ವಿಜಯಸಾಕ್ಷಿ ಸುದ್ದಿ, ಗದಗ : ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಸರಕಾರದ ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅತ್ಯುತ್ತಮ ರೀತಿಯಲ್ಲಿ ತಲುಪಿಸಿರುವ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.
ಗದಗ ಜಿಲ್ಲೆಯ ಭೂದಾಖಲೆಗಳ ಉಪನಿರ್ದೇಶಕ ರುದ್ರಗೌಡ ಜಿ.ಜೆ, ಮುಂಡರಗಿಯ ಭೂದಾಖಲೆಗಳ ಸಹಾಯಕ ನಿರ್ದೇಶಕ ಕೆ.ಎನ್. ರಮೇಶ, ಗದಗ ತಾಲೂಕು ಪರವಾನಿಗೆ ಭೂಮಾಪಕ ಈರಣ್ಣ ಚನ್ನಪ್ಪ ತೊಂಡಿಹಾಳ ಹಾಗೂ ರೋಣ ತಾಲೂಕಿನ ಸರ್ಕಾರಿ ಭೂಮಾಪಕ ಸಂಗಮೇಶ ಕುರಿ ಸಾರ್ವಜನಿಕರಿಗೆ ಅತ್ಯುತ್ತಮ ಸೇವೆ ಒದಗಿಸುವ ಮೂಲಕ ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ- ೨೦೨೪ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಕಂದಾಯ ಇಲಾಖೆ ಸಚಿವ ಕೃಷ್ಣ ಭೈರೇಗೌಡರ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ವಿಕಾಸಸೌಧದ ಕೊಠಡಿ ಸಂಖ್ಯೆ-409ರಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆ ಹಾಗೂ ಅಭಿನಂದನಾ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ವಿ.ಮಹೇಶ್, ಭೂದಾಖಲೆಗಳ ಬೆಳಗಾವಿ ಭಾಗದ ಜಂಟಿ ನಿರ್ದೇಶಕ ಎನ್.ಎಮ್. ಫೀರಜಾದೆ, ರಾಜ್ಯದ ಕಂದಾಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಇದ್ದರು.