ಶಿವಮೊಗ್ಗ: ರಾಜ್ಯದಲ್ಲಿ ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ಬೆಳಕಿಗೆ ಬಂದ ಬಳಿಕ ರಾಜ್ಯದ ಹಲವೆಡೆ ನಿರಂತರವಾಗಿ ಪ್ರಕರಣಗಳು ವರದಿಯಾಗುತ್ತಿವೆ. ಕೆಲ ದಿನಗಳ ಹಿಂದೆ ಕಲಬುರಗಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಬಾಣಂತಿಯರು ಪ್ರಾಣ ಕಳೆದುಕೊಂಡಿದ್ದಾರೆ.
ಕಳೆದ ನಾಲ್ಕು ದಿನಗಳ ಹಿಂದೆಯಷ್ಟೇ ಬೆಳಗಾವಿ ಜಿಲ್ಲೆಯಲ್ಲಿಯೇ ಬಾಣಂತಿಯೊಬ್ಬಳು ಮೃತಪಟ್ಟ ಬಗ್ಗೆ ವರದಿಯಾಗಿತ್ತು. ಇದೀಗ ಮತ್ತೋರ್ವ ಬಾಣಂತಿ ಮಹಿಳೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.ದಾವಣಗೆರೆ ಜಿಲ್ಲೆಯ ಹರಿಹರ ಮೂಲದ ಕವಿತಾ ಶುಕ್ರವಾರ ಮೃತಪಟ್ಟಿದ್ದಾರೆ. ಕವಿತಾ 2 ದಿನದ ಹಿಂದೆ ಹೆರಿಗೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಶುಕ್ರವಾರ ಬೆಳಗ್ಗೆ 8ಕ್ಕೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು.
ಹೆರಿಗೆ ಬಳಿಕ ಬಾಣಂತಿ ಕವಿತಾಗೆ ದಿಢೀರ್ ರಕ್ತ ಹೆಪ್ಪುಗಟ್ಟಿತ್ತು. ರಕ್ತ ಹೆಪ್ಪುಗಟ್ಟಿದ್ದರಿಂದ ಬಾಣಂತಿ ಸಾವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಬಾಣಂತಿಯರ ಮರಣ ಮತ್ತಷ್ಟು ಹೆಚ್ಚಾದಂತಾಗಿದೆ. ಬಾಣಂತಿ ಸಾವಿನ ಕುರಿತು ಕುಟುಂಬಸ್ಥರು ಈವರೆಗೆ ದೂರು ನೀಡಿಲ್ಲ ಎನ್ನಲಾಗಿದೆ. ಸದ್ಯ ಕವಿತಾ ಮಗು ಆರೋಗ್ಯವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.