ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ : ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳಿಗೆ ಮೂತ್ರಪಿಂಡದ ಆರೈಕೆಯು ಸಮುದಾಯ ಕೇಂದ್ರದಲ್ಲಿ ಉಚಿತವಾಗಿ ಲಭ್ಯವಿದೆ ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.
ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ನ್ಯಾಷನಲ್ ಹೆಲ್ತ್ ಮಿಷನ್ ಯೋಜನೆ ಅಡಿಯಲ್ಲಿ ಪಬ್ಲಿಕ್ ಪ್ರೈವೇಟ್ ಪಾರ್ಟಿಸಿಪೆಟ್, ಡಿಸಿಡಿಸಿ ಹೆಲ್ತ್ ಸರ್ವಿಸ್ ಪ್ರೈವೇಟ್ ಲಿಮಿಟೆಡ್ (ಕಿಡ್ನಿ ಕೇರ್) ಸಹಯೋಗದಲ್ಲಿ ಗುರುವಾರ ಡಯಾಲಿಸಿಸ್ ಚಿಕಿತ್ಸಾ ಕೇಂದ್ರ ಉದ್ಘಾಟಿಸಿ ಅವರು ಮಾತನಾಡಿದರು.
ತಾಲೂಕಿನಲ್ಲಿ ಮೂತ್ರಕೋಶದ ತೊಂದರೆಯಿಂದ ಬಳಲುತ್ತಿರುವ ಬಡ ರೋಗಿಗಳಿಗೆ ಈ ಕೇಂದ್ರವು ಅನುಕೂಲವಾಗಲಿದೆ. ಆಸ್ಪತ್ರೆಯ ಆರೋಗ್ಯ ಸುರಕ್ಷಾ ಸಮಿತಿ ಸದಸ್ಯರು ಸಹ ಮೂತ್ರಕೋಶದ ತೊಂದರೆಯಿಂದ ಬಳಲುತ್ತಿರುವ ರೋಗಿಗಳು ಚಿಕಿತ್ಸೆಗಾಗಿ ರೋಣ, ಗದಗ ಮತ್ತು ಕೊಪ್ಪಳಕ್ಕೆ ಹೋಗಬೇಕಾದ ಸಂದರ್ಭವಿತ್ತು.
ರೋಗಿಗಳಿಗೆ ಆಗುತ್ತಿರುವ ತೊಂದರೆ ಕುರಿತು ಗಮನ ಸೆಳೆದಾಗ ಪಟ್ಟಣದಲ್ಲಿ ಡಯಾಲಿಸಿಸ್ ಕೇಂದ್ರ ಆರಂಭಿಸುವ ಭರವಸೆ ನೀಡಿದಂತೆ ಇಂದು ಡಯಾಲಿಸಿಸ್ ಚಿಕಿತ್ಸಾ ಕೇಂದ್ರವನ್ನು ಉದ್ಘಾಟಿಸಲಾಗಿದೆ ಎಂದರು.
ಪಟ್ಟಣದಲ್ಲಿ ಸಮುದಾಯ ಸರ್ಕಾರಿ ಆಸ್ಪತ್ರೆಯನ್ನು ತಾಲೂಕಾ ಮಟ್ಟದ ಆಸ್ಪತ್ರೆಯನ್ನಾಗಿ ಮಾರ್ಪಡಿಸಲು ಈಗಾಗಲೇ ಸರ್ಕಾರ ಮಟ್ಟದಲ್ಲಿ ಮಾತನಾಡಿದ್ದು, ಮುಂದಿನ ದಿನಗಳಲ್ಲಿ ಆ ಕಾರ್ಯವೂ ನೆರವೇರಲಿದೆ.
