ಮೈಸೂರು: ಕುಮಾರಸ್ವಾಮಿ ಅವರು ಪ್ರತಿನಿಧಿಸುವ ಮಂಡ್ಯಕ್ಕೆ ಬಜೆಟ್ನಲ್ಲಿ ಏನು ಕೊಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು. ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಮಂಡ್ಯಕ್ಕೆ ಏನೂ ಕೊಟ್ಟಿಲ್ಲ. ಕೈಗಾರಿಕೆಯನ್ನಾದರೂ ಕೊಟ್ಟರಾ? ಇಲ್ಲ ಎಂದು ಸಿದ್ದರಾಮಯ್ಯ ಹೇಳಿದರು. ರಾಯಚೂರಿಗೆ ಏಮ್ಸ್ ಆಸ್ಪತ್ರೆ ಕೇಳಿದ್ದೆವು. ಅದನ್ನೂ ಕೊಟ್ಟಿಲ್ಲ. ಕೇವಲ ಆಂಧ್ರ ಪ್ರದೇಶ, ಬಿಹಾರಕ್ಕೆ ಮಾತ್ರ ಕೊಡುಗೆ ನೀಡಿದ್ದಾರೆ ಎಂದು ಸಿಎಂ ಆರೋಪಿಸಿದರು.
ಇನ್ನು ಮುಡಾ ವಿಚಾರವಾಗಿ ತಮ್ಮ ವಿರುದ್ಧ ಮಾಡಿರುವ ಆರೋಪಕ್ಕೂ ತಿರುಗೇಟು ನೀಡಿದ ಅವರು, ಕುಮಾರಸ್ವಾಮಿ ಕೂಡ ಮುಡಾ ನಿವೇಶನ ಪಡೆದಿದ್ದಾರೆ. ಕುಮಾರಸ್ವಾಮಿ 40 ವರ್ಷದ ಹಿಂದೆ ಮುಡಾ ಸೈಟ್ ಪಡೆದಿದ್ದಾರೆ. ಹೆಚ್ಡಿ ದೇವೇಗೌಡರಿಗೆ ಎಷ್ಟು ಸೈಟ್ ಹೋಗಿದೆ ಗೊತ್ತಿದೆಯಾ? ಪುಟ್ಟಯ್ಯ ಸಿಐಟಿಬಿ ಅಧ್ಯಕ್ಷರಾಗಿದ್ದಾಗ ದೇವೇಗೌಡರ ಕುಟುಂಬಕ್ಕೆ ಎಷ್ಟು ಸೈಟ್ ಬರೆಸಿಕೊಂಡಿದ್ದಾರೆ ಪಟ್ಟಿ ಕೊಡಲಾ? ಅದರ ಸ್ವಾಧೀನ ಪತ್ರವೂ ಪಡೆದುಕೊಂಡಿದ್ದಾರೆ. ಈಗ ಇಲ್ಲ ಎಂದು ಕುಮಾರಸ್ವಾಮಿ ಸುಳ್ಳು ಹೇಳಿದರೆ ಹೇಗೆ? ಸ್ವಾಧೀನ ಪತ್ರ ಪಡೆದಿಲ್ಲ ಎಂದು ಹೆಚ್ಡಿಕೆ ಹೇಳ್ತಿರುವುದು ಸುಳ್ಳು. ಇವರೆಲ್ಲಾ ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ ಎಂದರು.