ವಿಜಯಸಾಕ್ಷಿ ಸುದ್ದಿ, ಹರಪನಹಳ್ಳಿ : ಹಲವಾರು ದೇಸೀ ಕ್ರೀಡೆಗಳು ಮರೀಚಿಕೆಯಾಗುತ್ತಿದ್ದು, ಅವುಗಳನ್ನು ಇಂದಿನ ಮಕ್ಕಳಿಗೆ ತಿಳಿಸುವ ಅಗತ್ಯವಿದೆ ಎಂದು ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ ಅಭಿಪ್ರಾಯಪಟ್ಟರು.
ತಾಲೂಕಿನ ಚಿಗಟೇರಿ ಗ್ರಾಮದಲ್ಲಿ ನಾರದ ಮುನಿ ಪ್ರೌಢಶಲೆಯಲ್ಲಿ ನಡೆದ ವಲಯಮಟ್ಟ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಇಂದಿನ ಮಕ್ಕಳಿಗೆ ಕೇವಲ ಕ್ರಿಕೆಟ್ ಆಟದ ಬಗ್ಗೆ ಹೆಚ್ಚಿನ ಆಸಕ್ತಿಯಿದ್ದು, ದೇಸೀ ಕ್ರೀಡೆಗಳಾದ ಖೋಖೋ, ಕಬಡ್ಡಿ, ಮಲ್ಲಕಂಬ, ಕುಸ್ತಿಗಳಂತಹ ಆಟಗಳು ಕಣ್ಮರೆಯಾಗುತ್ತಿವೆ. ಮಕ್ಕಳಲ್ಲಿ ಕ್ರೀಡೆಯ ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಅಭಿರುಚಿಯನ್ನು ಮೂಡಿಸುವ ಕೆಲಸವನ್ನು ಶಿಕ್ಷಕರು ಮಾಡಬೇಕು ಎಂದರು.
ದೈಹಿಕ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಎಂ.ಹೆಚ್. ಜನಾರ್ಧನ ರೆಡ್ಡಿ ಮಾತನಾಡಿ, ಮಕ್ಕಳು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಲು ಬಾಲ್ಯದಲ್ಲ್ಲಿ ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢವಾದ ದೇಹವನ್ನು ಹೊಂದಿಬೇಕಾಗುತ್ತದೆ. ಹಾಗಾದಲ್ಲಿ ಮಾತ್ರ ಉತ್ತಮ ಜೀವನವನ್ನು ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.
ಚಿಗಟೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುಬೇರ ಗೌಡ, ಬಸವನಗೌಡ, ನಿತ್ಯಾನಂದ ಎಂ, ಗ್ರಾ.ಪಂ. ಅಧ್ಯಕ್ಷ ನಾಗರಾಜ, ದೈಹಿಕ ಪರಿವೀಕ್ಷಕ ಕೆ. ಷಣ್ಮುಖಪ್ಪ, ಮುಖ್ಯ ಶಿಕ್ಷಕ ಟಿ. ಓಬಳೇಶ, ಗುರುಮೂರ್ತಿ, ದಯಾನಂದ, ಚಂದ್ರಪ್ಪ ಇತರರಿದ್ದರು.