ಆಸ್ಪತ್ರೆಯಲ್ಲಿರುವ ವೈದ್ಯರು ಮತ್ತು ತಾಂತ್ರಿಕ ಸಿಬ್ಬಂದಿಗಳ ಮೂಲಕ ಆಸ್ಪತ್ರೆಯಲ್ಲಿ ಹೆರಿಗೆ ಸಿಜರಿನ್ ಘಟಕ ಆರಂಭಿಸಲಾಗಿದೆ. ಸರ್ಕಾರಿ ಆಸ್ಪತ್ರೆ ಹಾಗೂ ಇಲ್ಲಿ ಸೇವೆ ಸಲ್ಲಿಸುವ ವೈದ್ಯಾಧಿಕಾರಿಗಳು ಸಮಾಜದ ಆಸ್ತಿಯಾಗಿದ್ದಾರೆ. ಆಸ್ಪತ್ರೆಯ ಸದ್ಬಳಕೆ ಮಾಡಿ, ವಿಶ್ವಾಸದಿಂದ ವೈದ್ಯರ ಸೇವೆಯನ್ನು ಪಡೆದಕೊಳ್ಳಬೇಕಿದೆ.
ಹೀಗಾಗಿ ಸಾರ್ವಜನಿಕರ ಹಾಗೂ ವಿವಿಧ ಘಟಕಗಳ ಪದಾಧಿಕಾರಿಗಳ ಸಹಕಾರ ಬೇಕು ಎಂದರು.
ಆರೋಗ್ಯ ಸುರಕ್ಷಾ ಸಮಿತಿ ಸದಸ್ಯರಾದ ರಾಜು ಸಾಂಗ್ಲೀಕರ, ಶರಣಪ್ಪ ಚಳಗೇರಿ ಮಾತನಾಡಿ, ಕಿಡ್ನಿ ಸಮಸ್ಯೆಯಿಂದ ಬಳಲುವ ರೋಗಿಗಳು ವಾರದಲ್ಲಿ 2/3 ಬಾರಿ ಡಯಾಲಿಸಿಸ್ಗೆ ಒಳಗಾಗಬೇಕು. ರೋಗಿಗಳ ಕಷ್ಟವನ್ನು ಅರಿತ ಶಾಸಕ ಜಿ.ಎಸ್. ಪಾಟೀಲರು ಡಯಾಲಿಸಿಸ್ ಚಿಕಿತ್ಸಾ ಕೇಂದ್ರ ಆರಂಭಿಸಿ ಬಡರೋಗಿಗಳಿಗೆ ನೆರವಾಗಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಡಾ. ಅನಿಲಕುಮಾರ ತೋಟದ, ಮುರ್ತುಜಾ ಡಾಲಾಯತ, ಸಿದ್ದಪ್ಪ ಬಂಡಿ, ಅಶೋಕ ಬಾಗಮಾರ, ವೀರಣ್ಣ ಶೆಟ್ಟರ, ರಪೀಕ್ ತೋರಗಲ್, ಶ್ರೀಧರ ಬಿದರಳ್ಳಿ, ಬಸವರಾಜ ಹೂಗಾರ, ಯಲ್ಲಪ್ಪ ಬಂಕದ, ಉಮೇಶ ರಾಠೋಡ ಸೇರಿ ಇತರರು ಇದ್ದರು.
ಜಿಲ್ಲೆಯ ಡಯಾಲಿಸಿಸ್ ಕೇಂದ್ರದ ಆಡಳಿತಾಧಿಕಾರಿ ಶಿದ್ಧಲಿಂಗೇಶ್ವರ ಶಿವಶಿಂಪಿಗೇರ ಮಾತನಾಡಿ, 2 ಬೆಡ್ಗಳ ಅತ್ಯಾಧುನಿಕ ಯಂತ್ರೋಪಕರಣಗಳ ಕೇಂದ್ರ ಇದಾಗಿದೆ. ಬೆಳಿಗ್ಗೆ 8ರಿಂದ ಸಂಜೆ 4ರವೆರೆಗೆ ಕಾರ್ಯನಿರ್ವಹಿಸುವ ಕೇಂದ್ರದಲ್ಲಿ ಓರ್ವ ರೋಗಿಯ ಡಯಾಲಿಸಿಸ್ ಮಾಡಲು ಕನಿಷ್ಠ 4 ತಾಸುಗಳ ಸಮಯಾವಕಾಶ ಬೇಕಾಗಿದ್ದರಿಂದ ದಿನಕ್ಕೆ 4 ರೋಗಿಗಳ ಡಯಾಲಿಸಿಸ್ ಮಾಡಲಾಗುವುದು ಎಂದರು.



