ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ಲೋಕಸೇವಾ ಆಯೋಗವು ಡಿಸೆಂಬರ್ 7 ಮತ್ತು 8ರಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸುತ್ತಿದೆ. ಪರೀಕ್ಷಾ ಸಮಯದಲ್ಲಿ ನಕಲು ಮಾಡುವುದು, ಪರೀಕ್ಷಾರ್ಥಿಗಳ ಬದಲು ಬೇರೆಯವರು ಪರೀಕ್ಷೆಗೆ ಹಾಜರಾಗುವುದು ಮುಂತಾದ ಅವ್ಯವಹಾರ ತಡೆಗಟ್ಟಲು ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಶಿಸ್ತು ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜಿಲ್ಲೆಯ 23 ಪರೀಕ್ಷಾ ಕೇಂದ್ರಗಳಲ್ಲಿ ಡಿಸೆಂಬರ್ 7ರಂದು ಮಧ್ಯಾಹ್ನ 2 ಗಂಟೆಯಿಂದ 4 ಗಂಟೆಯವರೆಗೆ ಜರುಗುವ ಪರೀಕ್ಷಾ ಕೇಂದ್ರ ಹಾಗೂ ಡಿಸೆಂಬರ್ 8ರಂದು ಬೆಳಿಗ್ಗೆ 10ರಿಂದ 11.30ವರೆಗೆ ಹಾಗೂ ಮಧ್ಯಾಹ್ನ 2ರಿಂದ 4ರವರೆಗೆ ಜರುಗುವ ಪರೀಕ್ಷೆಗಳ ೨೬ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವನ್ನಾಗಿ ಘೋಷಿಸಿ, ಕೆಳಕಂಡ ನಿರ್ಬಂಧನೆಗಳೊAದಿಗೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ.
ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಹೊರತುಪಡಿಸಿ ಇತರ ಯಾವುದೇ ವ್ಯಕ್ತಿ ಅಥವಾ ಐದು ಐದಕ್ಕಿಂತ ಹೆಚ್ಚು ಜನರು ಗುಂಪು ಕೂಡುವುದು, ಅಥವಾ ವ್ಯಕ್ತಿಗಳ ಗುಂಪುಗಳ ಪ್ರವೇಶವನ್ನು ಹಾಗೂ ಅನಧಿಕೃತ ವ್ಯಕ್ತಿಗಳಿಗೆ ಪರೀಕ್ಷಾ ಕೇಂದ್ರಗಳ ಪ್ರವೇಶವನ್ನು ನಿರ್ಬಂಧಿಸಿದೆ. ಈ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಝರಾಕ್ಸ್ ಅಂಗಡಿ, ಸೈಬರ್ ಸೆಂಟರ್, ಬುಕ್ಸ್ಟಾಲ್, ಫೋಟೋ ಕಾಪಿಯರ್ಗಳನ್ನು ಬಂದ್ ಮಾಡಲು ಆದೇಶಿಸಿದೆ. ಈ ಪ್ರದೇಶ ವ್ಯಾಪ್ತಿಯಲ್ಲಿ ಪರೀಕ್ಷೆಗಳು ನಡೆಯುವ ಸಮಯದಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿರ್ಬಂಧಿಸಿದೆ.
ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಆಗಮಿಸುವ ಸಮಯ ಮತ್ತು ಹೊರಹೋಗುವ ಸಮಯದಲ್ಲಿ ಮಾತ್ರ ಚಿತ್ರೀಕರಿಸಲು ಮಾಧ್ಯಮದವರಿಗೆ ಅವಕಾಶವಿದ್ದು, ಪರೀಕ್ಷಾ ಗೌಪ್ಯತೆ ದೃಷ್ಟಿಯಿಂದ ಪರೀಕ್ಷಾ ಕೊಠಡಿಗಳಲ್ಲಿ ಪ್ರವೇಶ, ಚಿತ್ರೀಕರಣ ಇತ್ಯಾದಿಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಗುರುತು ಪತ್ತೆಹಚ್ಚಲು ಸಾಧ್ಯವಾಗದ ರೀತಿಯಲ್ಲಿ ವಸ್ತ್ರ ಧರಿಸಿ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದಲ್ಲಿ ಪ್ರಿಸ್ಕಿಂಗ್ ನಡೆಸುವ ಸಿಬ್ಬಂದಿಯೊಂದಿಗೆ ಮತ್ತು ಪರೀಕ್ರಾ ಕೊಠಡಿಯ ಸಂವೀಕ್ಷಕರೊಂದಿಗೆ ಸಹಕರಿಸಿ ತಪಾಸಣೆಗೊಳಗಾಗುವುದು ಕಡ್ಡಾಯವಾಗಿರುತ್ತದೆ.
ಪರೀಕ್ಷೆಗೆ ಹಾಜರಾಗುವ ಎಲ್ಲಾ ಅಭ್ಯರ್ಥಿಗಳು ಆಯೋಗವು ನಡೆಸುವ ಹ್ಯಾಂಡ್ ಹೆಲ್ಡ್ ಮೆಟಲ್ ಡಿಟೆಕ್ಟರ್ ತಪಾಸಣೆಗೆ ಒಳಗಾಗುವುದು ಕಡ್ಡಾಯ. ಮೆಟಲ್ ವಾಟರ್ ಬಾಟಲ್ಸ್ ಅಥವಾ ನಾನ್ ಟ್ರಾನ್ಸಪರಂಟ್ ವಾಟರ್ ಬಾಟಲ್ಗಳನ್ನು ಪರೀಕ್ಷಾ ಕೊಠಡಿಯೊಳಗೆ ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. ಮೊಬೈಲ್/ ಸೆಲ್ಯೂಲಾರ್ ಫೋನ್, ಟ್ಯಾಬ್ಲೆಟ್, ಪೆನ್ ಡ್ರೈವ್, ಬ್ಲೂ ಟೂತ್ ಡಿವೈಸ್, ಸ್ಮಾರ್ಟ್ ವಾಚ್, ಕ್ಯಾಲ್ಕುಲೇಟರ್ ಮತ್ತು ಇತರೆ ಯಾವುದೇ ರೀತಿಯ ಎಲೆಕ್ಟ್ರಾನಿಕ್ ಉಪಕರಣಗಳು ಅಥವಾ ಲಾಗ್ ಟೇಬಲ್ಸ್, ಕೈಚೀಲ, ಪರ್ಸ್, ನೋಟುಗಳು, ಚಾರ್ಟ್, ಬಿಡಿ ಹಾಳೆಗಳು ಅಥವಾ ರೆಕಾರ್ಡಿಂಗ್ ವಸ್ತುಗಳನ್ನೂ ಸೇರಿದಂತೆ ಇನ್ನಿತರ ಯಾವುದೇ ರೀತಿಯ ಉಪಕರಣಗಳನ್ನು ಪರೀಕ್ಷಾ ಕೇಂದ್ರದೊಳಗೆ ಕೊಂಡೊಯ್ಯುವುದನ್ನು ನಿಷೇಧಿಸಲಾಗಿದೆ.
ಕರ್ನಾಟಕ ಲೋಕಸೇವಾ ಆಯೋಗವು ನಿಗದಿಪಡಿಸಿರುವ ಸೂಚನೆಗಳನ್ನು ಸಂಬಂಧಪಟ್ಟವರು ಪರೀಕ್ಷಾ ಕೇಂದ್ರದಲ್ಲಿ ಕಡ್ಡಾಯವಾಗಿ ಪಾಲಿಸತಕ್ಕದ್ದು ಎಂದು ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ತಿಳಿಸಿದ್ದಾರೆ.



