ಕನ್ನಡದ ಒಲವಿನ ಉಡುಗೊರೆ ಕೊಡಲೇನು, ‘ಹಿಂದೂಸ್ಥಾನವು ಎಂದೂ ಮರೆಯದ, ‘ಮಂದಾರ ಪುಷ್ಪವು ನೀನು ‘ಕಾಲ ಮತ್ತೊಮ್ಮೆ ನಮಗಾಗಿ ಬಂತು ಸೇರಿದಂತೆ ಅನೇಕ ಗೀತೆಗಳಿಗೆ ಧ್ವನಿಯಾಗಿದ್ದ ಖ್ಯಾತ ಗಾಯಕ ಪಿ. ಜಯಚಂದ್ರನ್ (80) ನಿಧನರಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಮಲಯಾಳಂ, ತಮಿಳು, ತೆಲುಗು, ಕನ್ನಡ ಮತ್ತು ಹಿಂದಿ ಭಾಷೆಗಳಲ್ಲಿ 16,000 ಕ್ಕೂ ಹೆಚ್ಚು ಹಾಡುಗಳಿಗೆ ಜಯಚಂದ್ರನ್ ಧ್ವನಿ ನೀಡಿದ್ದರು. ಇವರಿಗೆ ಪ್ರತಿಷ್ಠಿತ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ, ಐದು ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಸಂದಿವೆ. ಕೇರಳ ಸರ್ಕಾರದಿಂದ ಜೆ.ಸಿ. ಡೇನಿಯಲ್ ಪ್ರಶಸ್ತಿ ಮತ್ತು ತಮಿಳುನಾಡು ಸರ್ಕಾರದಿಂದ ಕಲೈಮಾಮಣಿ ಪ್ರಶಸ್ತಿ ಕೂಡ ನೀಡಲಾಗಿದೆ.
1944ರ ಮಾರ್ಚ್ 3ರಂದು ಎರ್ನಾಕುಲಂನಲ್ಲಿ ಜನಿಸಿದ ಜಯಚಂದ್ರನ್ ಅವರು, ಪತ್ನಿ ಲಲಿತಾ, ಮಗಳು ಲಕ್ಷ್ಮಿ ಮತ್ತು ಮಗ ದೀನನಾಥನ್ ಅವರನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಚಿತ್ರರಂಗ ಕಂಬನಿ ಮಿಡಿದಿದೆ.
ಇಳಯರಾಜ, ಎ.ಆರ್. ರೆಹಮಾನ್, ಎಂಎಂ ಕೀರವಾಣಿ, ವಿಜಯ ಭಾಸ್ಕರ್, ಎಂ. ರಂಗ ರಾವ್ ಮುಂತಾದ ಲೆಜೆಂಡರಿ ಸಂಗೀತ ನಿರ್ದೇಶಕರ ಜೊತೆಗೆ ಪಿ. ಜಯಚಂದ್ರನ್ ಅವರು ಕೆಲಸ ಮಾಡಿದ್ದರು.



