ ಉಪಸ್ಥಿತರಿದ್ದರು.
ಮತದಾನದ ಮೂಲಕ ಆಯ್ಕೆಯಾದ ವಿದ್ಯಾರ್ಥಿ ಪ್ರತಿನಿಧಿಗಳು ತಮ್ಮ ತಮ್ಮ ಖಾತೆಗೆ ಅನುಗುಣವಾಗಿ ಪ್ರಮಾಣವಚನ ಸ್ವೀಕರಿಸಿದರು. ಎಲ್.ಕೆ.ಜಿ ಹಾಗೂ ಯು.ಕೆ.ಜಿ ಮಕ್ಕಳಿಗೆ ಅಕ್ಷರಾಭ್ಯಾಸ ಜರುಗಿತು. ಪ್ರೌಢಶಾಲೆ ವಿದ್ಯಾರ್ಥಿಗಳು ವಚನ ನೃತ್ಯ ಪ್ರದರ್ಶಿಸಿದರು. ಸುಧಾ ಅವರಾದಿ ಸ್ವಾಗತಿಸಿದರು. ಸುರೇಖಾ ಕುಂಬಾರಗೇರಿಮಠ ನಿರೂಪಿಸಿದರು. ಶಾಲೆಯ ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ಅಧ್ಯಕ್ಷತೆ ವಹಿಸಿದ್ದ ತೋಂಟದಾರ್ಯ ಶಿಕ್ಷಣ ಸಂಸ್ಥೆಯ ಚೇರಮನ್ ಎಸ್.ಎಸ್. ಪಟ್ಟಣಶೆಟ್ಟರ ಮಾತನಾಡಿ, ಪ್ರೌಢಶಾಲೆಯ ವಿದ್ಯಾರ್ಥಿಗಳು ಶ್ರದ್ಧೆಯಿಂದ, ತಾಳ್ಮೆಯಿಂದ ಅಭ್ಯಾಸದಲ್ಲಿ ಮಗ್ನರಾಗಬೇಕು. ಮನೆಯಲ್ಲಿ ಹಿರಿಯರ-ಕಿರಿಯರ ಜೊತೆ ಗೌರವದಿಂದ ನಡೆದುಕೊಳ್ಳಬೇಕು. ನಿರಂತರ ಅಧ್ಯಯನದಿಂದ ಗುರಿ ಮುಟ್ಟಲು ಸಾಧ್ಯವಿದ್ದು, ಪ್ರಜಾಪ್ರಭುತ್ವದ ಅರಿವನ್ನು ಪಡೆಯುವ ನಿಟ್ಟಿನಲ್ಲಿ ಶಾಲೆಯಲ್ಲಿ ನಡೆಸಿದ ಸಂಸತ್ ಚಟುವಟಿಕೆಗಳು ಪರಿಣಾಮಕಾರಿಯಾಗಿವೆ ಎಂದರು.