ವಿಜಯಸಾಕ್ಷಿ ಸುದ್ದಿ, ರೋಣ : ತಾಲೂಕಿನಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದ್ದು, ತಹಸೀಲ್ದಾರ್ ನಾಗರಾಜ ಕೆ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಪ್ರವಾಹ ಪೀಡಿತ ಗ್ರಾಮಗಳಿಗೆ ಶುಕ್ರವಾರ ಭೇಟಿ ನೀಡಿ, ಅಲ್ಲಿನ ವಸ್ತುಸ್ಥಿತಿಯನ್ನು ಪರಿಶೀಲಿಸಿದರು.
ಹಲವಾರು ದಿನಗಳಿಂದ ಬಿಟ್ಟೂ ಬಿಡದೆ ಸುರಿಯುತ್ತಿರುವ ಮಳೆಯಿಂದ ನಾನಾ ಭಾಗಗಳಲ್ಲಿ ಹಲವಾರು ರಿತಿಯ ಅವಾಂತರಗಳು ಸೃಷ್ಟಿಯಾಗಿವೆ. ಮಲಪ್ರಭಾ ನದಿ ತಿರದಲ್ಲೂ ಅತಿ ಹೆಚ್ಚು ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ತಾಲೂಕಿನ ಪ್ರವಾಹ ಪೀಡಿತ ಗ್ರಾಮಗಳಿಗೆ ಭೇಟಿ ನೀಡಿ ಜನರಿಗೆ ಅರಿವು ಮೂಡಿಸಿದರು.
ಮಲಪ್ರಭಾ ನದಿ ತೀರದಲ್ಲಿ ಅತಿ ಹೆಚ್ಚು ಮಳೆಯಾದ ಸಂದರ್ಭದಲ್ಲಿ ರೋಣ ತಾಲೂಕಿ 16 ಗ್ರಾಮಗಳಿಗೆ ಪ್ರವಾಹ ಭೀತಿ ತಪ್ಪಿದಲ್ಲ. ಅಲ್ಲದೆ ತಾಲೂಕಿನಲ್ಲಿಯೂ ಸಹ ವಿಪರೀತ ಮಳೆಯಾಗುತ್ತಿದೆ. ಹೀಗಿರುವಾಗ, ಬೆಣ್ಣೆಹಳ್ಳ ಉಕ್ಕೇರಿದರೆ ತೀವೃ ಸಂಕಷ್ಟವನ್ನು ಎದುರಿಸಬೇಕಾದ ಸ್ಥಿತಿ ಎದುರಾಗುತ್ತದೆ.
ಬೆಳಗಾವಿ, ಹಾವೇರಿ, ಧಾರವಾಡ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿದೆ. ಇದರಿಂದ ಮಲಪ್ರಭಾ ಆಣೆಕಟ್ಟಿನಲ್ಲಿ ನೀರಿನ ಪ್ರಮಾಣ ಹೆಚ್ಚಾಗುವ ಎಲ್ಲ ಲಕ್ಷಣಗಳು ಕಂಡು ಬರುತ್ತಿವೆ. ನದಿಯ ನೀರನ್ನು ಯಾವುದೇ ಕ್ಷಣದಲ್ಲೂ ಹೊರಬಿಡುವ ಸಾಧ್ಯತೆಯಿದ್ದು, ಕಂದಾಯ ಇಲಾಖೆಯ ಸಿಬ್ಬಂದಿಗಳು ಗ್ರಾಮಗಳಲ್ಲಿಯೇ ಬಿಡಾರ ಹೂಡಿದ್ದಾರೆ.
ಗ್ರಾಮಗಳಿಗೆ ಭೇಟಿ ನೀಡುವ ಸಂದರ್ಭದಲ್ಲಿಯೇ ತಹಸೀಲ್ದಾರ್ ನಾಗರಾಜ ಕೆ ಸುರಕ್ಷತಾ ಸ್ಥಳಗಳನ್ನು ಗುರುತಿಸುವ ಕಾರ್ಯವನ್ನೂ ಮಾಡುತ್ತಿದ್ದಾರೆ. ಪ್ರವಾಹ ಪರಿಸ್ಥಿತಿ ಎದುರಾದರೆ ಕಾಳಜಿ ಕೇಂದ್ರ ತೆರೆಯಲು ಹಾಗೂ ಜನರನ್ನು ಸುರಕ್ಷಿತ ಸ್ಥಳಗಳಿಗೆ ಕಳುಹಿಸುವ ಎಲ್ಲ ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದ್ದು, ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆಗಳನ್ನು ಸಹ ವೀಕ್ಷಣೆ ಮಾಡಿ ಜನರಲ್ಲಿ ಎಚ್ಚರಿಕೆಯಿಂದ ಇರುವುಂತೆ ಮನವಿ ಮಾಡಿದ್ದಾರೆ.



