ಬೆಂಗಳೂರು:ನಾನು ರಾಜ್ಯಪಾಲರಿಗಾಗಲಿ, ಲೋಕಾಯುಕ್ತಕ್ಕಾಗಲಿ ವಕ್ತಾರನಲ್ಲ. ನಾನು ಕಾಂಗ್ರೆಸ್ ಪಕ್ಷದ ಪ್ರತಿನಿಧಿ. ಹೀಗಾಗಿ ಕುಮಾರಸ್ವಾಮಿ ಪ್ರಕರಣದ ಬಗ್ಗೆ ತಿಳಿದುಕೊಂಡು ಅನಂತರ ಈ ಬಗ್ಗೆ ಮಾತನಾಡುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕುಮಾರಸ್ವಾಮಿ ವಿರುದ್ಧ ದೋಷಾರೋಪ ಪಟ್ಟಿಯನ್ನು ಎಸ್ಐಟಿ ರಾಜ್ಯಪಾಲರಿಗೆ ಸಲ್ಲಿಸಿದ್ದು, ಈ ವಿಚಾರದಲ್ಲಿ ರಾಜ್ಯಪಾಲರ ಪ್ರತಿಕ್ರಿಯೆ ಏನಿರಬಹುದು ಎನ್ನುವ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಹೀಗೆ ಉತ್ತರಿಸಿದರು.
ಶೇಷಾದ್ರಿಪುರ ಜಂಕ್ಷನ್ ಬಳಿ ರಾಜೀವ್ ಗಾಂಧಿ ಅವರ ಪ್ರತಿಮೆಗೆ ಮಂಗಳವಾರ ಪುಷ್ಪನಮನ ಸಲ್ಲಿಸಿದ ನಂತರ ಅವರು ಮಾತನಾಡಿದರು.ಕಾಂಗ್ರೆಸ್ ಮುಖಂಡರಿಂದ ರಾಜ್ಯಪಾಲರ ನಿಂದನೆ ವಿರುದ್ಧ ಬಿಜೆಪಿ ಪ್ರತಿಭಟನೆ ಬಗ್ಗೆ ಕೇಳಿದಾಗ, “ಬಿಜೆಪಿಯವರು ಸಂವಿಧಾನವನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿ ವರ್ತಿಸುತ್ತಿದ್ದಾರೆ. ರಾಜ್ಯಪಾಲರನ್ನು ಬಿಜೆಪಿಯವರು ತಮ್ಮ ಏಜೆಂಟರನ್ನಾಗಿ ಪರಿವರ್ತನೆ ಮಾಡಿಕೊಳ್ಳುತ್ತಿದ್ದಾರೆ ಎಂಬುದಕ್ಕೆ ಇವೆಲ್ಲ ಸಾಕ್ಷಿ” ಎಂದು ತಿರುಗೇಟು ನೀಡಿದರು.