ಬಳ್ಳಾರಿ: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಐದು ಬಾಣಂತಿಯರು ಮೃತಪಟ್ಟಿರುವ ಘಟನೆ ಕರ್ನಾಟಕದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಇದೀಗ ಬಾಣಂತಿಯರ ಸಾವಿಗೆ IV ರಿಂಗರ್ ಲ್ಯಾಕ್ಟೇಟ್ ದ್ರಾವಣ ಮಾತ್ರ ಕಾರಣವಲ್ಲ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ಹೇಳಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಾಣಂತಿಯರ ಸಾವಿಗೆ IV ರಿಂಗರ್ ಲ್ಯಾಕ್ಟೇಟ್ ದ್ರಾವಣ ಮಾತ್ರ ಕಾರಣವಲ್ಲ. ಹೆರಿಗೆಯಾದ ಶಸ್ತ್ರಚಿಕಿತ್ಸಾ ಕೊಠಡಿ ಕೂಡ ಕಾರಣವಾಗಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.
ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿ ಶಸ್ತ್ರಚಿಕಿತ್ಸೆಯಾದ ಬಳಿಕ ನಂಜು, ಬ್ಯಾಕ್ಟೀರಿಯಾದಿಂದ ಇನ್ಫೆಕ್ಷನ್ ಆಗುವ ಸಾಧ್ಯತೆ ಇರುತ್ತೆ. ಹೀಗಾಗಿ, ಶಸ್ತ್ರಚಿಕಿತ್ಸಾ ಕೊಠಡಿಯ ಗಾಳಿ, ಗೋಡೆ, ಟೇಬಲ್ ಇಡೀ ಹರಿಗೆ ಸ್ವ್ಯಾಬ್ ಸ್ಯಾಂಪಲ್ ವರದಿ ಬೇಕಿದೆ. ಶಸ್ತ್ರಚಿಕಿತ್ಸಾ ಕೊಠಡಿಯಿಂದಲೂ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ. ಸ್ವಚ್ಛತೆ ಇಲ್ಲದಿದ್ದರೆ ಇನ್ಫೆಕ್ಷನ್ ಆಗಿ ಬಾಣಂತಿಯರು ಸಾವನ್ನಪ್ಪುವ ಸಾಧ್ಯತೆ ಇರುತ್ತದೆ. ಹೀಗಾಗಿ, ಅದರ ವರದಿ ಬೇಕು ಅಂತ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.