ನಾನು ಎಸ್.ಎಂ. ಕೃಷ್ಣ ಅವರ ಅಭಿಮಾನಿ: ಮುಖ್ಯಮಂತ್ರಿ ಸಿದ್ದರಾಮಯ್ಯ

0
Spread the love

ವಿಜಯಸಾಕ್ಷಿ ಸುದ್ದಿ, ಬೆಳಗಾವಿ-ಸುವರ್ಣಸೌಧ: ತಾವು ವಿದ್ಯಾರ್ಥಿಯಾಗಿದ್ದ ಸಂದರ್ಭದಲ್ಲಿ ಎಸ್.ಎಂ. ಕೃಷ್ಣ ಅವರ ಅಭಿಮಾನಿಯಾಗಿದ್ದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

Advertisement

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಅಧಿವೇಶನದ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ನಿಧನಕ್ಕೆ ಸಂತಾಪ ಸೂಚಿಸಿ ಅವರು ಮಾತನಾಡಿದರು.

1968ರಲ್ಲಿ ಲೋಕಸಭಾ ಸ್ಥಾನಕ್ಕೆ ಪ್ರಜಾ ಸೋಷಿಯಲಿಸ್ಟ್ ಪಾರ್ಟಿಯಿಂದ ಎಸ್.ಎಂ.ಕೃಷ್ಣ ಅವರು ಸ್ಪರ್ಧಿಸಿದ್ದರು. ಇವರನ್ನು ಬೆಂಬಲಿಸಿ ಮಂಡ್ಯ ವಿದ್ಯಾರ್ಥಿ ಬಳಗದಿಂದ ಮೈಸೂರಿನ ಟೌನ್ ಹಾಲ್‌ನಲ್ಲಿ ಸಭೆ ಕರೆಯಲಾಗಿತ್ತು. ಈ ಸಭೆಯಲ್ಲಿ ಅವರನ್ನು ಬೆಂಬಲಿಸಿದ್ದೆ. ನಂತರ ಲೋಹಿಯಾ ಅವರ ಸಮಾಜವಾದಿ ಪಕ್ಷ ಸೇರ್ಪಡೆಯಾದೆ. ಎಸ್.ಎಂ. ಕೃಷ್ಣ ಅವರು, 1962ರಲ್ಲೇ ಸ್ವತಂತ್ರವಾಗಿ ವಿಧಾನಸಭೆಗೆ ಸ್ಪರ್ಧಿಸಿದ್ದರು.

2005ರಲ್ಲಿ ಎಸ್.ಎಂ. ಕೃಷ್ಣ ಅವರು ಮಹಾರಾಷ್ಟ್ರದ ರಾಜ್ಯಪಾಲರಾಗಿದ್ದಾಗ ಮುಂಬೈನಲ್ಲಿ ಭೇಟಿಯಾಗಿ ಕಾಂಗ್ರೆಸ್ ಸೇರುವ ತೀರ್ಮಾನವನ್ನು ಅವರಿಗೆ ತಿಳಿಸಿದೆ. ಅವರು ನನ್ನ ತೀರ್ಮಾನವನ್ನು ಸ್ವಾಗತಿಸಿದ್ದರು. ಒಳ್ಳೆ ಸಂಸದೀಯ ಪಟು, ಎಲ್ಲರನ್ನೂ ಗೌರವದಿಂದ ಕಾಣುತ್ತಿದ್ದರು. ಯಾವತ್ತೂ ದ್ವೇಷದ ರಾಜಕಾರಣ ಮಾಡಿದವರಲ್ಲ. ಸಿಂಗಾಪುರದಂತೆ ಬೆಂಗಳೂರನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಏರಿಸುವ ಕನಸು ಹೊಂದಿದ್ದರು. ಬೆಂಗಳೂರಿಗೆ ಸಿಲಿಕಾನ್ ವ್ಯಾಲಿ ಆಫ್ ಇಂಡಿಯಾ ಎನ್ನುವ ಹೆಗ್ಗಳಿಕೆ ಬರಲು ಎಸ್.ಎಂ. ಕೃಷ್ಣ ಅವರ ಕೊಡುಗೆ ಅಪಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಮರಿಸಿದರು.


Spread the love

LEAVE A REPLY

Please enter your comment!
Please enter your name here