ವಿಜಯಸಾಕ್ಷಿ ಸುದ್ದಿ, ಗದಗ : ಗದಗ ಪರಿಸರದಲ್ಲಿ ಬೃಹತ್ ಕೈಗಾರಿಕೆಗಳ ಸ್ಥಾಪನೆಗೆ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯ ಪದಾಧಿಕಾರಿಗಳು ಜೊತೆಗೂಡಿ ಸಂಸದ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸುವ ಮೂಲಕ ಈ ಭಾಗದಲ್ಲಿ ಔದ್ಯೋಗಿಕ ಕ್ರಾಂತಿಗೆ ನಾವೆಲ್ಲರೂ ಪ್ರಯತ್ನಿಸೋಣ ಎಂದು ನರಗುಂದ ಶಾಸಕ ಸಿ.ಸಿ. ಪಾಟೀಲ ಕರೆ ನೀಡಿದರು.
ಇಲ್ಲಿನ ತೋಂಟದಾರ್ಯ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಗ್ರಾಮೀಣ ಮತ್ತು ಸಣ್ಣ ಉದ್ಯಮ ವಿಭಾಗ, ಜಿಲ್ಲಾ ಪಂಚಾಯಿತಿ ಆಶ್ರಯದಲ್ಲಿ ನಡೆದ ಗದಗ ಉತ್ಸವ-2024, ಕೈಗಾರಿಕಾ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ ಉದ್ಘಾಟಿಸಿ ಮಾತನಾಡಿದರು.
ಕೈಗಾರಿಕೆಗಳ ಸ್ಥಾಪನೆ ಸಂಬಂಧ ಸಂಸದ ಬಸವರಾಜ ಬೊಮ್ಮಾಯಿ ಅವರ ಜೊತೆ ಪ್ರತ್ಯೇಕ ಸಭೆ ನಡೆಸಿ, ಈ ಭಾಗದಲ್ಲಿ ಯಾವ ರೀತಿಯ ಕೈಗಾರಿಕೆ ಸ್ಥಾಪನೆ ಮಾಡಿದರೆ ಹೆಚ್ಚು ಅನುಕೂಲ ಎಂಬ ಕುರಿತು ಸಮೀಕ್ಷೆ ನಡೆಸಿ, ಅದರ ವರದಿಯನ್ನು ಕೊಟ್ಟು ಒತ್ತಾಯಿಸುವ ಕೆಲಸ ಮಾಡೋಣ ಎಂದರು.
ಸರಕಾರಿ ಉದ್ಯೋಗ ಇಂದಿನ ಕಾಲದಲ್ಲಿ ಗಗನ ಕುಸುಮವಾಗಿದೆ. ಹೀಗಾಗಿ ಯುವಕರು ಉದ್ಯಮಿಯಾಗಿ ಬೆಳೆದು ಇತರರಿಗೂ ಉದ್ಯೋಗ ಕೊಡುವ ಕೆಲಸ ಮಾಡಬೇಕು. ಸರಕಾರ ಮತ್ತು ಅಧಿಕಾರಿ ವರ್ಗ ಉದ್ಯಮಿಗಳ ಬೇಡಿಕೆಗಳಿಗೆ ಸ್ಪಂದಿಸಿ, ಏಕ ಗವಾಕ್ಷಿ ಪದ್ಧತಿಯ ಮೂಲಕ ಉದ್ಯಮಿಗಳಿಗೆ ಬೇಕಾದ ಪರವಾನಗಿ, ಸೌಲಭ್ಯಗಳನ್ನು ಒದಗಿಸಿದಾಗ ಮಾತ್ರ ದೇಶದಲ್ಲಿ ಔದ್ಯೋಗಿಕ ಕ್ರಾಂತಿಯಾಗಲು ಸಾಧ್ಯ ಎಂದರು.
ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಮಾತನಾಡಿ, ಒಂದು ಜಿಲ್ಲೆ ಅಭಿವೃದ್ಧಿ ಆಗಬೇಕಾದರೆ ಅಲ್ಲಿ ಕೈಗಾರಿಕೆಗಳು ಇರಬೇಕು. ಕೈಗಾರಿಕೆಗಳಿಂದ ಉದ್ಯೋಗ ಸೃಷ್ಟಿಯಾಗಿ ಸ್ಥಳೀಯವಾಗಿ ಉದ್ಯೋಗ ಕಲ್ಪಿಸಲು ಸಾಧ್ಯವಾಗುತ್ತದೆ. ಮುಖ್ಯವಾಗಿ ಗುಡಿ ಕೈಗಾರಿಕೆಗಳಿಗೆ, ನೇಕಾರಿಕೆಗೆ ಇನ್ನಷ್ಟು ಪ್ರೋತ್ಸಾಹ ನೀಡುವ ಕೆಲಸವಾಗಬೇಕು ಎಂದರು.
ಇದೇ ಸಂದರ್ಭದಲ್ಲಿ ಡಾ. ತೇಜ ಚನ್ನಯ್ಯ ಹಿರೇಮಠ ಅವರನ್ನು ಸನ್ಮಾನಿಸಲಾಯಿತು. ಜ. ತೋಂಟದ ಸಿದ್ಧರಾಮ ಸ್ವಾಮೀಜಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದರು. ಪ್ರಮುಖರಾದ ತಾತನಗೌಡ ಪಾಟೀಲ, ಹರೀಶಕುಮಾರ ಶಾ, ಸದಾಶಿವಯ್ಯ ಮದರಿಮಠ, ಅಶೋಕಗೌಡ ಪಾಟೀಲ, ಸಿ.ಎಸ್. ಯೋಗೇಶ, ಬಸವರಾಜ ಅಂಗಡಿ, ಶಿವಪುತ್ರಪ್ಪ ಹರಿಜನ, ಸುವರ್ಣಾ ಮದರಿಮಠ, ಜ್ಯೋತಿ ದಾನಪ್ಪಗೌಡ್ರ ಇತರರು ಪಾಲ್ಗೊಂಡಿದ್ದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಉತ್ಸವ ಸಮಿತಿ ಚೇರಮನ್ ಚಂದ್ರು ಬಾಳಿಹಳ್ಳಿಮಠ, ಸಣ್ಣ ಕೈಗಾರಿಕೋದ್ಯಮಿಗಳು ಉತ್ಪಾದನೆ ಮಾಡಿದ ವಸ್ತುಗಳನ್ನು ಒಂದೇ ಸೂರಿನಡಿ ಪ್ರದರ್ಶಿಸಿ, ಮಾರಾಟ ಮಾಡಲು ವೇದಿಕೆ ಕಲ್ಪಿಸುವ ಉದ್ದೇಶದಿಂದ ಕಳೆದ ೨೪ ವರ್ಷಗಳಿಂದ ಗದಗ ಉತ್ಸವ ಆಯೋಜಿಸಲಾಗುತ್ತಿದೆ ಎಂದರು.