ಬೆಂಗಳೂರು: ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ಪ್ರಭುಗಳು. ಅವರಿಗೆ ಸತ್ಯದ ಮನವರಿಕೆ ಮಾಡಿಕೊಡುವ ದೃಷ್ಟಿಯಿಂದ ಬೆಂಗಳೂರಿನಿಂದ ಮೈಸೂರುವರೆಗೆ ಎನ್ಡಿಎ ವತಿಯಿಂದ ಪಾದಯಾತ್ರೆ ಮಾಡುತ್ತೇವೆ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ವಿವಿಧ ಹಗರಣಗಳ ಕುರಿತು ಸರ್ಕಾರವು ನಮಗೆ ವಿಧಾನಮಂಡಲದಲ್ಲಿ ಚರ್ಚೆ ನಡೆಸಲು ಅವಕಾಶ ಕೊಟ್ಟಿಲ್ಲ.
ಸರ್ಕಾರಕ್ಕೆ ಸತ್ಯವನ್ನು ಎದುರಿಸುವ ಧಮ್ ಇದ್ದಿದ್ದರೆ ಅವರು ವಿಧಾನಮಂಡಲದಲ್ಲಿ ಚರ್ಚೆಗೆ ಅವಕಾಶ ಕೊಡುತ್ತಿದ್ದರು. ಮುಡಾ ಹಗರಣ, ಮಹರ್ಷಿ ವಾಲ್ಮೀಕಿ ನಿಗಮದ ಹಗರಣ ಸೇರಿ ಎಲ್ಲಾ ಅವ್ಯವಹಾರಗಳನ್ನು ಜನರಿಗೆ ತಿಳಿಸುತ್ತೇವೆ. ಭ್ರಷ್ಟಾಚಾರದ ಹಗರಣಗಳನ್ನು ಬಯಲಿಗೆಳೆಯುವ ಉದ್ದೇಶದಿಂದ ಪಾದಯಾತ್ರೆ ನಡೆಸಲಾಗುತ್ತಿದೆ ಎಂದು ಹೇಳಿದರು.



