ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಮನೆಯೇ ಮೊದಲ ಪಾಠಶಾಲೆ, ಜನನಿ ತಾನೆ ಮೊದಲ ಗುರುವು ಎಂದು ಹಿರಿಯರು ಹೇಳಿದ್ದಾರೆ. ಅವರು ಹೇಳಿದ ಮಾತು ಅಕ್ಷರಶಃ ನಿಜ. ಮಕ್ಕಳಿಗೆ ಮನೆಯಿಂದಲೇ ಸಂಸ್ಕಾರ ಮತ್ತು ಶಿಕ್ಷಣ ನೀಡುವ ಕೆಲಸವಾಗಬೇಕು. ಅಂದಾಗಲೇ ಮಕ್ಕಳು ಸಂಸ್ಕಾರಯುತವಾಗಿ ಬೆಳೆಯಲು ಸಾಧ್ಯ ಎಂದು ಶ್ರೀ ಮುಪ್ಪಿನ ಬಸವಲಿಂಗ ಮಹಾಸ್ವಾಮಿಗಳವರು ಹೇಳಿದರು.
ಪಟ್ಟಣದ ಶ್ರೀ ಬಸವೇಶ್ವರ ಸಿಬಿಎಸ್ಸಿ ಶಾಲೆಯ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು.
ಮನೆಯ ವಾತಾವರಣವು ಮಕ್ಕಳ ಕಲಿಕೆಯ ಮೇಲೆ ತುಂಬಾ ಪ್ರಭಾವವನ್ನು ಬೀರುತ್ತದೆ. ಪೋಷಕರು ಮನೆಯಲ್ಲಿ ಮಕ್ಕಳ ನಡೆ-ನುಡಿಗಳನ್ನು ಗಮನಿಸಿ ಅವರು ಯಾವುದರಲ್ಲಿ ತೀವ್ರ ಆಸಕ್ತಿ ಹೊಂದಿದ್ದಾರೆ ಎಂಬುದನ್ನು ತಿಳಿದಕೊಂಡು ಅವರನ್ನು ಪ್ರೋತ್ಸಾಹಿಸಬೇಕು. ನಮ್ಮ ಸಂಸ್ಥೆಯಲ್ಲಿ ಕಲಿತ ಮಕ್ಕಳು ಈಗಾಗಲೇ ದೊಡ್ಡ ದೊಡ್ಡ ಹುದ್ದೆಗಳಲ್ಲಿದ್ದು ಸಮಾಜದ ಸೇವೆಯನ್ನು ಮಾಡುತ್ತಿದ್ದಾರೆ. ಶಿಕ್ಷಕರೂ ಸಹ ಅವರ ಪ್ರತಿಭೆಯನ್ನು ಗುರುತಿಸಿ ಆ ದಿಶೆಯಲ್ಲಿ ಅವರಿಗೆ ಮಾರ್ಗದರ್ಶನ ಮಾಡಬೇಕಾದುದು ಅವಶ್ಯಕವಿದೆ. ಇದಕ್ಕೆಲ್ಲ ಗುರು ಅನ್ನದಾನೇಶ್ವರರ ಆಶೀರ್ವಾದವೇ ಕಾರಣ ಎಂದು ಶ್ರೀಗಳು ತಿಳಿಸಿದರು.
ಪ್ರಾಚಾರ್ಯ ವೈ.ಸಿ. ಪಾಟೀಲ ಮಾತನಾಡಿ, ಶಾಲಾ ವಾತಾವರಣವು ಮಕ್ಕಳಿಗೆ ಪ್ರೋತ್ಸಾಹದಾಯಕವಾಗಿರಬೇಕು. ಪ್ರತಿಯೊಬ್ಬ ಶಿಕ್ಷಕರೂ ಹಸನ್ಮುಖಿಗಳಾಗಿ ವಿದ್ಯಾರ್ಥಿಗಳ ಮನ ಗೆಲ್ಲುವಂತೆ ಪಾಠ ಮಾಡಬೇಕು. ಪ್ರೀತಿಗೆ ಮಕ್ಕಳು ತಲೆ ಬಾಗುತ್ತಾರೆ ಮತ್ತು ಅಂತಹ ಶಿಕ್ಷಕರ ಮಾತನ್ನು ಕೇಳುತ್ತಾರೆ. ಶಿಕ್ಷಕರು ತಮ್ಮ ಜವಾಬ್ದಾರಿಗಳನ್ನು ಸರಿಯಾಗಿ ನಿರ್ವಹಿಸಬೇಕೆಂದರು.
ಶ್ರೀ ಬಸವೇಶ್ವರ ಕನ್ನಡ ಮಾಧ್ಯಮ ಶಾಲೆಯ ಚೇರಮನ್ ಡಾ. ಜಿ.ಕೆ. ಕಾಳೆ ಸಭೆಯನ್ನುದ್ದೇಶಿಸಿ ಮಾತನಾಡಿದರು. ಕಳೆದ ವರ್ಷದ ಎಸ್.ಎಸ್.ಎಲ್.ಸಿಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ವೇದಿಕೆಯ ಮೇಲೆ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ರವೀಂದ್ರನಾಥ ದೊಡ್ಡಮೇಟಿ, ಆಡಳಿತಾಧಿಕಾರಿ ವಿ.ಬಿ. ಸೋಮನಕಟ್ಟಿಮಠ, ಮಲ್ಲಿಕಾರ್ಜುನಪ್ಪ ಮೆಣಸಿಗಿ, ಪ್ರಾಚಾರ್ಯ ಬಿ.ಎಚ್. ಬಂಡಿಹಾಳ ಇನ್ನಿತರರು ಉಪಸ್ಥಿತರಿದ್ದರು.