ಬೆಂಗಳೂರು:- ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆದ್ದು ಬೀಗಿದೆ. ಈ ಗೆಲುವಿನ ಖುಷಿಯಲ್ಲೇ ಕಾಂಗ್ರೆಸ್ ಪಾಳಯದಲ್ಲಿ ಸಚಿವ ಸಂಪುಟ ಪುನಾರಚನೆಯ ಬಗ್ಗೆಯೂ ಚರ್ಚೆ ಮುನ್ನೆಲೆಗೆ ಬಂದಿದೆ.
ಎಐಸಿಸಿ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಂಜೆ ದೆಹಲಿಗೆ ತೆರಳಲಿದ್ದಾರೆ. ಶುಕ್ರವಾರ ಮಧ್ಯಾಹ್ನ ಸಭೆ ನಡೆಯಲಿದೆ. ಇದೇ ವೇಳೆ ಮುಖ್ಯಮಂತ್ರಿಗಳು ಕೇಂದ್ರದ ಕೆಲ ಸಚಿವರನ್ನು ಭೇಟಿಯಾಗಿ ರಾಜ್ಯದ ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ಸಿಎಂ ಕಾರ್ಯಾಲಯ ತಿಳಿಸಿದೆ.
ಇನ್ನು ಈಗಾಗಲೇ ದೆಹಲಿ ತಲುಪಿರುವ ಡಿಕೆ ಶಿವಕುಮಾರ್ ಅವರು ನೂತನ ಸಂಸದೆ ಪ್ರಿಯಾಂಕಾ ಗಾಂಧಿ ಅವರನ್ನು ಭೇಟಿ ಮಾಡಿ ಶುಭಕೋರಿದ್ದಾರೆ. ಶುಕ್ರವಾರ ಸಿಎಂ ಹಾಗೂ ಡಿಸಿಎಂ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ.
ಇನ್ನು ರಾಜ್ಯದಲ್ಲಿ ಸಂಪುಟ ಪುನಾರಚನೆ ಚರ್ಚೆಗಳು ನಡೆಯುತ್ತಿದೆ. ಈ ಬಗ್ಗೆ ಸ್ವತಃ ಡಿಕೆಶಿ ಸುಳಿವನ್ನೂ ನೀಡಿದ್ದಾರೆ. ಕೆಲವು ಸಚಿವರು ತ್ಯಾಗ ಮಾಡಬೇಕಾದ ಸಂದರ್ಭ ಬರಬಹುದು ಎಂಬ ಅರ್ಥದಲ್ಲೂ ಹೇಳಿಕೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ದೆಹಲಿ ಭೇಟಿಯ ಸಂದರ್ಭದಲ್ಲಿ ವರಿಷ್ಠರಿಗೆ ಈ ವಿಚಾರವನ್ನು ಗಮನಕ್ಕೆ ತರುವ ಸಾಧ್ಯತೆ ಇದೆ.